ಹುಬ್ಬಳ್ಳಿ:
ರಾಜ್ಯದಲ್ಲಿ ಸಾಮಾಜಿಕ ಸಮಾನತೆ ತರಲು ಜಾತಿ ವ್ಯವಸ್ಥೆ ನಿರ್ಮೂಲನೆಗಾಗಿ ಸರ್ಕಾರ ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಯೋಜನೆ ಜಾರಿಗೆ ತರಲಾಗಿದೆ. ಆದರೆ, ಈ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಸ್ಸಿ, ಎಸ್ಟಿ ಸಮುದಾಯದ ಫಲಾನುಭವಿಗಳು 3 ವರ್ಷದಿಂದ ಹಣ ಬರದೇ ಪರದಾಡುತ್ತಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ದೂರಿದರು.ಅಧಿವೇಶನದಲ್ಲಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಈ ಯೋಜನೆಯು ನೇಪಥ್ಯಕ್ಕೆ ಸರಿಯುತ್ತಿದೆಯೇ ಎಂಬ ಅನುಮಾನಗಳು ಮೂಡಿವೆ ಎಂದು ತಿಳಿಸಿದರು.
ದಲಿತರ ಹಕ್ಕಿನ ಅನುದಾನ ಹಾದಿ ತಪ್ಪಿರುವ ಬಗ್ಗೆ ಪ್ರಶ್ನೆ ಎತ್ತಿರುವ ಶಾಸಕರು, ಇದರ ಬಗ್ಗೆ ಸುದೀರ್ಘ ಚರ್ಚೆ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.2023ರಿಂದ ಈ ವರೆಗೆ ವಿತರಣೆಯಲ್ಲಿ ವಿಳಂಬವಾಗಿ ಬಾಕಿ ಉಳಿದಿದೆ. ಹಾವೇರಿ ಜಿಲ್ಲೆಯಲ್ಲಿ 153 ಅರ್ಜಿಗಳ ಪೈಕಿ ಎಲ್ಲವೂ ಬಾಕಿ ಇವೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಶೂನ್ಯ ವಿಲೇವಾರಿಯಾಗಿವೆ. ಹೀಗೆ ಹಲವು ಜಿಲ್ಲೆಗಳಲ್ಲಿ ಅಂತರ್ಜಾತಿ ವಿವಾಹವಾದವರು ಪ್ರೋತ್ಸಾಹಧನಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು, ರಾಜ್ಯದಲ್ಲಿ ಮೂರು ವರ್ಷದಲ್ಲಿ 11,303 ಅರ್ಜಿಗಳನ್ನು ಪಡೆದಿದ್ದು, ಅದರಲ್ಲಿ 7836 ಅರ್ಜಿ ವಿಲೇವಾರಿ ಮಾಡಲಾಗಿದೆ. 3467 ಅರ್ಜಿಗಳಿಗೆ ಜೇಷ್ಠತೆ ಆಧಾರದ ಮೇಲೆ ಪ್ರೋತ್ಸಾಹ ಧನ ನೀಡುವ ಸಂಬಂಧ ಅಗತ್ಯ ಕ್ರಮ ವಹಿಸಲಾಗುತ್ತಿದೆ. ಒಟ್ಟು ₹ 104 ಕೋಟಿ ಪ್ರೋತ್ಸಾಹ ಧನ ನೀಡುವುದು ಬಾಕಿ ಇವೆ ಎಂದು ತಿಳಿಸಿದರು.