ಕನ್ನಡಪ್ರಭ ವಾರ್ತೆ ನಾಗಮಂಗಲ

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನ ಉಳ್ಳ ಸಿ-ಆರ್ಮ್ ಉಪಕರಣ ಅಳವಡಿಸಲಾಗಿದೆ. ಇದರಿಂದ ಮೂಳೆ, ಕೀಲು, ಹೃದಯನಾಳ ಸೇರಿದಂತೆ ತುರ್ತು ಶಸ್ತ್ರ ಚಿಕಿತ್ಸೆಗೆ ಒಳಪಡುವ ಜನರಿಗೆ ಪ್ರಯೋಜನವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಿರುವ ಸಿ-ಆರ್ಮ್ ಯಂತ್ರ ಉದ್ಘಾಟಿಸಿ ಮಾತನಾಡಿ, ಸಿ-ಆರ್ಮ್ ಯಂತ್ರವು ವೈದ್ಯಕೀಯ ಮತ್ತು ಶಸ್ತ್ರ ಚಿಕಿತ್ಸಾ ವಿಧಾನಗಳ ವೇಳೆ ನೈಜ ಸಮಯದ ಹೆಚ್ಚಿನ ಸ್ಪಷ್ಟತೆಯ ದೃಶ್ಯಗಳನ್ನು ಉತ್ಪಾದಿಸಲು ಎಕ್ಸರೇ ತಂತ್ರಜ್ಞಾನ ಬಳಸುವ ರೋಗ ನಿರ್ಣಯದ ಚಿತ್ರಣ ಸಾಧನವಾಗಿದೆ ಎಂದರು.

ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಸಿ-ಆರ್ಮ್ ಯಂತ್ರ ಅಳವಡಿಸಲಾಗಿದೆ. ಮೂಳೆ ಜೋಡಣೆ, ಸ್ಟಂಟ್ ಅಳವಡಿಕೆ, ಪಂಸ್ ಮೇಕರ್ ಅಳವಡಿಕೆಗೆ ಈ ಯಂತ್ರ ಸಹಾಯ ಮಾಡುತ್ತದೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೆಚ್ಚು ಹೊರೆಯಾಗದಂತೆ ಮೂಳೆ, ಹೃದಯನಾಳ ಹಾಗೂ ತುರ್ತು ಶಸ್ತ್ರ ಚಿಕಿತ್ಸೆಗಳನ್ನು ಮಾಡಬಹುದು ಎಂದರು.

ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸ್ಕ್ಯಾನಿಂಗ್ ಯಂತ್ರವನ್ನೂ ಸಹ ಅಳವಡಿಸಲಾಗಿದೆ. ಇದರಿಂದ ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆಗೆ ಹೆಚ್ಚು ಅನುಕೂಲವಾಗುತ್ತದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇಲ್ಲ. ಆಸ್ಪತ್ರೆಗೆ ಅಗತ್ಯವಿರುವ ಮಾತ್ರೆ ಮತ್ತು ಔಷಧಿಗಳ ಸಮರ್ಪಕ ಪೂರೈಕೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.

ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಕಾಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ್, ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಆದಿತ್ಯ ಸೇರಿದಂತೆ ಆಸ್ಪತ್ರೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.