ಸಾರಾಂಶ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ನಿರ್ಮಿತಿ ಕೇಂದ್ರಗಳಲ್ಲಿ ಮಂಡ್ಯ ಮಾದರಿಯಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿ ನೇಮಕಾತಿಯಾಗಿ ಕಾರ್ಯನಿರ್ವಹಿಸುತ್ತಿರುವ ಯೋಜನಾ ವ್ಯವಸ್ಥಾಪಕರು ಮತ್ತು ನಿದೇಶಕರ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕಾರ್ನಿಕ್ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ರಾಜೀವ್ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಹ್ಯಾಬಿಟೇಟ್ ಕೇಂದ್ರದ ಅಧ್ಯಕ್ಷರಿಗೆ ಪತ್ರ.
ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ನಿರ್ಮಿತಿ ಕೇಂದ್ರದಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ಹೊಂದಿ ಯೋಜನಾ ವ್ಯವಸ್ಥಾಪಕರಾಗಿ, ಸೈಟ್ ಎಂಜಿನಿಯರ್ಗಳಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ಕೆಲಸದಿಂದ ವಜಾಗೊಳಿಸಿದ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ನಿರ್ಮಿತಿ ಕೇಂದ್ರಗಳಲ್ಲಿ ಮಂಡ್ಯ ಮಾದರಿಯಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿ ನೇಮಕಾತಿಯಾಗಿ ಕಾರ್ಯನಿರ್ವಹಿಸುತ್ತಿರುವ ಯೋಜನಾ ವ್ಯವಸ್ಥಾಪಕರು ಮತ್ತು ನಿದೇಶಕರ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರ (ಕಾರ್ನಿಕ್)ದ ನಿರ್ದೇಶಕ ಡಾ.ಕೆ.ಎನ್.ನಾರಾಯಣಗೌಡ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ರಾಜೀವ್ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಹ್ಯಾಬಿಟೇಟ್ ಕೇಂದ್ರದ ಅಧ್ಯಕ್ಷರಿಗೆ ಪತ್ರ ಮುಖೇನ ಸೂಚಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಲ್ಲಿ ಸ್ವೀಕೃತವಾಗಿರುವ ದೂರಿನ ಕುರಿತು ರಾಜ್ಯದ ಎಲ್ಲಾ ನಿರ್ಮಿತಿ ಕೇಂದ್ರ, ಕ್ಯಾಷುಟಿಕ್, ಹ್ಯಾಬಿಟೇಟ್ ಕೇಂದ್ರ ಇಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಯೋಜನಾ ವ್ಯವಸ್ಥಾಪಕರು, ನಿರ್ದೇಶಕರ ನೇಮಕಾತಿಯಾಗಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಕಾರ್ನಿಕ್ ಸಂ ಸ್ಥೆರವರಿಗೆ ನಿರ್ದೇಶನ ನೀಡಿದೆ.ಅದರಂತೆ ರಾಜ್ಯದ ಎಲ್ಲಾ ನಿರ್ಮಿತಿ ಕೇಂದ್ರಗಳ ಯೋಜನಾ ವ್ಯವಸ್ಥಾಪಕರು, ನಿರ್ದೇಶಕರ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಸಮಗ್ರ ಮಾಹಿತಿಯನ್ನು ಪೂರಕ ದಾಖಲೆಗಳೊಂದಿಗೆ ಏಳು ದಿನಗಳೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಿದೆ.
ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳ ನೇಮಕಾತಿ, ವಿದ್ಯಾರ್ಹತೆ ದಾಖಲೆಗಳು, ಸೇವೆಗೆ ಸೇರಿದ ವಿವರಗಳು, ಈ ಹಿಂದೆ ಸೇವೆಗೆ ಸೇರುವ ಮುನ್ನ ಅನುಭವ ಹೊಂದಿರುವ ದಾಖಲೆಗಳು, ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಅವಧಿ ಇನ್ನಿತರ ಅಂಶಗಳನ್ನೊಳಗೊಂಡ ಸಮಗ್ರ ಮಾಹಿತಿಯನ್ನು ಸಂಸ್ಥೆಯ ನಿರ್ಮಿತಿ ಕೇಂದ್ರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಅವರ ದೃಢೀಕರಣದೊಂದಿಗೆ ಸಮಗ್ರ ಮಾಹಿತಿಯನ್ನು ಕೂಡಲೇ ಸರ್ಕಾರಕ್ಕೆ ಮಾಹಿತಿ ಒದಗಿಸಬೇಕಿದೆ ಎಂದು ಕೆ.ಎನ್.ನಾರಾಯಣಗೌಡ ಅವರು ಸೂಚಿಸಿದ್ದಾರೆ.