ಕನ್ನಡಪ್ರಭ ವಾರ್ತೆ ಬೆಳಗಾವಿ

ನನಗೆ ಹಾಗೂ ಎಂ.ಬಿ.ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆದಿರುವುದು ನಿಜ. ಆದರೆ, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಮಯ ಹಾಗೂ ಸಂದರ್ಭ ಬಂದಾಗ ಈ ಕುರಿತು ಮಾತನಾಡುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರ ಪಕ್ಷದ ಹಿತದೃಷ್ಟಿಯಿಂದ ಚರ್ಚೆಯಾಗುತ್ತಿತ್ತು. ಆದರೆ, ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷವೇ ನಮ್ಮನ್ನು ಗುರುತಿಸಬೇಕು. ಈ ವಿಚಾರದಲ್ಲಿ ನಾವು ಯಾವುದೇ ಒತ್ತಡ ಹೇರುವುದಿಲ್ಲ. ನೂತನ 19 ಸಚಿವರಿಗೆ ಆ.13 ರೊಳಗಾಗಿ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಇನ್ನು ಎರಡು ದಿನಗಳಲ್ಲಿ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಖಾತೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು. ಇಬ್ಬರು ನಾಯಕರು ಒಗ್ಗಟ್ಟಿನಿಂದ ಇದ್ದೇವೆ ಎಂದು ಸ್ಪಷ್ಟ ಪಡಿಸಿದ ಅವರು, ನಾವು ಒಟ್ಟಿಗೆ ಇದ್ದೇವೆ ಮತ್ತು ಮುಂದೆಯೂ ಇರುತ್ತೇವೆ. ಮೊದಲು ಸಿದ್ದರಾಮಯ್ಯನವರ ಜೊತೆಗೆ ಏನು ಸಂಬಂಧವಿತ್ತೋ, ಅದು ಈಗಲೂ ಮುಂದುವರಿದಿದೆ. ನಮ್ಮ ನಡುವೆ ಅಸಮಾಧಾನವಿದೆ ಎನ್ನುವುದು ಕಪೋಲಕಲ್ಪಿತ ಸುದ್ದಿ. ಸಿದ್ದರಾಮಯ್ಯನವರು ಅಧಿಕಾರದಲ್ಲಿ ಇರಲಿ, ಬಿಡಲಿ, ಅವರು ನಮ್ಮ ನಾಯಕರು. 2028ರಲ್ಲಿ ಅವರ ನಾಯಕತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಹೇಳಿದರು.ಬಿ.ನಾಗೇಂದ್ರರನ್ನು ಸಚಿವರನ್ನಾಗಿ ಮಾಡಿದ್ದು, ಮತ್ತೆ ಸಚಿವ ಸ್ಥಾನದಿಂದ ತೆಗೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಲೋಕಾಯುಕ್ತ ಹಾಗೂ ಎಸ್‌ಐಟಿಯವರು ಕ್ಲೀನ್‌ ಚಿಟ್‌ ನೀಡಿದ ಬಳಿಕ, ನಾಗೇಂದ್ರಗೆ ಹೈಕಂಮಾಡ್‌ ಅಳೆದು-ತೂಗಿ ಸಚಿವ ಸ್ಥಾನ ನೀಡಿದೆ. ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಮೀಸಲಿದ್ದು, ಬಾಕಿ ಉಳಿದ ೧ ಸಚಿವ ಸ್ಥಾನವನ್ನು ಮಹಿಳೆಯರಿಗೆ ನೀಡಲಾಗುತ್ತದೆ ಎಂದು ಹೈಕಮಾಂಡ್ ಹೇಳಿದ್ದಾರೆ. ಆದರೆ, ಯಾರಿಗೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದರು.ಶೀಘ್ರ ಸೇತುವೆ ಕಾಮಗಾರಿ ಆರಂಭ

ರಾಜ್ಯದಲ್ಲಿ ಎಲ್ಲೆಲ್ಲಿ ಸೇತುವೆಗಳ ಅವಶ್ಯಕತೆ ಇದೆಯೋ ಅಲ್ಲಲ್ಲಿ ನಿರ್ಮಾಣ ಕಾಮಗಾರಿ ಕಾರ್ಯ ಕೈಗೊಳ್ಳಲಾಗಿದೆ. ಕಾಮಗಾರಿಗಳಿಗೆ ಈಗಾಗಲೇ ಟೆಂಡರ್‌ ಕೂಡ ನೀಡಲಾಗಿದೆ. ಶೀಘ್ರವೇ ಕಾಮಗಾರಿಗಳು ಆರಂಭವಾಗಲಿವೆ. ಖಾನಾಪುರ ಹಾಗೂ ಉಗಾರಖುರ್ದ ಕಡೆಯಿಂದ ಬರಲು ಪರಮಾನಂದವಾಡಿ ಸೇತುವೆ ನಿರ್ಮಾಣ ಹಂತದಲ್ಲಿದೆ ಎಂದರು.ಬರ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬರ ಪರಿಸ್ಥಿತಿ ಕುರಿತು ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ. ಬರ ಪರಿಸ್ಥಿತಿಯ ಪರಿಶೀಲನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮುಂಬರುವ ದಿನದಲ್ಲಿ ಪ್ರವಾಸಿ ತಾಣಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದರ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಭಿವೃದ್ದಿ ಪಡಿಸಲು ಪ್ರಯತ್ನಿಸಲಾಗುವುದು ಎಂದರು.----ಕೋಟ್‌ಖಾತೆ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ತಾವು ಯಾವುದೇ ಖಾತೆಯನ್ನು ಕೇಳಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಪಕ್ಷದ ನಾಯಕತ್ವ ಕೈಗೊಳ್ಳುವ ನಿರ್ಧಾರವನ್ನು ನಾವು ಗೌರವಿಸುತ್ತೇವೆ. ಸದ್ಯ ನಿರ್ವಹಿಸುತ್ತಿರುವ ಇಲಾಖೆ ಜವಾಬ್ದಾರಿಯನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. ಉಳಿದ ಖಾತೆಯನ್ನು ಮಹಿಳೆಯರಿಗೆ ನೀಡುವ ವಿಚಾರ ಈಗಾಗಲೇ ಪೂರ್ಣಗೊಂಡಿದ್ದು, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸಲಿದೆ.ಸತೀಶ ಜಾರಕಿಹೊಳಿ, ಲೋಕೋಪಯೋಗಿ ಇಲಾಖೆ ಸಚಿವ