ಕನ್ನಡಪ್ರಭ ವಾರ್ತೆ ಬೆಂಗಳೂರು

ಶಾಸಕರು ಉಚಿತವಾಗಿ ಐಪಿಎಲ್‌ ಟಿಕೆಟ್‌ ಕೇಳಿರುವುದು ತಪ್ಪು. ಪಂದ್ಯ ವೀಕ್ಷಿಸುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಪಾವತಿಸಿ ಹೋಗಿ ಪಂದ್ಯ ನೋಡಲಿ ಎಂದು ಕಾಂಗ್ರೆಸ್‌ ಮಾಜಿ ಸಂಸದ ಹಾಗೂ ಬಮುಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್‌ಸಿಎ ಮೊದಲಿನಿಂದಲೂ ಶಾಸಕರಿಗೆ ಟಿಕೆಟ್‌ ನೀಡುತ್ತಾ ಬಂದಿದೆ. ಬಿಜೆಪಿ ಶಾಸಕರು ಕೂಡ ಐಪಿಎಲ್‌ ಟಿಕೆಟ್‌ ಪಡೆದಿದ್ದಾರೆ. ಇನ್ನು, ಐಪಿಎಲ್‌ ದೇಶವನ್ನು ಪ್ರತಿನಿಧಿಸುವ ಪಂದ್ಯಾವಳಿಯಲ್ಲ. ವಾಣಿಜ್ಯ ಉದ್ದೇಶದ ಪಂದ್ಯಾವಳಿ. ಅವುಗಳ ಬಗ್ಗೆ ಜನಪ್ರತಿನಿಧಿಗಳು ಹೆಚ್ಚು ಗಮನಹರಿಸುವುದು ಒಳ್ಳೆಯದಲ್ಲ. ಶಾಸಕರು ಉಚಿತವಾಗಿ ಟಿಕೆಟ್‌ ಕೇಳಿರುವುದು ತಪ್ಪು. ಪಂದ್ಯ ವೀಕ್ಷಿಸುವ ಆಸೆ ಇರುವವರು ವೈಯಕ್ತಿಕವಾಗಿ ಹಣ ನೀಡಿ ಹೋಗಿ ನೋಡಲಿ ಎಂದರು.

ಹೊಸ ಕ್ರೀಡಾಂಗಣಕ್ಕೆ ಈಗಾಗಲೇ ನಾನು ಜಾಗ ಆಯ್ಕೆ ಮಾಡಿ ಸೂಚಿಸಿದ್ದು, ಅದಕ್ಕೆ ಸರ್ಕಾರ ಮನ್ನಣೆ ನೀಡಿದೆ. ಸೂರ್ಯ ಸಿಟಿಯಲ್ಲಿ ಕ್ರೀಡಾಂಗಣ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದೇನೆ. ಕಂಠೀರವ ಕ್ರೀಡಾಂಗಣ, ಚಿನ್ನಸ್ವಾಮಿ, ಫುಟ್‌ಬಾಲ್‌ ಕ್ರೀಡಾಂಗಣ ಹೊರತಾಗಿ ಬೇರೆ ಯಾವುದೇ ಕ್ರೀಡಾಂಗಣಗಳಿಲ್ಲ. ಇಷ್ಟು ದೊಡ್ಡ ಜನಸಂಖ್ಯೆ ಇರುವ ನಗರದಲ್ಲಿ ಯುವಕರಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡಲು ನಾಲ್ಕು ದಿಕ್ಕಿನಲ್ಲೂ ಕ್ರೀಡಾಂಗಣ ನಿರ್ಮಿಸಬೇಕು. ಅದಕ್ಕೆ ಪೂರಕವಾಗಿ ಸೂರ್ಯ ಸಿಟಿಯಲ್ಲಿ 100 ಎಕರೆ ಭೂಮಿ ಮೀಸಲಿಡುವಂತೆ ಸಚಿವ ಜಮೀರ್‌ ಅಹಮದ್‌ ಖಾನ್‌, ಕೆಎಚ್‌ಬಿ ಅಧ್ಯಕ್ಷ ಶಿವಲಿಂಗೇಗೌಡ ಅವರೊಂದಿಗೆ ಚರ್ಚಿಸಿದ್ದೆ. ಸಚಿವ ಸಂಪುಟ ಸಭೆಯಲ್ಲಿ ಅದಕ್ಕೆ ಅನುಮೋದನೆ ದೊರೆತಿದೆ ಎಂದರು.