ಸಾರಾಂಶ
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಪ್ರಕಾಶ್ ಹೇಳಿದರು.
ಯುವ ನಿಧಿ ಅರಿವು
ಸಿರಿಗೆರೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಪ್ರಕಾಶ್ ಹೇಳಿದರು.ಚಿತ್ರದುರ್ಗ ತಾಲೂಕಿನ ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಯುವನಿಧಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳನ್ನು ಬಡವರು, ಕೂಲಿಕಾರ್ಮಿಕರು, ನಿರುದ್ಯೋಗಿ ಯುವಜನತೆ ಸದ್ಭಳಕೆ ಮಾಡಿಕೊಂಡು ಜೀವನ ಹಸನಾಗಿಸಿಕೊಳ್ಳಬೇಕು ಎಂದು ತಿಳಿಸಿದರು.2023-24ನೇ ಸಾಲಿನಲ್ಲಿ 180 ದಿನ ಪೂರೈಸಿರುವ ಪದವಿ ಮತ್ತು ಡಿಪ್ಲೋಮ ವೃತ್ತಿಪರ ತರಬೇತಿ ಪಡೆದ ನಿರುದ್ಯೋಗಿ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಯಲ್ಲಿ ಫೆಬ್ರವರಿ ಅಂತ್ಯಕ್ಕೆ 5415 ಮಂದಿ ಈ ಯೋಜನೆಯ ಪ್ರಯೋಜನ ಪಡೆದಿದ್ದು, ಫೆಬ್ರವರಿ-2025 ಮಾಹೆಯವರೆಗೆ ಜಿಲ್ಲೆಯಲ್ಲಿ ಒಟ್ಟು 10.49 ರು. ಕೋಟಿಗಳನ್ನು ಡಿಬಿಟಿ ಮೂಲಕ ಸಂದಾಯ ಮಾಡಲಾಗಿದೆ ಎಂದು ಹೇಳಿದರು.
ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಶಶಿಕಲಾ, ಐಕ್ಯೂಐಸಿ ಸಂಚಾಲಕ ಎನ್.ಆರ್.ಮಮತಾ, ತಾಲೂಕು ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಟಿ.ನಿರಂಜನ್, ಸದಸ್ಯರಾದ ನಿತೀಶ್ ಮಲ್ಕಾರೆಡ್ಡಿ, ಶಶಿಕಿರಣ್, ಮಂಜುನಾಥ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಎಸ್.ಪಾಂಡುರಂಗಪ್ಪ, ಬಿ.ಆರ್.ನಾಗರಾಜ್ ಇದ್ದರು.