ಉಡುಪಿ: ನಗರದ ಸೌತ್ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೂತನ ವೆಬ್ಸೈಟ್ನ್ನು ಸಂಘದ ಗೌರವಾಧ್ಯಕ್ಷರಾಗಿರುವ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಲೋಕಾರ್ಪಣೆಗೊಳಿಸಿದರು.ನಂತರ ಆಶೀರ್ವಚನ ನೀಡಿದ ಶ್ರೀಪಾದರು, ತಮ್ಮ ಭವಿಷ್ಯದ ಜೀವನಕ್ಕೆ ಅಡಿಪಾಯ ಹಾಕಿಕೊಟ್ಟ ಶಾಲೆಯನ್ನು ಬೆಂಬಲಿಸುವುದು ಮತ್ತು ಅಭಿವೃದ್ಧಿಪಡಿಸುವುದು ಪ್ರತಿಯೊಬ್ಬ ಹಳೆಯ ವಿದ್ಯಾರ್ಥಿಯ ನೈತಿಕ ಕರ್ತವ್ಯವಾಗಿದೆ, ಶಾಲೆ ಎನ್ನುವುದು ಕೇವಲ ಪಠ್ಯಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಜೀವನದ ಅತ್ಯಗತ್ಯ ಪಾಠಗಳನ್ನು ಮತ್ತು ಸಂಸ್ಕಾರವನ್ನು ಕಲಿಸುತ್ತದೆ ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಅಭಿವೃದ್ಧಿ) ಮತ್ತು ಶಾಲೆಯ ಮಾಜಿ ಮುಖ್ಯೋಪಾಧ್ಯಾಯ ಅಶೋಕ್ ಕಾಮತ್ ಅವರು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಂತೆ ಮೂಲಸೌಕರ್ಯಗಳ ಅಗತ್ಯವೂ ಹೆಚ್ಚಾಗುತ್ತದೆ, ಆದ್ದರಿಂದ ಹಳೆಯ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಇದೇ ಸಂದರ್ಭದಲ್ಲಿ, ಹಳೆಯ ವಿದ್ಯಾರ್ಥಿ ಆದರ್ಶ್ ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ಉನ್ನತ ಗುಣಮಟ್ಟದ ’ಅಹುಜಾ ಸೌಂಡ್ ಮಿಕ್ಸರ್’ ಅನ್ನು ಶಾಲೆಗೆ ಹಸ್ತಾಂತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶ್ ಶೇಟ್ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ವಿರೂಪಾಕ್ಷ, ಪ್ರೌಢಶಾಲಾ ಅಧ್ಯಕ್ಷ ರಮೇಶ್ ಹೆಗ್ಡೆ, ವೆಬ್ಸೈಟ್ ಅಭಿವೃದ್ಧಿಪಡಿಸಿದ ಶ್ರೀನಿಧಿ ಆಚಾರ್ಯ, ರವಿಪ್ರಸಾದ್ ಮತ್ತು ಶಶಾಂಕ್ ಉಪಸ್ಥಿತರಿದ್ದರು.
ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಕುಸುಮ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ವಂದಿಸಿದರು. ನಾಗೇಶ್ ವಿ. ಪ್ರಭು ಕಾರ್ಯಕ್ರಮ ನಿರ್ವಹಿಸಿದರು.