ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ರಂಗಭೂಮಿ ಕಲಾವಿದರಿಗೆ ಸಮಾಜದಿಂದ ಗೌರವ ಹಾಗೂ ಗುರುತಿಸುವಿಕೆ ಸಿಗಬೇಕು. ರಂಗಭೂಮಿಗೆ ಪ್ರೋತ್ಸಾಹ ನೀಡಿ, ಅದನ್ನು ಉಳಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಮಾಹೆ ಮಣಿಪಾಲದ ಸಹಕುಲಾಧಿಪತಿ ಹಾಗೂ ರಂಗಭೂಮಿ ಉಡುಪಿ ಗೌರವಾಧ್ಯಕ್ಷ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು.ಅವರು ಶನಿವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಮೂರು ದಿನಗಳ ‘ರಂಗಭೂಮಿ ರಂಗೋತ್ಸವ’ ಉದ್ಘಾಟಿಸಿ ಮಾತನಾಡಿದರು.ರಂಗಭೂಮಿ ಉಡುಪಿ ಹಮ್ಮಿಕೊಳ್ಳುತ್ತಿರುವ ನಾಟಕ ಸ್ಪರ್ಧೆ, ರಂಗ ಶಿಕ್ಷಣ, ರಂಗೋತ್ಸವ ಮೊದಲಾದ ಕಾರ್ಯಕ್ರಮಗಳಿಗೆ ಸಮಾಜದ, ಸಂಘ ಸಂಸ್ಥೆಗಳು ಕೈ ಜೋಡಿಸುವ ಅಗತ್ಯವಿದೆ. ರಂಗ ಚಟುವಟಿಕೆಗಳು ಸಮಾಜದ ಜೀವಂತಿಕೆಯ ಲಕ್ಷಣ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ರಂಗಭೂಮಿ ಕಳೆದ 45 ವರ್ಷದಿಂದ ನಿರಂತರ ನಾಟಕ ಸ್ಪರ್ಧೆ ನಡೆಸುತ್ತಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ. ರಂಗಭೂಮಿಗೆ ಭವಿಷ್ಯದ ದಿನಗಳಲ್ಲಿ ಕಲಾವಿದರು, ಪ್ರೇಕ್ಷಕರು ಕೊರತೆ ಯಾಗಬಾರದು ಎಂಬ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ರಂಗಭೂಮಿ ಹಮ್ಮಿಕೊಂಡ ರಂಗ ಶಿಕ್ಷಣ ಕ್ಕೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದರು.ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ, ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಶುಭ ಕೋರಿದರು. ರಂಗಭೂಮಿಯ ಉಪಾಧ್ಯಕ್ಷರಾದ ಎನ್.ಆರ್. ಬಲ್ಲಾಳ್ ಹಾಗೂ ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು.ರಂಗಭೂಮಿ ಪ್ರದಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಡಿ ಪ್ರಾಸ್ತಾವಿಕ ಮಾತನಾಡಿ, ಈ ಸಲದ ನಾಟಕ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದ ೪೦ಕ್ಕೂ ಅಧಿಕ ತಂಡಗಳು ಬಂದಿದ್ದು ಅವುಗಳಲ್ಲಿ ಯೋಗ್ಯವಾದ ೧೨ ತಂಡಗಳಿಗೆ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಕಾರ್ಯಕ್ರಮಕ್ಕೆ ೭ ಲಕ್ಷ ರು. ಗೂ ಅಧಿಕ ವೆಚ್ಚವನ್ನು ರಂಗಭೂಮಿ ಭರಿಸುತ್ತಿದೆ ಎಂದರು.ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಪಾದ ಹೆಗಡೆ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಪ್ರಥಮ ಬಹುಮಾನ ಪಡೆದ ‘ಧರ್ಮ ನಟಿ’ ನಾಟಕದ ಮರು ಪ್ರದರ್ಶನ ನಡೆಯಿತು.