ಸಾರಾಂಶ
ಜೂನ್ ತಿಂಗಳಲ್ಲಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ನಿಂತ ನೀರಿನ ತಾಣಗಳು ಹೆಚ್ಚಾಗಿ ಸೊಳ್ಳೆ ಸಾಂದ್ರತೆ ಹೆಚ್ಚಾಗುವುದರೊಂದಿಗೆ ಸಾಂಕ್ರಾಮಿಕ ರೋಗಗಳು
ಬಳ್ಳಾರಿ: ಜೂನ್ ತಿಂಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಆಚರಿಸಲಾಗುತ್ತಿದ್ದು, ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಮುದಾಯ ಮತ್ತು ಇತರ ಇಲಾಖೆಗಳ ಸಮನ್ವಯದೊಂದಿಗೆ ಸೂಕ್ತ, ನಿರ್ದಿಷ್ಟ ನಿಯಂತ್ರಣಾ ಕ್ರಮ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜೂನ್ ತಿಂಗಳಲ್ಲಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ನಿಂತ ನೀರಿನ ತಾಣಗಳು ಹೆಚ್ಚಾಗಿ ಸೊಳ್ಳೆ ಸಾಂದ್ರತೆ ಹೆಚ್ಚಾಗುವುದರೊಂದಿಗೆ ಸಾಂಕ್ರಾಮಿಕ ರೋಗಗಳು (ಸೊಳ್ಳೆಯಿಂದ ಹರಡುವ) ಮಲೇರಿಯಾ, ಡೆಂಗೀ, ಚಿಕುನ್ಗುನ್ಯ ಹಾಗೂ ಇತರೆ ಖಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಇವುಗಳ ಜಾಗ್ರತೆ ಕುರಿತು ಅರಿವು ಮೂಡಿಸಬೇಕು ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಮಾತನಾಡಿ, ಮಲೇರಿಯಾ ವಿರೋಧಿ ಮಾಸಾಚರಣೆಯ ಅಂಗವಾಗಿ ಸಮುದಾಯಕ್ಕೆ ಜಾಗೃತಿ ಮೂಡಿಸಲು ಆರೋಗ್ಯ ಕೇಂದ್ರದ ಎಲ್ಲಾ ಹಂತಗಳಲ್ಲಿ ಐಇಸಿ, ಬಿಸಿಸಿ ಗುಂಪುಸಭೆ, ಕಾರ್ಯಾಗಾರ, ಮಾಧ್ಯಮಗಳ ಮುಖಾಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಮರಿಯಂಬಿ, ಡಾ.ಪೂರ್ಣಿಮಾ ಕಟ್ಟಿಮನಿ, ಡಾ.ವೀರೇಂದ್ರ, ಡಾ.ಹನುಮಂತಪ್ಪ, ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು, ವ್ಶೆದ್ಯಾಧಿಕಾರಿಗಳು, ಜಿಲ್ಲಾ ವಿಬಿಡಿಸಿ ಸಮಾಲೋಚಕ ಪ್ರತಾಪ್.ಹೆಚ್., ಜಿಲ್ಲಾ ಆರೋಗ್ಯ ಶಿಕ್ಷ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಸಿಬ್ಬಂದಿಗಳು ಹಾಜರಿದ್ದರು.