ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ ಸುಸಂಸ್ಕೃತ ಬದುಕು ಕಟ್ಟಿಕೊಳ್ಳುವುದು ಅಷ್ಟೇ ಮುಖ್ಯ ಎಂದು ಬಿಜಿಎಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಅಭಿಪ್ರಾಯಪಟ್ಟರು.ಪಟ್ಟಣದ ಜಯನಗರ ಬಡಾವಣೆಯ ಆರ್ಟಿಒ ಮಲ್ಲಿಕಾರ್ಜುನ್ ಕಚೇರಿ ಆವರಣದಲ್ಲಿ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರ ಸಹಕಾರ ವಿದ್ಯಾರ್ಥಿಗಳ ಪರಿಶ್ರಮದಿಂದ ಒಳ್ಳೆಯ ಅಂಕಗಳಿಸಿರುವ ನಿಮ್ಮನ್ನು ಗುರುತಿಸಿ ಬೆಳಕಿಗೆ ತರುವ ಕೆಲಸ ಮಾಡುತ್ತಿರುವ ಮಲ್ಲಿಕಾರ್ಜುನ್ ಅವರ ಮನೋಭಾವನೆ ಉತ್ತಮವಾದುದು ಎಂದರು.
ಹಣವುಳ್ಳವರು ಜೋರಾಗಿ ಹುಟ್ಟುಹಬ್ಬ ಮಾಡಿಕೊಳ್ಳುತ್ತಾರೆ. ಆದರೆ, ಮಲ್ಲಿಕಾರ್ಜುನ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತಿರುವುದು ಹಾಗೂ ಅವರಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಮಾರ್ಗದರ್ಶನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.ತೆಂಡೇಕೆರೆಯ ಬಾಳೆಹೊನ್ನೂರು ಶಾಖಾಮಠದ ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹುಟ್ಟುಹಬ್ಬವನ್ನು ಪ್ರತಿಭಾ ಪುರಸ್ಕಾರವನ್ನಾಗಿ ಮಾಡಿ ನೂರಾರು ಪ್ರತಿಭೆ ಗುರುತಿಸಿ ಅವರಿಗೆ ನೈತಿಕ ಹಾಗೂ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿರುವ ಮಲ್ಲಿಕಾರ್ಜುನ್ ಸಮಾಜಮುಖಿ ಕೆಲಸ ಇತರರಿಗೆ ಮಾದರಿಯಾಗಿದೆ ಎಂದರು.
ತಮ್ಮ ಜನ್ಮಭೂಮಿಯ ಋಣ ತೀರಿಸಲು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಓದಬೇಕು ಎಂಬ ಗುಂಗಿನಲ್ಲಿ ವಿದ್ಯಾರ್ಥಿಗಳು ನಿರತ ಕಲಿಕೆ ಜೊತೆಗೆ ಸಾಧನೆ ಮಾಡುವಂತಾಗಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ಮಾತನಾಡಿ, ಪ್ರತಿ ಕುಟುಂಬದಿಂದ ಸಮಾಜ ಸೇವಕರು ಹುಟ್ಟಿ ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ವಾಪಸ್ ಕೊಡಬೇಕು. ಸಮಾಜಮುಖಿ ಕಾರ್ಯಗಳಿಗೆ ಸಹಕಾರ ಕೊಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಲ್ಲಿ ಹೆಚ್ಚು ಅಂಕ ಗಳಿಸಿದ ತಾಲೂಕಿನ ವಿವಿಧ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ 230 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಕಾಗಿನೆಲೆ ಮೈಸೂರು ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ಬೇಬಿಮಠದ ಪೀಠಾದ್ಯಕ್ಷ. ಶಿವಬಸವ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಪೀಠಾದ್ಯಕ್ಷ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ಕೆ.ಆರ್.ನಗರ ಕಾಗಿನೆಲೆ ಶಾಖಾಮಠದ ಅರುಣ್ ಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಶಿಕ್ಷಣ ತಜ್ಞ ಶಂಕರ್ ಬೆಳ್ಳೂರು ಮಾತನಾಡಿದರು.
ಇದೇ ವೇಳೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಮಲ್ಲಿಕಾರ್ಜುನ್ ಅವರನ್ನು ಅಭಿಮಾನಿಗಳು, ವಿವಿಧ ರಾಜಕೀಯ ಪಕ್ಷದ ಮುಖಂಡರು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಮೈಸೂರು ವಲಯದ ಸಾರಿಗೆ ಆಯುಕ್ತ ಸಿ.ಟಿ.ಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಅಭಿಯಂತರ ಎಚ್.ಸಿ.ಧರ್ಮೇಂದ್ರ, ಕೆ.ಸುರೇಶ್, ಬಳಗದ ಅಧ್ಯಕ್ಷ ಗಂಜಿಗೆರೆ ಮಹೇಶ್ ಸೇರಿದಂತೆ ಸಾವಿರಾರು ಅಭಿಮಾನಿಗಳು ಹಾಜರಿದ್ದರು.