ಯಾವುದೇ ಕಾಮಗಾರಿಗೆ ಅನುದಾನ ನೀಡುವ ಮೊದಲು ಸ್ಥಳ ಪರಿಶೀಲನೆ ನಡೆಸುವುದು ತಮ್ಮ ರೂಢಿ. ರಸ್ತೆ ಅಭಿವೃದ್ಧಿಯಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಇನ್ನೂ ಮೂಲಸೌಕರ್ಯಗಳ ಕೊರತೆಯಿದ್ದು, ಅವುಗಳನ್ನು ಹಂತ-ಹಂತವಾಗಿ ನಿವಾರಿಸಬೇಕಿದೆ.

ಹುಬ್ಬಳ್ಳಿ:

ಕಾಂಗ್ರೆಸ್‌ ಸರ್ಕಾರ ಎಂದಿಗೂ ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷ, ಜಾತಿ, ಧರ್ಮ ನೋಡದೆ ಜನರ ಸಮಸ್ಯೆಗಳಿಗೆ ಸದಾಕಾಲ ಸ್ಪಂದಿಸುತ್ತದೆ. ಸ್ಥಳೀಯವಾಗಿ ಯಾವುದೇ ಸಮಸ್ಯೆ ಗಮನಕ್ಕೆ ತಂದರೆ ಪರಿಶೀಲಿಸಿ ಅಗತ್ಯ ಅನುದಾನ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಅವರು ಬುಧವಾರ ಸಂಜೆ ಹಳೇಹುಬ್ಬಳ್ಳಿ ಭಾಗದ ವಾರ್ಡ್‌ ನಂ. 34ರ ಗುಡಿಹಾಳ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ₹5.78 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕಾಮಗಾರಿಗೆ ಚಾಲನೆ ನೀಡಿ, ಸ್ಥಳೀಯ ಸಂಘ-ಸಂಸ್ಥೆಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಯಾವುದೇ ಕಾಮಗಾರಿಗೆ ಅನುದಾನ ನೀಡುವ ಮೊದಲು ಸ್ಥಳ ಪರಿಶೀಲನೆ ನಡೆಸುವುದು ತಮ್ಮ ರೂಢಿ. ರಸ್ತೆ ಅಭಿವೃದ್ಧಿಯಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಇನ್ನೂ ಮೂಲಸೌಕರ್ಯಗಳ ಕೊರತೆಯಿದ್ದು, ಅವುಗಳನ್ನು ಹಂತ-ಹಂತವಾಗಿ ನಿವಾರಿಸಬೇಕಿದೆ. ಈ ಕಾರ್ಯದಲ್ಲಿ ಮಹಾನಗರ ಪಾಲಿಕೆ ಸರ್ಕಾರದೊಂದಿಗೆ ಸಹಕಾರ ನೀಡಿದರೆ ಅಭಿವೃದ್ಧಿಗೆ ಮತ್ತಷ್ಟು ಕೈಜೋಡಿಸಲಾಗುವುದು ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ರಾಜ್ಯದ ಅಭಿವೃದ್ಧಿಗೆ ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಅನುಕೂಲಕ್ಕಾಗಿ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಯಾವುದೇ ಪಕ್ಷ ಅಥವಾ ಸಮುದಾಯದ ಭೇದವಿಲ್ಲದೆ ಎಲ್ಲರಿಗೂ ಸೌಲಭ್ಯ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ದೊರೆತಿದೆ ಎಂದರು.

ವಾರ್ಡಿನ ಹಿರಿಯರಾದ ಅಲ್ಲಾಭಕ್ಷ ಮಾತನಾಡಿದರು. ಮಹಾನಗರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಲ್ತಾಫಹುಸೇನ ಹಳ್ಳೂರ, ಗ್ರಾಮೀಣ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ದೀಪಾ ಗೌರಿ, ಪಾಲಿಕೆ ಸದಸ್ಯರಾದ ಮಂಗಳಾ ಗೌರಿ, ಇಕ್ಬಾಲ್ ನವಲೂರ, ಚೇತನ ಹಿರೇಕೆರೂರ, ದಾನಪ್ಪ ಕಬ್ಬೇರ, ಸುವರ್ಣ ಕಲ್ಲಕುಂಟ್ಲಾ ಸೇರಿದಂತೆ ಹಲವರಿದ್ದರು.