ಕನ್ನಡಪ್ರಭ ವಾರ್ತೆ ಶಿರಾ
ಸಾರ್ವಜನಿಕ ಆಸ್ಪತ್ರೆ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಮತ್ತು ಅತ್ಯವಶ್ಯಕ ಔಷಧಗಳ ಪೂರೈಕೆ ಸಮಸ್ಯೆ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳುವ ಮೂಲಕ ಶಿರಾ ತಾಲೂಕಿನಲ್ಲಿ ವೈದ್ಯರ ಕೊರೆತೆ ಇರುವುದನ್ನು ಶಾಸಕ ಟಿ.ಬಿ. ಜಯಚಂದ್ರ ಒಪ್ಪಿಕೊಂಡರು.ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈದ್ಯರ ನೇಮಕಾತಿ ಹಾಗೂ ಅಗತ್ಯ ಅಧಿಕಾರಿಗಳ ಪೂರೈಕೆ ಕುರಿತು ಚರ್ಚೆಯ ಸಮಯದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಬಾಬು ರಾಜೇಂದ್ರ ಪ್ರಸಾದ್ ಆಸ್ಪತ್ರೆಯಲ್ಲಿ ಒಬ್ಬ ಸರ್ಜನ್, ಒಬ್ಬ ಫಿಜಿಶಿಯನ್, ಇಬ್ಬರು ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು ಹಾಗೂ ನಾಲ್ವರು ಸುಶ್ರೂಷಾಧಿಕಾರಿಗಳ ಕೊರತೆ ಇದೆ ಎಂದು ಸಭೆಯ ಗಮನಕ್ಕೆ ತಂದರು. ಈ ವೇಳೆ ಪ್ರತಿಕ್ರಿಯಿಸಿದ ಶಾಸಕರು. ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುವುದು. ಆದರೆ ಅಲ್ಲಿಯವರೆಗೆ ತಾಯಿ-ಮಕ್ಕಳ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಪರಸ್ಪರ ಸಮನ್ವಯದೊಂದಿಗೆ ಸೇವೆ ನೀಡುವಂತೆ ಸೂಚಿಸಿದರು.
ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ಸೂಚನೆ: ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸಮರ್ಪಕವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಗ್ರಾಮೀಣ ಕುಡಿಯುವ ನೀರಿನ ಅಧಿಕಾರಿ ಮಂಜುಪ್ರಸಾದ್, ಶಿರಾ ತಾಲೂಕಿನಲ್ಲಿ ಒಟ್ಟು ೨೩೪ ಕುಡಿಯುವ ನೀರಿನ ಘಟಕಗಳಿದ್ದು, ೩೧ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ತಾವರೆಕೆರೆ ಘಟಕದ ನಿರ್ವಹಣೆ ಹೊತ್ತ ಖಾಸಗಿ ಸಂಸ್ಥೆಗೆ ನೋಟಿಸ್ ನೀಡಲಾಗಿದೆ ಎಂದರು.ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಒತ್ತು: ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲಿಸಿದ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ, ಕರ್ನಾಟಕದಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ಒಟ್ಟು 43,441 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಲ್ಲಿ ೧೬,೭೦೮ ವಿದ್ಯಾರ್ಥಿಗಳು ಖಾಸಗಿ ಶಾಲೆಗಳು ಹಾಗೂ ೨೬,೭೩೩ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗಳ ಗುಣಮಟ್ಟ, ಮೂಲಸೌಕರ್ಯ ಮತ್ತು ಕಲಿಕಾ ವಾತಾವರಣವನ್ನು ಇನ್ನಷ್ಟು ಉತ್ತಮಗೊಳಿಸಿದರೆ ಹೆಚ್ಚಿನ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳು ಆಕರ್ಷಿತರಾಗಲಿದೆ, ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದರು.
ಸಭೆಯಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಎಂ. ಮಹೇಶ್, ತಾಲೂಕು ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷ ಪ್ರಧಾನ ನಾಗರಾಜು ಆರ್., ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಶಶಿಧರ್ ಜಿ.ಆರ್., ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಆರ್., ತಹಸೀಲ್ದಾರ್ ಆನಂದ್ ಕುಮಾರ್, ನಗರಸಭೆ ಆಯುಕ್ತ ರುದ್ರೇಶ್, ಯೋಜನಾಧಿಕಾರಿ ರಂಗನಾಥ್ ಆರ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು.