ಪರಿಶಿಷ್ಟ ಜಾತಿಯ ಸಮೀಕ್ಷೆ ವ್ಯವಸ್ಥಿತವಾಗಿ ಕೈಗೊಳ್ಳಲು ಸೂಚನೆ: ಡಾ.ಹಂಪಣ್ಣ ಸಜ್ಜನ್

| Published : Apr 29 2025, 12:51 AM IST

ಪರಿಶಿಷ್ಟ ಜಾತಿಯ ಸಮೀಕ್ಷೆ ವ್ಯವಸ್ಥಿತವಾಗಿ ಕೈಗೊಳ್ಳಲು ಸೂಚನೆ: ಡಾ.ಹಂಪಣ್ಣ ಸಜ್ಜನ್
Share this Article
  • FB
  • TW
  • Linkdin
  • Email

ಸಾರಾಂಶ

ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಕೈಗೊಳ್ಳಲು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ತರಬೇತಿ ಕಾರ್ಯಾಗಾರ । ಸಹಾಯಕ ಆಯುಕ್ತ ಸೂಚನೆ । ಎಸ್‌ಸಿ ಒಳಮೀಸಲಾತಿ ಕುರಿತು ಮಾಹಿತಿ

ಕನ್ನಡಪ್ರಭ ವಾರ್ತೆ ಯಾದಗಿರಿ

ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಕೈಗೊಳ್ಳಲು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ನ್ಯಾ.ಡಾ.ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ವರದಿಯ ಹಿನ್ನೆಲೆ ಪರಿಶಿಷ್ಟ ಜಾತಿ ಜನಾಂಗದ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಕೈಗೊಳ್ಳಲು ಸರ್ಕಾರ ನಿರ್ದೇಶಿಸಿದ್ದು, ವ್ಯವಸ್ಥಿತವಾಗಿ ಯಾವುದೇ ಕುಟುಂಬ ಈ ಸಮೀಕ್ಷೆಯಿಂದ ವಂಚಿತರಾಗ ದಂತೆ ಎಚ್ಚರಿಕೆಯೊಂದಿಗೆ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮೇ 9 ರಿಂದ ಮೇ 17ರ ವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ವಿವೇಚನಾಯುತ ನಡೆ- ನುಡಿಯೊಂದಿಗೆ ಭೇಟಿಯ ಉದ್ದೇಶವನ್ನು ಮನವರಿಕೆ ಮಾಡಿ ಮೊಬೈಲ್ ಆಪ್ ನಲ್ಲಿಯೇ ಮಾಹಿತಿಯನ್ನು ಬ್ಲಾಕ್ ಆಧಾರದಲ್ಲಿ ಪ್ರತಿ ಬ್ಲಾಕ್ನಲ್ಲಿ ತಲಾ 300 ಮನೆಗಳ ಕುಟುಂಬಗಳ ಮಾಹಿತಿ ಸಂಗ್ರಹಿಸಬೇಕು. ನಂತರ ಮೇ 19 ರಿಂದ ಮೇ 21 ರವರೆಗೆ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದ ಕುಟುಂಬಗಳನ್ನು ಗುರುತಿಸಿ ಮಾಹಿತಿ ಸಂಗ್ರಹಿಸಬೇಕು. ಇದರಲ್ಲಿಯೂ ಬಿಟ್ಟು ಹೋದ ಕುಟುಂಬಗಳಿದ್ದಲ್ಲಿ ಆನ್ಲೈನ್ ಮೂಲಕ ಸಂಬಂಧಪಟ್ಟ ಜನಾಂಗದವರು ತಾವಾಗಿಯೇ ಸಮೀಕ್ಷೆಯಡಿ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಕಾರಣ ಸಮೀಕ್ಷೆದಾರರು ಮತ್ತು ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಸಮೀಕ್ಷೆಯ ಮೇಲ್ವಿಚಾರಣೆಗಾಗಿ, ರಾಜ್ಯ ಮಟ್ಟದಲ್ಲಿ ಸಮಿತಿ ಇದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಇದೆ. ಜಿ.ಪಂ. ಸಿಇಓ ಉಪಾಧ್ಯಕ್ಷರಾಗಿದ್ದಾರೆ. ತಾಲೂಕಾ ಮಟ್ಟದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯ ಸಮಿತಿ ಮೇಲ್ವಿಚಾರಣೆ ಮಾಡಲಿದೆ. ಪ್ರತಿ ತಾಲೂಕಿಗೆ ತಲಾ 5 ಮಾಸ್ಟರ್ ಟ್ರೈನರ್ ಆಯ್ಕೆ ಮಾಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

ರಾಜ್ಯಮಟ್ಟದಲ್ಲಿ ತರಬೇತಿ ಪಡೆದ ಮಾಸ್ಟರ್ ಟ್ರೈನರ್ ರಾಘವೇಂದ್ರ, ಗುರು ಪಾಟೀಲ್ ಮತ್ತು ಶ್ರೀನಿವಾಸ್ ಅವರ ಮೂಲಕ ಇಂದು ತರಬೇತಿ ನೀಡಿದ್ದು, ರಾಜ್ಯದಲ್ಲಿ ಗುರುತಿಸಿದ 101 ಪರಿಶಿಷ್ಟ ಜಾತಿಗಳ ಜಣಗಣತಿ ನಡೆಯುತ್ತಿದ್ದು,ಇದರ ಅಂಗವಾಗಿ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಯಾವುದೇ ಲೋಪವಿವಿಲ್ಲದೆ ಪ.ಜಾತಿ ಜನಾಂಗದ ಸಮೀಕ್ಷೆ ಕಾರ್ಯ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ತಹಸೀಲ್ದಾರ್ ಸುರೇಶ್ ಅಂಕಲಗಿ, ಪರಿಶಿಷ್ಟ ಜಾತಿ ಕಲ್ಯಾಣಾಧಿಕಾರಿ ಸಿದ್ದಣ್ಣ, ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತರರು ಇದ್ದರು.