ಸಾರಾಂಶ
ಖ್ಯಾತ ಸಂಶೋಧಕ ಡಾ.ಬಿ.ವ್ಹಿ. ಶಿರೂರ ಅವರಿಗೆ ಹುಬ್ಬಳ್ಳಿಯ ಅವರ ನಿವಾಸದಲ್ಲಿ ಸೇಡಿಯಾಪು ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಗಳ ಆಶ್ರಯದಲ್ಲಿ ಸೇಡಿಯಾಪು ಪ್ರಶಸ್ತಿಯನ್ನು ಖ್ಯಾತ ಸಂಶೋಧಕ ಡಾ.ಬಿ.ವ್ಹಿ. ಶಿರೂರ ಅವರಿಗೆ ಹುಬ್ಬಳ್ಳಿಯ ಅವರ ನಿವಾಸದಲ್ಲಿ ಪ್ರದಾನ ಮಾಡಲಾಯಿತು.ಹಿರಿಯ ವಿದ್ವಾಂಸ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅವರು ಪುರಸ್ಕೃತರ ಕುರಿತು ಮಾತನಾಡಿ, ನಾಡಿನ ಸಾಕ್ಷಿ ಪ್ರಜ್ಞೆ, ಸಂಶೋಧನಾ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ ಡಾ. ಬಿ.ವ್ಹಿ. ಶಿರೂರ ಅವರಿಗೆ ಈ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಶಾಸನ, ಗ್ರಂಥ ಸಂಪಾದನೆ, ಜೈನಸಾಹಿತ್ಯ, ವೀರಶೈವ ಸಾಹಿತ್ಯ, ವಚನ ಮುಂತಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಪ್ರಸಿದ್ಧರಾಗಿದ್ದಾರೆ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಬಿ.ವ್ಹಿ. ಶಿರೂರ, ಕನ್ನಡ ಸಾಹಿತ್ಯದಲ್ಲಿ ಸಂಶೋಧನೆ ವ್ಯಾಕರಣ ಮತ್ತು ಛಂದಸ್ಸಿನಂಥ ಶಾಸ್ತ್ರೀಯ ಪಾಂಡಿತ್ಯವುಳ್ಳ ಪಠ್ಯವನ್ನು ವಿಶ್ವವಿದ್ಯಾಲಯಗಳು ಕಡಿತಗೊಳಿಸಿ ಕನ್ನಡ ಭಾಷಾ ಗಟ್ಟಿತನವನ್ನು ಹಾಳು ಮಾಡುತ್ತಿರುವುದು ವಿಷಾದನೀಯ. ವರ್ತಮಾನದಲ್ಲಿ ಯುವಕರಿಗೆ ಗೋವಿಂದ ಪೈ ಮತ್ತು ಸೇಡಿಯಾಪು ಕೃಷ್ಣ ಭಟ್ಟರ ಶಾಸ್ತ್ರೀಯ ಪಾಂಡಿತ್ಯವನ್ನು ಪರಿಚಯಿಸುವ ಕೆಲಸವನ್ನು ಮಾಡಬೇಕು ಎಂದರು.ಕಾಡಸಿದ್ಧೇಶ್ವರ ಕಾಲೇಜಿನ ಪ್ರಾಚಾರ್ಯ ಪ್ರೊ. ಉಮಾ ನೆರ್ಲೆ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಡಾ. ವೀರಣ್ಣ ರಾಜೂರ ಮಾತನಾಡಿ, ಡಾ.ಬಿ.ವ್ಹಿ. ಶಿರೂರ ಅವರು ದೊಡ್ಡ ವಿದ್ವಾಂಸರಾಗಿದ್ದರೂ ಎಲ್ಲಿಯೂ ತಮ್ಮನ್ನು ಗುರುತಿಸಿಕೊಂಡವರಲ್ಲ. ಕರಾವಳಿಯವರು ಇಂತಹ ಮಹಾನ್ ಸಂಶೋಧಕರನ್ನು ಗುರುತಿಸಿ ಸನ್ಮಾನಿಸಿರುವುದು ನಮ್ಮನ್ನು ನಾವು ಗೌರವಿಸಿಕೊಂಡಂತೆ ಎಂದರು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಡಾ. ಸಣ್ಣವೀರಣ್ಣ ದೊಡ್ಡಮನಿ, ಡಾ. ಹನುಮಾಕ್ಷಿ ಗೋಗಿ, ಡಾ. ಧನವಂತ ಹಾಜವಗೋಳ, ಸುರೇಶ್ ಹೊರಕೇರಿ, ಎಸ್.ಎಂ. ಪಾಟೀಲ್, ಮಂಜುನಾಥ, ಡಾ. ಜಯಶ್ರೀ ಹಿರೇಮಠ, ಡಾ. ಪ್ರಭಾತಿ, ಕೃತಿಕಾ ಶಿರೂರು, ಗೋವಿಂದ ಪೈ ಸಂಶೋಧನ ಕೇಂದ್ರದ ವೆಂಕಟೇಶ್ ನಾಯ್ಕ್, ವಿನೇಶ್ ಮುಂತಾದವರು ಉಪಸ್ಥಿತರಿದ್ದರು.