ಕನ್ನಡಪ್ರಭ ವಾರ್ತೆ ಅರಸೀಕೆರೆ

ಪರಿಸರ ಸಂರಕ್ಷಣೆಯು ಒಂದು ದಿನದ ಆಚರಣೆಗೆ ಸೀಮಿತವಾಗದೆ ನಿರಂತರ ಜವಾಬ್ದಾರಿಯಾಗಿ ರೂಪುಗೊಳ್ಳಬೇಕಿದೆ. ವಿಶ್ವ ಪರಿಸರ ದಿನದ ಅಂಗವಾಗಿ ನೆಡುವ ಪ್ರತಿಯೊಂದು ಸಸಿಯೂ ಮರವಾಗಿ ಬೆಳೆದು ನಿಲ್ಲುವಂತೆ ಕಾಳಜಿ ವಹಿಸಿದಾಗ ಮಾತ್ರ ಪರಿಸರ ದಿನಾಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಕಿರಣ್ ಕುಮಾರ್‌ ಡಿ. ವಡಿಗೇರಿ ಹೇಳಿದರು.ನಗರದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಕಿರಣ್ ಕುಮಾರ್‌ ಡಿ. ವಡಿಗೇರಿ ಮಾತನಾಡಿ ಪರಿಸರ ಸಂರಕ್ಷಣೆ ಎಂಬುದು ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು. ಅರಣ್ಯ ಸಂಪತ್ತು, ವನ್ಯಜೀವಿಗಳು ಹಾಗೂ ಜಲಮೂಲಗಳನ್ನು ರಕ್ಷಿಸುವುದು ಇಂದಿನ ಅಗತ್ಯವಾಗಿದ್ದು, ಪ್ರಕೃತಿಯ ಮೇಲಿನ ನಿರ್ಲಕ್ಷ್ಯ ಮುಂದಿನ ಪೀಳಿಗೆಗೆ ಗಂಭೀರ ಸವಾಲುಗಳನ್ನು ಉಂಟುಮಾಡಲಿದೆ ಎಂದು ಎಚ್ಚರಿಸಿದರು.ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವೀಣಾ ಕೋಳೇಕರ್‌ ಮಾತನಾಡಿ, ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಅಭ್ಯಾಸವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಆರೋಗ್ಯಕರ ಪರಿಸರವು ಉತ್ತಮ ಆರೋಗ್ಯಕ್ಕೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಪರಿಸರ ಕಾಳಜಿಯನ್ನು ಜೀವನಶೈಲಿಯ ಭಾಗವನ್ನಾಗಿಸಬೇಕೆಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್‌, ಸಾಮಾಜಿಕ ಅರಣ್ಯಾಧಿಕಾರಿ ಲಕ್ಷ್ಮೀ, ತಾಲೂಕು ವೈದ್ಯಾಧಿಕಾರಿ ಡಾ. ರಂಗನಾಥ್, ಅರಣ್ಯ ಇಲಾಖೆಯ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.