ಸಮಾಜದಲ್ಲಿ ಪೊಲೀಸ್ ಇಲಾಖೆ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸಲು ಜನಸಂಪರ್ಕ ಸಭೆ ಉತ್ತಮ ವೇದಿಕೆ. ಸಾರ್ವಜನಿಕರು ತಮ್ಮ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಈ ಸಭೆಯಲ್ಲಿ ತಿಳಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ನೆಲಮಂಗಲ ಉಪವಿಭಾಗದ ಡಿವೈಎಸ್‌ಪಿ ಉಮಾರಾಣಿ ತಿಳಿಸಿದರು.

ಬಿಲ್ಲನಕೋಟೆ ಗ್ರಾಮದಲ್ಲಿ ದಾಬಸ್‍ಪೇಟೆ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ಸಮಾಜದಲ್ಲಿ ಪೊಲೀಸ್ ಇಲಾಖೆ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸಲು ಜನಸಂಪರ್ಕ ಸಭೆ ಉತ್ತಮ ವೇದಿಕೆ. ಸಾರ್ವಜನಿಕರು ತಮ್ಮ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಈ ಸಭೆಯಲ್ಲಿ ತಿಳಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ನೆಲಮಂಗಲ ಉಪವಿಭಾಗದ ಡಿವೈಎಸ್‌ಪಿ ಉಮಾರಾಣಿ ತಿಳಿಸಿದರು.ಸೋಂಪುರ ಹೋಬಳಿಯ ಬಿಲ್ಲನಕೋಟೆ ಗ್ರಾಮದಲ್ಲಿ ದಾಬಸ್‍ಪೇಟೆ ಪೊಲೀಸ್ ಠಾಣೆ ವತಿಯಿಂದ ನಡೆದ ಸಾರ್ವಜನಿಕ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಅಭಿಪ್ರಾಯವನ್ನು ಉತ್ತಮಗೊಳಿಸಲು ಈ ಕಾರ್ಯಕ್ರಮ ಅನುಕೂಲವಾಗಿದೆ. ಪೊಲೀಸ್ ಇಲಾಖೆ ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್‌ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ. ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದಲ್ಲದೇ, ಜನರಲ್ಲಿ ಭದ್ರತೆ, ವಿಶ್ವಾಸ ಮೂಡಿಸುವುದು ಪೊಲೀಸ್ ಇಲಾಖೆಯ ಕರ್ತವ್ಯವೂ ಆಗಿದೆ ಎಂದು ಹೇಳಿದರು.ಕೆಲವರು ಎಸ್‍ಐಆರ್ ಪ್ರಕ್ರಿಯೆ ಹೆಸರಲ್ಲಿ ನಿಮ್ಮ ಪೋನ್ ಗೆ ಓಟಿಪಿ ಕಳುಹಿಸಿ ಹಣದೋಚುವ ಕೆಲಸ ಮಾಡುವ ಸಂಭವವಿರುತ್ತದೆ. ಅನಧಿಕೃತ ವ್ಯಕ್ತಿಗಳಿಗೆ ಓಟಿಪಿ ಹೇಳಬೇಡಿ. ಸಾಮಾಜಿಕ ಜಾಲತಾಣ ಜಾಹೀರಾತುಗಳಿಗೆ ಮೋಸಹೋಗಬೇಡಿ ಎಂದು ತಿಳಿ ಹೇಳಿದರು.ದಾಬಸ್‍ಪೇಟೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಧರ್ಮೇಂದ್ರ ಮಾತನಾಡಿ, ಪೊಲೀಸ್‌ ಅಂದರೆ ಭಯವಲ್ಲ, ಭರವಸೆ ಎಂಬ ವಿಶ್ವಾಸವಿದ್ದರೆ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಇಂದು ಮಾದಕ ವಸ್ತು ಬಳಕೆ ಜಾಗತಿಕ ಸಮಸ್ಯೆಯಾಗಿದೆ. ಇಂದು ಲಕ್ಷಾಂತರ ಜನರು ಇಂತಹ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಮಾದಕ ವ್ಯಸನಮುಕ್ತ ಜಗತ್ತನ್ನು ನಿರ್ಮಾಣ ಮಾಡುವಲ್ಲಿ ಜನರ ಸಹಕಾರ ಅತ್ಯಗತ್ಯ. ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ ಆ ಮಾಹಿತಿಗಳನ್ನು ಪೊಲೀಸರ ಬಳಿ ಹಂಚಿಕೊಳ್ಳಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ತಂದಾಗ ಡಿವೈಎಸ್ ಪಿ ತಕ್ಷಣ ಪತ್ತೆ ಹಚ್ಚಿ ಅವರ ಮೇಲೆ ಕೇಸು ದಾಖಲಿಸುವಂತೆ ಇನ್‌ಸ್ಪೆಕ್ಟರ್ ಗೆ ಸೂಚನೆ ನೀಡಿದರು.

ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳಾದ ಸಿದ್ದಪ್ಪ, ದಿವ್ಯ ಸೇರಿ ಸಿಬ್ಬಂದಿ ಉಪಸ್ಥಿತರಿದ್ದರು.------------

ಪೋಟೋ1:ಸೋಂಪುರ ಹೋಬಳಿ ಬಿಲ್ಲನಕೋಟೆ ಗ್ರಾಮದಲ್ಲಿ ದಾಬಸ್‍ಪೇಟೆ ಪೊಲೀಸ್ ಠಾಣೆ ವತಿಯಿಂದ ನಡೆದ ಸಾರ್ವಜನಿಕ ಜನಸಂಪರ್ಕ ಸಭೆಯಲ್ಲಿ ಡಿವೈಎಸ್ ಪಿ ಉಮಾರಾಣಿ ಮಾತನಾಡಿದರು.