ಕನ್ನಡಪ್ರಭ ವಾರ್ತೆ ಬೆಂಗಳೂರು
ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಸದಸ್ಯ ಎನ್ನಲಾದ ಗಣೇಶ್ ಹರಿಕೇಶ್ ಎಂಬುವರು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ಚಿನ್ನಸ್ವಾಮಿ ಸ್ಟೇಡಿಯಂನ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಎಂಬಾತನನ್ನು ಕಳೆದ ಗುರುವಾರ ಬಂಧಿಸಿದ್ದರು. ಆತ ನೀಡಿದ ಹೇಳಿಕೆ ಆಧರಿಸಿ ಗಣೇಶ್ ಹರಿಕೇಶ್ಗೆ ಸಿಸಿಬಿ ಪೊಲೀಸರು ನೋಟಿಸ್ ವಿಚಾರಣೆ ನಡೆಸಿದ್ದಾರೆ.
ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಪ್ರಕರಣದಲ್ಲಿ ಆರೋಪಿ ಚಂದ್ರಶೇಖರ್ ಬಂಧನದ ನಂತರ ಗಣೇಶ್ ಹರಿಕೇಶ್ ಆತನೊಂದಿಗೆ ಸಂಪರ್ಕ ಕಡಿತಗೊಳಿಸಿದ್ದರು. ಈ ಪ್ರಕರಣದ ಸಂಬಂಧ ದಾಖಲಾದ ಎಫ್ಐಆರ್ನಲ್ಲಿ ಗಣೇಶ್ ಹರಿಕೇಶ್ನ ಹೆಸರಿದೆ. ಹೀಗಾಗಿ ಅವರಿಗೆ ನೋಟಿಸ್ ನೀಡಿ ಹೆಚ್ಚಿನ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು. ಅದರಂತೆ ಸಿಸಿಬಿ ವಿಚಾರಣೆಗೆ ಹಾಜರಾದ ಅವರು ಎರಡು ದಿನಗಳ ಕಾಲ ಸಮಯಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದಾಗ ಗಣೇಶ್ ಹರಿಕೇಶ್, ಸ್ವಸ್ತಿಕ್ ಹೆವಿ ಇಂಜಿನಿಯರಿಂಗ್ ಆ್ಯಂಡ್ ಇಂಡಸ್ಟ್ರಿಯಲ್ ಆಟೋಮೋಟಿವ್ ಹಾಗೂ ಧಾರಣಿ ಕಂಪ್ಯೂಟರ್ಸ್ ಎಂಬ ಎರಡು ಖಾಸಗಿ ಕಂಪನಿಗಳ ಹೆಸರಿನಲ್ಲಿ ಆನ್ಲೈನ್ ಮೂಲಕ ದೊಡ್ಡ ಪ್ರಮಾಣದಲ್ಲಿ ಟಿಕೆಟ್ಗಳನ್ನು ಖರೀದಿಸಿರುವುದು ಬೆಳಕಿಗೆ ಬಂದಿದೆ. ಈ ಕಂಪನಿಗಳ ಹೆಸರಿನಲ್ಲಿ ಟಿಕೆಟ್ಗಳನ್ನು ಪಡೆಯುತ್ತಿದ್ದ ಗಣೇಶ್, ಬಳಿಕ ಅವುಗಳನ್ನು ಚಂದ್ರಶೇಖರ್ ಮೂಲಕ ಹೆಚ್ಚಿನ ಬೆಲೆಗೆ ಮಾರಾಟ ಮಾಡಿಸುತ್ತಿದ್ದರು. ಈ ಕಂಪನಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇವೆಯೇ ಅಥವಾ ಟಿಕೆಟ್ ಪಡೆಯುವ ಉದ್ದೇಶದಿಂದ ಅವುಗಳನ್ನು ರಚಿಸಲಾಗಿದೆಯೇ ಎಂದು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾ.28 ಮತ್ತು ಏ.15 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದ ಒಟ್ಟು 181 ಟಿಕೆಟ್ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಲಾಗುತ್ತಿತ್ತು. ಅವುಗಳ ಮೌಲ್ಯ ಸುಮಾರು 17.52 ಲಕ್ಷ ರು. ಆಗಿದೆ ಎಂದು ಮೂಲಗಳು ತಿಳಿಸಿವೆ.
