ಕನ್ನಡಪ್ರಭ ವಾರ್ತೆ ಬೇಲೂರು

ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿಗಳು ಹಾಗೂ ನೂತನ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ, ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಬಸವೇಶ್ವರ ವೃತ್ತದಿಂದ ಮೆರವಣಿಗೆ ಹೊರಟ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರು ಹಾಗೂ ವಿವಿಧ ದಲಿತ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಅಂಚೆಕಚೇರಿ ಮುಂಭಾಗ ಜಮಾಯಿಸಿ ಮುತ್ತಿಗೆ ಹಾಕಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಮಂಜುಳಾ, ಕೇಂದ್ರ ಸರ್ಕಾರವು ಕಾರ್ಮಿಕರ ಹಿತಕಾಪಾಡುವ 29 ಕಾಯ್ದೆಗಳನ್ನು ರದ್ದುಮಾಡಿ, ಮಾಲಿಕರ ಪರವಾದ 4 ಹೊಸ ಸಂಹಿತೆಗಳನ್ನು ಜಾರಿಗೆ ತಂದಿದೆ. ಇದನ್ನು ರಾಜ್ಯ ಸರ್ಕಾರವೂ ಬೆಂಬಲಿಸಿರುವುದು ಖಂಡನೀಯ. ಇದರಿಂದ ಕಾರ್ಖಾನೆಗಳು, ಸ್ಕೀಮ್ ನೌಕರರು, ಮತ್ತು ಗ್ರಾಮ ಪಂಚಾಯಿತಿ ನೌಕರರಿಗೆ ತೀವ್ರ ತೊಂದರೆಯಾಗಲಿದ್ದು, ಖಾಸಗೀಕರಣಕ್ಕೆ ಹಾದಿ ಮಾಡಿಕೊಟ್ಟಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಂಗನವಾಡಿ ಮತ್ತು ಬಿಸಿಯೂಟ ನೌಕರರನ್ನು ಸರ್ಕಾರಗಳು ಬೀದಿಗೆ ತಳ್ಳುತ್ತಿವೆ. ಕೇಂದ್ರ ಸರ್ಕಾರ ಅಂಗನವಾಡಿ ನೌಕರರಿಗೆ ಕೇವಲ 2000-4000 ರು. ಹಾಗೂ ಬಿಸಿಯೂಟ ನೌಕರರಿಗೆ ಅತ್ಯಲ್ಪ ಗೌರವಧನ ನೀಡುವ ಮೂಲಕ ಶೋಷಣೆ ಮಾಡುತ್ತಿದೆ. ಕಾರ್ಮಿಕ ವಿರೋಧಿ ಕೋಡ್‌ಗಳನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಕಾಮಾಕ್ಷಿ ರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹರಿಹಾಯ್ದರು. ಕೇಂದ್ರ ಸರ್ಕಾರವು ಕಾರ್ಮಿಕರ ಪರವಿದ್ದ 29 ಕಾನೂನುಗಳನ್ನು ತಿದ್ದುಪಡಿ ಮಾಡಿ, 4 ಹೊಸ ಸಂಹಿತೆಗಳನ್ನು ಜಾರಿಗೆ ತಂದಿದೆ. ಹಿಂದೆ ನಾವು ಹೋರಾಟ ಮಾಡಿದಾಗ ಈ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿತ್ತು. ಆದರೆ, ಈಗ ಕೇಂದ್ರ ಸರ್ಕಾರ ಏಕಾಏಕಿ ಸಂಹಿತೆಗಳನ್ನು ಜಾರಿಗೆ ತರುತ್ತಿದ್ದು, ರಾಜ್ಯ ಸರ್ಕಾರವೂ ಅದನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು. ದೇಶಾದ್ಯಂತ ಎಲ್ಲಾ ಕಾರ್ಮಿಕ ಸಂಘಟನೆಗಳು ಒಗ್ಗೂಡಿ ಈ ಹೋರಾಟ ಮಾಡುತ್ತಿವೆ. ಸರ್ಕಾರ ಕೂಡಲೇ ಈ ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ಕಾರ್ಮಿಕರು ಸಜ್ಜಾಗಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ 12 ಕ್ಕೂ ಹೆಚ್ಚು ಸಂಘಟನೆಗಳು ಭಾಗವಹಿಸಿದ್ದು ಬೇಲೂರು ಮಹಿಳಾ ಒಕ್ಕೂಟದ ಅಧ್ಯಕ್ಷ ಭಾರತೀಗೌಡ, ಗ್ರಾಮ ಪಂಚಾಯತಿ ನೌಕರರ ಸಂಘದ ಅಧ್ಯಕ್ಷ ಈರಯ್ಯ, ಸಿಐಟಿಯುನ ಇಂದ್ರಮ್ಮ, ಬಿಸಿಊಟ ಉಪಾಧ್ಯಕ್ಷೆ ಮಹಾದೇವಿ, ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್, ವೇದಾವತಿ, ಇತರರು ಇದ್ದರು.