ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತಂದು ಜನರಲ್ಲಿ ಜಾಗೃತಿ ಮೂಡಿಸುವ ಪತ್ರಕರ್ತರ ಸೇವೆಯೂ ಶ್ಲಾಘನೀಯವಾಗಿದೆ.

ಕುಂದಗೋಳ:

ಮಕ್ಕಳಿಗೆ ದೇಶದ ಇತಿಹಾಸ, ವೀರ ಯೋಧರ ತ್ಯಾಗ ಮತ್ತು ರಾಷ್ಟ್ರಪ್ರೇಮದ ಅರಿವು ಮೂಡಿಸಿದಾಗ ಮಾತ್ರ ಅವರು ಭವಿಷ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ವಾಗ್ಮಿ ಭಾವನಾ ಆರ್. ಗೌಡ ಹೇಳಿದರು.

ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಭಾನುವಾರ ನಿರಾಮಯ ಫೌಂಡೇಶನ್ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಮಾಜಿ ಸೈನಿಕರು, ಸಾಧಕರು, ಪತ್ರಕರ್ತರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದ ಅವರು, ಭಾಷೆ, ನಾಡು ಮತ್ತು ದೇಶಾಭಿಮಾನವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ನಿರಾಮಯ ಫೌಂಡೇಶನ್ ಸಂಸ್ಥಾಪಕ ಡಾ. ಮಲ್ಲಿಕಾರ್ಜುನ್ ಬಾಳಿಕಾಯಿ ಮಾತನಾಡಿ, ಕಳೆದ 7 ವರ್ಷಗಳಿಂದ ಫೌಂಡೇಶನ್ ವತಿಯಿಂದ ಕಾರ್ಗಿಲ್ ವಿಜಯೋತ್ಸವವನ್ನು ನಿರಂತರವಾಗಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವು ಕೇವಲ ಆಚರಣೆಗೆ ಸೀಮಿತವಾಗದೆ, ಯುವ ಸಮುದಾಯದಲ್ಲಿ ರಾಷ್ಟ್ರಪ್ರೇಮ, ಶಿಕ್ಷಣದ ಮಹತ್ವ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಪ್ರಮುಖ ವೇದಿಕೆಯಾಗಿ ರೂಪುಗೊಂಡಿದೆ ಎಂದರು.

ದೇಶದ ಗಡಿಯನ್ನು ಕಾಪಾಡುವಲ್ಲಿ ಹಾಗೂ ಕಾರ್ಗಿಲ್ ಯುದ್ಧದಲ್ಲಿ ವೀರಮರಣ ಹೊಂದಿದ ಯೋಧರ ತ್ಯಾಗವನ್ನು ಸ್ಮರಿಸುವ ಜತೆಗೆ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ತಾಲೂಕಿನ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡುವ ಉದ್ದೇಶದಿಂದ ಅವರನ್ನು ಪ್ರೋತ್ಸಾಹಿಸಲಾಗುತ್ತಿದೆ. ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತಂದು ಜನರಲ್ಲಿ ಜಾಗೃತಿ ಮೂಡಿಸುವ ಪತ್ರಕರ್ತರ ಸೇವೆಯೂ ಶ್ಲಾಘನೀಯವಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಕಲ್ಯಾಣಪುರದ ಬಸವಣ್ಣಜ್ಜನವರು ಹಾಗೂ ಮಳ್ಳೂಳ್ಳಿಯ ಶಿವಯೋಗೇಶ್ವರ ಶ್ರೀ ಮಾತನಾಡಿ, ನಿರಾಮಯ ಫೌಂಡೇಶನ್ ಯುವಕರ ಸಂಘಟನೆಯ ನಿಸ್ವಾರ್ಥ ಸಾಮಾಜಿಕ ಸೇವೆ, ರಾಷ್ಟ್ರಪ್ರೇಮ ಮತ್ತು ಶೈಕ್ಷಣಿಕ ಪ್ರೋತ್ಸಾಹದ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಸೈನಿಕರು, ಪತ್ರಕರ್ತರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರವೂ ನಡೆಯಿತು. ಮಾಜಿ ಸೈನಿಕರ ಸಂಘದ ತಾಲೂಕು ಗೌರವಾಧ್ಯಕ್ಷ ಶಿವಲಿಂಗಪ್ಪ ಹುಬ್ಬಳ್ಳಿ, ಅಧ್ಯಕ್ಷ ಎಸ್.ಬಿ. ಪಾಟೀಲ ಜುಲೇಖಾ ಅಬ್ದುಲ್ ಖಾದರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಬಸವರಾಜ ಸಿ.ಎಂ. ಸ್ವಾಗತಿಸಿದರು. ನಿರಾಮಯ ಫೌಂಡೇಶನ್ ಅಧ್ಯಕ್ಷ ಗುರು ಬನ್ನಿಕೊಪ್ಪ ನಿರೂಪಿಸಿದರು.