Instructions, issued, formulate, attract, pilgrimsಯಾತ್ರಾರ್ಥಿಗಳ ಪ್ರವಾಸಿ ತಾಣಗಳಿಗೆ ಸೆಳೆಯುವ ಯೋಜನೆ ರೂಪಿಸಲು ಸೂಚನೆ
ಉಡುಪಿ: ಉಡುಪಿ ಜಿಲ್ಲೆಯ ಧಾರ್ಮಿಕ ತಾಣಗಳ ಜೊತೆಗೆ, ಇಲ್ಲಿನ ಪ್ರಕೃತಿ ಹಾಗೂ ಸಮುದ್ರವನ್ನು ಬಳಸಿಕೊಂಡು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ ಅಧಿಕಾರಿಗಳ ತಂಡದೊಂದಿಗೆ ಗುರುವಾರ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಹಾಗೂ ಮೂಲ ಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಪ್ರವಾಸಿಗರು ಜಿಲ್ಲೆಯಲ್ಲಿ ಹೆಚ್ಚು ದಿನ ತಂಗುವಂತೆ ಹೊಸ ಪ್ರವಾಸಿ ಆಕರ್ಷಣೆಗಳು ಮತ್ತು ಪೂರಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಅವರು ಒತ್ತಿ ಹೇಳಿದರು.ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಲಕ್ಷಾಂತರ ಭಕ್ತರು ಹಾಗೂ ಪ್ರವಾಸಿಗರನ್ನು ಜಿಲ್ಲೆಯ ಕರಾವಳಿ ಮತ್ತು ನೈಸರ್ಗಿಕ ತಾಣಗಳತ್ತ ಸೆಳೆಯುವ ರೀತಿಯಲ್ಲಿ ಯೋಜನೆ ರೂಪಿಸುವಂತೆ ಸೂಚಿಸಿದರು.ತ್ರಾಸಿ-ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಅವರು, 2-3 ತಿಂಗಳಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸೂಚಿಸಿದರು. ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆಯಾಗದಂತೆ ಪ್ರವಾಸಿಗರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.ಕೋಡಿ ಹಿನ್ನೀರು ಪ್ರದೇಶದಲ್ಲಿ ಹೌಸ್ಬೋಟ್ ಹಾಗೂ ಜಲ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ಈ ಪ್ರದೇಶದ ಪ್ರವಾಸೋದ್ಯಮ ಸಾಮರ್ಥ್ಯ ಬಳಸಿಕೊಳ್ಳುವಂತೆ ಸೂಚಿಸಿದರು.
ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ (ಕರಾವಳಿ ಪ್ರವಾಸೋದ್ಯಮ) ಸೌಮ್ಯ ಬಾಪಟ್, ಇಲಾಖೆಯ ಉಡುಪಿ ಸಹಾಯಕ ನಿರ್ದೇಶಕಿ ವಿದ್ಯಾವತಿ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿ ಹೇಮಲತಾ ಹಾಗೂ ಎಂಜಿನಿಯರ್ಗಳು ಉಪಸ್ಥಿತರಿದ್ದರು. ಹೊರಗಿನಿಂದ ಬರುವ ಪ್ರವಾಸಿಗರ ವಾಸ್ತವ್ಯ ಅವಧಿ ಹೆಚ್ಚಿಸುವ ಮೂಲಕ ಸ್ಥಳೀಯ ಹೋಟೆಲ್, ಸಾರಿಗೆ, ಆಹಾರ, ಪ್ರವಾಸಿ ಸೇವೆಗಳು ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಿ, ಸ್ಥಳೀಯ ಯುವಕರಿಗೆ ಉದ್ಯೋಗ ಮತ್ತು ಉದ್ಯಮಾವಕಾಶ ಸೃಷ್ಟಿಸುವುದು ಇಲಾಖೆಯ ಪ್ರಮುಖ ಉದ್ದೇಶವಾಗಿದೆ. - ಡಾ. ರಾಮ್ಪ್ರಸಾತ್ ಮನೋಹರ್, ರಾಜ್ಯ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ