ಗಂಭೀರ ಮತ್ತು ಕ್ರಿಮಿನಲ್ ಸ್ವರೂಪದ ಅಪರಾಧ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ವಿರೋಧಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಹಗರಿಬೊಮ್ಮನಹಳ್ಳಿ: ಪೊಲೀಸ್ ಇಲಾಖೆ ಮತ್ತು ರಾಜ್ಯ ಕಾನೂನು ಅಭಿಯೋಜನಾ ಇಲಾಖೆಯ ಅಕ್ಷೇಪಗಳ ನಡುವೆಯೂ ರಾಜ್ಯದ ನಾನಾ ಪೊಲೀಸ್ ಠಾಣೆಗಳ ೫೨ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸಚಿವ ಸಂಪುಟದ ನಿರ್ಣಯವು ನ್ಯಾಯಸಮ್ಮಯವಲ್ಲ, ಇದು ರಾಜ್ಯದ ಶಾಂತಿ ಕದಡುವ ಪ್ರಯತ್ನವಾಗಿದೆ ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಸಂಚಾಲಕ ಸಾಗರ್ ಮಹಾದೇವಕರ್ ಕಳವಳ ವ್ಯಕ್ತಪಡಿಸಿದರು.
ಗಂಭೀರ ಮತ್ತು ಕ್ರಿಮಿನಲ್ ಸ್ವರೂಪದ ಅಪರಾಧ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ವಿರೋಧಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ಇಲ್ಲಿನ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ನಿಯೋಗದ ನೇತೃತ್ವ ವಹಿಸಿ ಅವರು ಮಾತನಾಡಿದರು.ದಾಖಲಾಗಿರುವ ಬಹುತೇಕ ಕ್ರಿಮಿನಲ್ ಪ್ರಕರಣಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ, ಅಮಾಯಕರ ಕೊಲೆ ಯತ್ನಗಳು, ಅಪರಾಧಗಳ ಸಂಚು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸುವ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜಕೀಯ ಮತ್ತು ಮತಬ್ಯಾಂಕ್ ಕಾರಣಗಳಿಗಾಗಿ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರಗಳು ನ್ಯಾಯಾಂಗ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬುಗೆಯನ್ನು ಕುಗ್ಗಿಸುವ ಅಪಾಯವಿದೆ ಎಂದು ಎಚ್ಚರಿಸಿದರು.೫೨ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರವನ್ನು ಜಾರಿಗೆ ತರಬಾರದು. ಅಭಿಯೋಜಕರ ಮೇಲೆ ಯಾವುದೇ ರಾಜಕೀಯ ಮತ್ತು ಆಡಳಿತಾತ್ಮಕ ಒತ್ತಡ ಹೇರಬಾರದು. ಸಾರ್ವಜನಿಕರ ಶಾಂತಿ, ಸರ್ಕಾರಿ ಆಸ್ತಿ ಹಾನಿ ಪ್ರಕರಣಗಳನ್ನು ರಾಜ್ಯ ಸರ್ಕಾರ ನ್ಯಾಯ, ಸಂವಿಧಾನಾತ್ಮಕ ಮೌಲ್ಯ ಮತ್ತು ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮುಂದುವರಿಯಬೇಕು ಎಂದು ಅವರು ಆಗ್ರಹಿಸಿದರು.
ಸಮಿತಿಯ ಪದಾಧಿಕಾರಿಗಳಾದ ಹೀರಾಳ್ ಶರಣಪ್ಪ, ವಿರೂಪಾಕ್ಷ ತಡೂರು, ಗುರುರಾಜ, ಕೊಟ್ರೇಶ್, ರಾಮಪ್ಪ, ಚಂದ್ರಮೌಳಿ, ಶಿವಯೋಗಿ, ತೋಟಪ್ಪ, ಮಲ್ಲಿಕಾರ್ಜುನ, ಕೊಟ್ರಮ್ಮ ಹಾಗೂ ಪೂಜಾ ಶ್ರೀಕಾಂತ್ ನಿಯೋಗದಲ್ಲಿದ್ದರು.