ಶ್ರೀ ಹಾಸನಾಂಬಾ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ಅಡಚರಣೆಯಾಗದಂತೆ ಅಗತ್ಯ ಸಿದ್ಧತೆಗೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಎಸ್ ಲತಾ ಕುಮಾರಿ ಸೂಚಿಸಿದರು. ದೇವಸ್ಥಾನದ ಹೊರ ಹಾಗೂ ಒಳಭಾಗಕ್ಕೆ ಪ್ರತ್ಯೇಕ ಸ್ವಚ್ಛತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು, ಶೌಚಾಲಯ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಹಾಗೂ ಶೌಚಾಲಯದ ಮುಂಭಾಗದಲ್ಲಿ ಹ್ಯಾಂಡ್ ವಾಶ್ ಬೇಸಿನ್‌ಗಳನ್ನು ತಪ್ಪದೇ ಅಳವಡಿಸಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಶ್ರೀ ಹಾಸನಾಂಬಾ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ಅಡಚರಣೆಯಾಗದಂತೆ ಅಗತ್ಯ ಸಿದ್ಧತೆಗೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಎಸ್ ಲತಾ ಕುಮಾರಿ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಹಾಸನಾಂಬೆ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ-೨೦೨೬ಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅ.೨೬ರಂದು ಹಾಸನಾಂಬೆ ದೇವಸ್ಥಾನದ ಬಾಗಿಲು ತೆರೆಯಲಿದ್ದು, ನ.೧೧ರಂದು ಬಾಗಿಲು ಮುಚ್ಚಲಾಗುತ್ತದೆ, ಕಳೆದ ವರ್ಷಕ್ಕಿಂತ ಈ ವರ್ಷ ದರ್ಶನಕ್ಕೆ ೩೦ ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದ್ದು, ಅಧಿಕಾರಿಗಳು ತಮಗೆ ವಹಿಸುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.ಎಲ್ಲಾ ಭಾಗದಲ್ಲಿಯೂ ಕಡ್ಡಾಯವಾಗಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಬೇಕು, ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೇ ಜಾತ್ರಾ ಮಹೋತ್ಸವಕ್ಕೆ ನೇಮಿಸಲಾದ ಸಮಿತಿಗಳು ಜವಾಬ್ದಾರಿಯುತವಾಗಿ ತಮ್ಮ ಕೆಲಸಗಳನ್ನು ಮಾಡಬೇಕು ಎಂದರು. ದೇವಸ್ಥಾನದ ಹೊರ ಹಾಗೂ ಒಳಭಾಗಕ್ಕೆ ಪ್ರತ್ಯೇಕ ಸ್ವಚ್ಛತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು, ಶೌಚಾಲಯ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಹಾಗೂ ಶೌಚಾಲಯದ ಮುಂಭಾಗದಲ್ಲಿ ಹ್ಯಾಂಡ್ ವಾಶ್ ಬೇಸಿನ್‌ಗಳನ್ನು ತಪ್ಪದೇ ಅಳವಡಿಸಬೇಕು ಎಂದು ತಿಳಿಸಿದರು. ದೇವಸ್ಥಾನದಲ್ಲಿ ಹೂವಿನ ಅಲಂಕಾರ ಹಾಗೂ ಆಕರ್ಷಣೀಯವಾಗಿ ಲೈಟಿಂಗ್ ಅಳವಡಿಸಬೇಕು, ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಕಡಿಮೆ ದರದಲ್ಲಿ ಪ್ಯಾಕೇಜ್ ನೀಡುವ ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು ಎಂದರು.ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್‌ ಕುಮಾರ್, ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮತ್ತು ಹಾಸನಾಂಬೆ ದೇವಾಲಯದ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್‌, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಜಂಟಿ ಕೃಷಿ ನಿರ್ದೇಶಕ ರಮೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.