ಜಗದೀಶ ಶೆಟ್ಟರ್‌ ಬೆಳಗಾವಿಯಿಂದ ಅಖಾಡಕ್ಕೆ?

| Published : Jan 26 2024, 01:45 AM IST

ಜಗದೀಶ ಶೆಟ್ಟರ್‌ ಬೆಳಗಾವಿಯಿಂದ ಅಖಾಡಕ್ಕೆ?
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಹೀಗಾಗಿ ಬೆಳಗಾವಿ ಟಿಕೆಟ್‌ ಆಕಾಂಕ್ಷಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ.

ಶ್ರೀಶೈಲ ಮಠದ

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಾಂಗ್ರೆಸ್‌ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರ ರಾಜಕೀಯ ನಡೆ ಬೆಳಗಾವಿ ಕಮಲ ಪಾಳಯದಲ್ಲಿ ಟಿಕೆಟ್‌ ಆಕಾಂಕ್ಷಿಗಳಿಗೆ ಶಾಕ್‌ ಕೊಟ್ಟಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದಲೇ ಜಗದೀಶ ಶೆಟ್ಟರ್‌ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಮೊದಲಿನಿಂದಲೂ ಕೇಳಿಬರುತ್ತಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ಶೆಟ್ಟರ್‌ ಅವರು ಕಾಂಗ್ರೆಸ್‌ ತೊರೆದು ಮರಳಿ ಬಿಜೆಪಿ ಸೇರಿದ್ದಾರೆ. ಹಾಗೆ ನೋಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ತನ್ನಕೋಟೆಯನ್ನು ಮತ್ತಷ್ಟು ಭದ್ರಗೊಳಿಸಲು ಸಿದ್ಧತೆ ನಡೆಸಿತ್ತು. ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿತ್ತು. ಇದೀಗ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಮರಳಿ ಬಿಜೆಪಿ ಸೇರ್ಪಡೆಯಾಗಿರುವುದು ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ. ಮಾತ್ರವಲ್ಲ, ಬೆಳಗಾವಿಗೂ ಅದು ವರದಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್‌ ನಿರೀಕ್ಷೆ ಹುಸಿಯಾಗಿರುವ ಹಿನ್ನೆಲೆಯಲ್ಲಿ ಜಗದೀಶ ಶೆಟ್ಟರ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಆದರೂ ಕಾಂಗ್ರೆಸ್‌ ಪಕ್ಷ ಜಗದೀಶ ಶೆಟ್ಟರ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಆಯ್ಕೆ ಮಾಡಿತ್ತು. ಆದರೆ, ರಾಜಕಾರಣದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಶೆಟ್ಟರ್‌ ಕಾಂಗ್ರೆಸ್‌ ತೊರೆದು ಅಧಿಕೃತವಾಗಿ ಬಿಜೆಪಿಗೆ ಮರಳಿದ್ದಾರೆ. ಈ ಬೆಳವಣಿಗೆಯಿಂದ ಬೆಳಗಾವಿ ಜಿಲ್ಲಾ ರಾಜಕೀಯ ಲೆಕ್ಕಾಚಾರಗಳೆಲ್ಲವೂ ಬದಲಾಗುವ ಸಾಧ್ಯತೆಗಳಿವೆ.

ಸಂಸದರಾಗಿದ್ದ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ತಮ್ಮ ಬೀಗರಾದ ಮಂಗಲ ಸುರೇಶ ಅಂಗಡಿ ಅವರ ಗೆಲುವಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪ್ರಮುಖ ಪಾತ್ರ ವಹಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರಿಂದ ಹಾಲಿ ಸಂಸದೆ ಮಂಗಲ ಅಂಗಡಿ ಅವರ ರಾಜಕೀಯ ನಡೆ ಕೂಡ ಡೋಲಾಯಮಾನವಾಗಿತ್ತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಗಲ ಅಂಗಡಿ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆಗಳು ಕ್ಷೀಣಿಸಿದ್ದವು. ಇದರಿಂದಾಗಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆಯೂ ದೊಡ್ಡದ್ದಾಗಿತ್ತು.

ಆದರೆ, ಶೆಟ್ಟರ್‌ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಹಾಲಿ ಸಂಸದೆ ಮಂಗಲ ಅಂಗಡಿ ಅವರಿಗೆ ಮತ್ತೆ ಬಲ ಬಂದಂತಾಗಿದೆ. ಅಂಗಡಿ ಕುಟುಂಬ ಒಪ್ಪಿಗೆ ನೀಡಿದರೆ ಜಗದೀಶ ಶೆಟ್ಟರ್‌ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಶೆಟ್ಟರ್‌ ಬೆಳಗಾವಿ ಚುನಾವಣಾ ಆಖಾಡಕ್ಕಿಳಿದರೆ ಆಗುವ ಲಾಭಗಳೇನು? ಹಾನಿಗಳೇನು? ಎನ್ನುವ ರಾಜಕೀಯ ಲೆಕ್ಕಾಚಾರಗಳು ಕೂಡ ಬಿಜೆಪಿಯಲ್ಲಿ ಶುರುವಾಗಿವೆ. ಏನೇ ಆಗಲಿ ಬೆಳಗಾವಿ ಕ್ಷೇತ್ರದಿಂದ ಅಂತಿಮವಾಗಿ ಯಾರಿಗೆ ಟಿಕೆಟ್‌ ಸಿಗುತ್ತದೆ ಎನ್ನುವುದನ್ನು ಕಾಯ್ದು ನೋಡಬೇಕು.

-------

ಕೋಟ್‌.....

ತಮ್ಮ ಬೀಗರಾದ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಮರಳಿ ಬಿಜೆಪಿಗೆ ಸೇರ್ಪಡೆಯಾಗಿರುವುದು ಖುಷಿವಿಚಾರ. ಇದರಿಂದಾಗಿ ನಮಗೆ ಬಲ ಬಂದಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಅಂಗಡಿ ಕುಟುಂಬಕ್ಕೆ ಬಿಜೆಪಿ ಟಿಕೆಟ್‌ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ. ನಾವು ಯಾರಿಗೂ ಟಿಕೆಟ್‌ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ

ಮಂಗಲ ಅಂಗಡಿ, ಸಂಸದೆ

---

ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅರು ಬಿಜೆಪಿ ಸೇರಿರುವುದು ನಮ್ಮ ಕುಟುಂಬಕ್ಕೆ ಅಷ್ಟೇಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಂಗ ಖುಷಿ ತಂದಿದೆ. ಈ ದಿನ ಉತ್ತರ ಕರ್ನಾಟಕ ಭಾಗಕ್ಕೆ ಶುಭ ದಿನ. ಸಂತೋಷದ ದಿನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಕುರಿತು ಚರ್ಚೆ ಮಾಡಿಲ್ಲ. ಬೇರೆಯವರಿಗೆ ಟಿಕೆಟ್‌ ಕೊಟ್ಟರೂ ನಾವು ಕೆಲಸ ಮಾಡುತ್ತೇವೆ. ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದ ಹೈಕಮಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ.

- ಶ್ರದ್ಧಾ ಅಂಗಡಿ (ಶೆಟ್ಟರ್‌), ಜಗದೀಶ ಶೆಟ್ಟರ್‌ ಸೊಸೆ