ಸಾರಾಂಶ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ, ಸ್ವಾತಂತ್ರ್ಯ ಕೊಡಿಸಿದ ಎಲ್ಲ ಮಹನೀಯರ ನೆನೆಯಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಹೇಳಿದರು.
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ೭೮ ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ನೆಹರು ಸೇರಿದಂತೆ ಅನೇಕ ನಾಯಕರು ಜೀವವನ್ನೇ ತ್ಯಾಗ ಮಾಡಿದ್ದಾರೆ. ಅಲ್ಲದೆ, ದೇಶಕ್ಕೆ ಸಂವಿಧಾನ ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಕಾನೂನುಗಳಿಂದ ದೇಶದ ಜನರು ಇಂದು ನೆಮ್ಮದಿ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದರು.
ಕಬ್ಬಹಳ್ಳಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಎಂ.ಸಿದ್ದರಾಜಪ್ಪ ಮಾತನಾಡಿ, ಭಾರತೀಯರೆಂಬ ಪರಿಕಲ್ಪನೆ ಇರಬೇಕು. ಮನುಷ್ಯ ಜೀವನ ಶೈಲಿ ಬದಲಿಸಿಕೊಂಡರೆ ಸಮಾಜಕ್ಕೆ ಕೊಡುಗೆ ನೀಡಬಹುದು. ಮದ್ಯಪಾನ, ಮಾದಕ ವ್ಯಸನದಿಂದ ಮುಕ್ತರಾಗಬೇಕು. ದೇಶ ಪ್ರಗತಿ ಸಾಧಿಸಬೇಕು ಎಂದಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಹಾಗಾಗಿ ಶಿಕ್ಷಣ ದೇಶದ ಪ್ರಗತಿಗೆ ಪೂರಕ ಎಂದು ಹೇಳಿದರು.ತಹಸೀಲ್ದಾರ್ ಟಿ.ರಮೇಶ್ ಬಾಬು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದರು. ಸಮಾರಂಭದಲ್ಲಿ ಪುರಸಭೆ ಸದಸ್ಯರಾದ ಅಣ್ಣಯ್ಯಸ್ವಾಮಿ, ಮಹಮದ್ ಇಲಿಯಾಸ್ (ಅಲ್ಲಾಹು), ಮಧುಕುಮಾರ್, ಎನ್.ಕುಮಾರ್, ಎಲ್.ನಿರ್ಮಲ, ಎಚ್.ಆರ್. ರಾಜಗೋಪಾಲ್, ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಶೈಲಕುಮಾರ್ (ಶೈಲೇಶ್), ತಾಪಂ ಕಾರ್ಯ ನಿರ್ವಾಹಕ ಪ್ರಭಾರ ಅಧಿಕಾರಿ ಎನ್. ಪೂರ್ಣಿಮ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಪುರಸಭೆ ಮುಖ್ಯಾಧಿಕಾರಿ ಕೆ.ಪಿ. ವಸಂತಕುಮಾರಿ, ಸಿಡಿಪಿಒ ಎಂ.ಹೇಮಾವತಿ ಮತ್ತಿತರರಿದ್ದರು.