ಹಿರೇಕೆರೂರು ಹಾಗೂ ರಟ್ಟಿಹಳ್ಳಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.

ಹಿರೇಕೆರೂರು: ಹಿರೇಕೆರೂರು ಹಾಗೂ ರಟ್ಟಿಹಳ್ಳಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ರೈತ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರೈತರ ವಿವಿಧ ಸಮಸ್ಯೆಗಳ ಕುರಿತು ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರೈತರ ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣ ಸ್ಪಂದಿಸಿ ಅವುಗಳನ್ನು ಪರಿಹರಿಸುವ ಕಾರ್ಯವನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು. ತಾಲೂಕು ಮಟ್ಟ ಹಾಗೂ ಜಿಲ್ಲಾಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳಿಗೆ ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು. ಸರ್ಕಾರ ಹಂತದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ರೈತರು ಮಣ್ಣಿನ ಆರೋಗ್ಯ ಕಾಪಾಡಲು ಹಾಗೂ ಉತ್ತಮ ಇಳುವರಿ ಪಡೆಯಲು ಸಮತೋಲಿತ ರಸಗೊಬ್ಬರಗಳ ಬಳಕೆಯ ಮಹತ್ವ, ಮಣ್ಣಿನ ಪರೀಕ್ಷೆ ಆಧಾರಿತ ಪೋಷಕಾಂಶ ನಿರ್ವಹಣೆ ಹಾಗೂ ಯೂರಿಯಾ, ಡಿಎಪಿ, ಪೊಟ್ಯಾಷ್ ಮತ್ತು ಸಾವಯವ ಗೊಬ್ಬರಗಳ ಸಮರ್ಪಕ ಬಳಕೆಯ ಕುರಿತು ಮಾಹಿತಿ ಪಡೆದುಕೊಂಡು ಉತ್ತಮ ಇಳುವರಿ ಪಡೆದುಕೊಳ್ಳಬೇಕು ಎಂದರು.ರಾಜ್ಯ ರೈತ ಸಂಘ ಹಾವೇರಿ ಜಿಲ್ಲಾ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ರಸಗೊಬ್ಬರಗಳ ಜತೆಗೆ ಲಿಂಕ್ ಹಾಗೂ ಬೆಲೆ ನಿಯಂತ್ರಣ, ಎಫ್‌ಐಡಿ ಮುಖಾಂತರ ಗೊಬ್ಬರ ವಿತರಣೆ ನಿಯಮ ರದ್ದುಪಡಿಸುವುದು, ಮೆಕ್ಕೆಜೋಳ ಬಿತ್ತನೆ ಬೀಜಕ್ಕೆ ಏಕರೂಪದ ದರ ನಿಗದಿ, ಕಳಪೆ ಹಾಗೂ ನಕಲಿ ಬೀಜ ಮತ್ತು ರಸಗೊಬ್ಬರಗಳ ಮಾರಾಟ ತಡೆ, ಬೆಳೆ ವಿಮೆ ಪರಿಹಾರದ ತ್ವರಿತ ವಿತರಣೆ, ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ, ನೀರಾವರಿ ಸಮಸ್ಯೆಗಳ ಪರಿಹಾರ ಹಾಗೂ ರೈತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಆಗ್ರಹಿಸಿದರು. ಈ ಎಲ್ಲಾ ವಿಷಯಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಮಾರುತಿ ಅಂಗರಗಟ್ಟಿ ತಾಲೂಕಿನ ಮಳೆ, ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಬೆಳೆ ವಿಮೆ ಸ್ಥಿತಿಗತಿಯ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ರಾದ ರೇಣುಕಾ ಎಂ., ಶ್ವೇತಾ ಅಮರಾವತಿ, ರೈತ ಮುಖಂಡರಾದ ಶಂಕ್ರಗೌಡ ಶಿರಗಂಬಿ. ಪ್ರಭುಗೌಡ ಪ್ಯಾಟಿ, ಬಸನಗೌಡ ಗಂಗಪ್ಪಳವರ, ಮಲತೇಶ್ ಪೂಜಾರ, ರಾಮುನಗೌಡ ಹಾದಿಮನಿ, ಕೃಷಿ ಪರಿಕರ ಮಾರಾಟಗಾರ ಸಂಘದ ಪದಾಧಿಕಾರಿಗಳು, ಕೃಷಿಕ ಸಮಾಜದ ಪದಾಧಿಕಾರಿಗಳು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ರೈತ ಮುಖಂಡರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಇದ್ದರು.