ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ಮಾರ್ಗದ ಎರಡೂ ಬದಿಯಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ಮಾರ್ಗದ ಎರಡೂ ಬದಿಯಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 275 ಎಕ್ಸ್ ಪ್ರೆಸ್ ವೇ ಹಾಗೂ ಅದರ ಸರ್ವಿಸ್ ರಸ್ತೆಗಳ ಬದಿಯಲ್ಲಿ ಘನ ತ್ಯಾಜ್ಯಗಳು ಸಾಕಷ್ಟು ಕಂಡುಬರುತ್ತಿದೆ. ಇದು ವಾಹನ ಸವಾರರಿಗೆ ತೊಡಕಾಗಿ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಆದಕಾರಣ ರಸ್ತೆ ಸವಾರರ ಸುರಕ್ಷತಾ ದೃಷ್ಟಿಯಿಂದ, ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಲೇಬೇಕು, ಈ ಹೆದ್ದಾರಿಯಲ್ಲಿ ಸ್ವಚ್ಛತೆ ಕಾಪಾಡದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ವ್ಯವಸ್ಥಾಪಕರಾದ ಚಾರುಲತಾ ಅವರಿಗೆ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ 275 ಎಕ್ಸ್ ಪ್ರೆಸ್ ವೇ ರಸ್ತೆಯ ಸೇತುವೆಗಳು, ಅಂಡರ್ ಪಾಸ್‌ಗಳು, ಸರ್ವಿಸ್ ರಸ್ತೆಗಳಲ್ಲಿ ಘನತ್ಯಾಜ್ಯ ಕಂಡುಬರುತ್ತಿದೆ. ಸೂಕ್ತವಾಗಿ ತ್ಯಾಜ್ಯ ವಿಲೇವಾರಿ ಆಗುತ್ತಿಲ್ಲ. ಹೆದ್ದಾರಿಯ ಕೆಲವು ಬದಿಗಳಲ್ಲಿ ಕಬ್ಬಿಣದ ಮೆಸ್ ಬೇಲಿಯನ್ನು ಕತ್ತರಿಸಲಾಗಿದೆ. ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು, ಹೆದ್ದಾರಿಯ ವಿವಿಧಡೆ ಬಲ್ಬ್‌ಗಳು ಕಳ್ಳತನವಾಗುತ್ತಿದ್ದು, ಅವುಗಳನ್ನು ತಡೆಗಟ್ಟಲು ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಯಲ್ಲಿ ನಿಷೇಧಿತ ಸ್ಥಳ, ನೋ ಪಾರ್ಕಿಂಗ್ ನಂತಹ ಸೂಚನಾ ಫಲಕಲಗಳು ಹಾಗೂ ಅಂಡರ್ ಪಾಸ್‌ಗಳ ಹತ್ತಿರ ಸಿಗ್ನಲ್ ಬೋರ್ಡ್ ಗಳನ್ನು ಅಳವಡಿಸಿ ಪ್ರಯಾಣಿಕರಿಗೆ ಅರಿವು ಮೂಡಿಸಬೇಕು. ಅದೇ ರೀತಿ ಎಕ್ಸ್ಪ್ರೆಸ್ ವೇನ ಆಗಮನ ಹಾಗೂ ನಿರ್ಗಮನದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆಯೊಂದಿಗೆ ಸಿಸಿಟಿವಿಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದರು.

ಕುಂಬಳಗೂಡಿನಿಂದ ನಿಡಘಟ್ಟ ನಡುವೆ ಎರಡು ಹೈವೇ ಪೆಟ್ರೋಲ್ ವಾಹನಗಳು ಗಸ್ತು ತಿರುಗುತ್ತಿದ್ದು, ಗಸ್ತು ಪ್ರಾರಂಭಿಸಿದ ಸ್ಥಳದಿಂದ ವಾಪಸ್ ಅದೇ ಸ್ಥಳಕ್ಕೆ ಬರಲು ಹೆಚ್ಚಿನ ಸಮಯ ಬೇಕಾಗುತ್ತದೆ ಆದ ಕಾರಣ ಮತ್ತೆರಡು ಹೈವೇ ಪೆಟ್ರೋಲ್ ವಾಹನಗಳನ್ನು ಗಸ್ತು ತಿರುಗಲು ವ್ಯವಸ್ಥೆ ಮಾಡಬೇಕು, ರಾಷ್ಟ್ರೀಯ ಹೆದ್ದಾರಿ ಸಂಸ್ಥೆಯವರು ತಮ್ಮ ವಾಹನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಗಸ್ತು ನಿರ್ವಹಣೆ ಮಾಡಿದಲ್ಲೀ ಅಪರಾಧ ಚಟುವಟಿಕೆಗಳನ್ನು ನಿಗಾ ವಹಿಸಬಹುದಾಗಿದೆ ಎಂದವರು ತಿಳಿಸಿದರು.

ಜಿಲ್ಲಾ ಹಾಗೂ ತಾಲ್ಲೂಕುಗಳ ಮುಖ್ಯ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯಶವಂತ್ ಸೂಚಿಸಿದರು.

ಸಭೆಯಲ್ಲಿ ಡಿವೈಎಸ್ಪಿ ರಾಮಚಂದ್ರಯ್ಯ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

13ಕೆಆರ್ ಎಂಎನ್ 14.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.