ಎಂ.ಅಫ್ರೋಜ್ ಖಾನ್ ಕನ್ನಡಪ್ರಭ ವಾರ್ತೆ ರಾಮನಗರಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿರುವ ಜೆಡಿಎಸ್, ತನ್ನ ಮಿತ್ರ ಪಕ್ಷ ಬಿಜೆಪಿಯೊಂದಿಗೆ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ.ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಜೊತೆಗೂಡಿ ಜೆಡಿಎಸ್ ಭಾನುವಾರದಿಂದ ಮೂರು ದಿನಗಳ ಕಾಲ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದಕ್ಕೆ ಬಿಜೆಪಿ ಕೂಡ ನೈತಿಕ ಬೆಂಬಲ ವ್ಯಕ್ತಪಡಿಸಿದೆ.ಕಳೆದ 520 ದಿನಗಳಿಂದ ನಡೆಯುತ್ತಿರುವ ಅನ್ನದಾತರ ಹೋರಾಟದ ಶಕ್ತಿ ಕೇಂದ್ರವಾದ ಬೈರಮಂಗಲ ವೃತ್ತದಲ್ಲಿ ತೆಂಗಿನ ಸಸಿ ನೆಡುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಬೆಳಗ್ಗೆ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮತ್ತಿತರ ನಾಯಕರು ಸಾಥ್ ನೀಡಲಿದ್ದಾರೆ. ಮೂರು ದಿನಗಳ ಕಾಲ 38 ಕಿಲೋ ಮೀಟರ್ ಪಾದಯಾತ್ರೆ ನಿಖಿಲ್ ನೇತೃತ್ವದಲ್ಲಿ ನಡೆಯಲಿದ್ದು, ಕಾಲ್ನಡಿಗೆ ಸಾಗುವ ಮಾರ್ಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರುವ ಕಟೌಟ್ ಗಳು, ಬ್ಯಾನರ್ಗಳು, ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಇದರೊಂದಿಗೆ ರಸ್ತೆಯುದ್ದಕ್ಕೂ ಜೆಡಿಎಸ್ ಪಕ್ಷದ ಬಾವುಟಗಳನ್ನು ಕಟ್ಟಲಾಗಿದೆ.
ಮಾರ್ಗದುದ್ದಕ್ಕೂ ಅಲ್ಲಲ್ಲಿ ಕುಡಿಯುವ ನೀರು, ಮಜ್ಜಿಗೆ, ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಕಾರ್ಯಕರ್ತರ ಉತ್ಸಾಹ ಹೆಚ್ಚಿಸಲು ಧ್ವನಿವರ್ಧಕಗಳ ಮೂಲಕ ದೇಶ ಭಕ್ತಿಗೀತೆ, ರೈತ ಗೀತೆ ಹಾಗೂ ಪಕ್ಷದ ಗೀತೆಗಳನ್ನು ಬಿತ್ತರಿಸಲು ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆ ವೇಳಾಪಟ್ಟಿಆಗಸ್ಟ್ 9: ಬೆಳಗ್ಗೆ ಬೈರಮಂಗಲ ವೃತ್ತದಲ್ಲಿ ಎಚ್ಡಿಕೆ, ಅಶೋಕ್ರಿಂದ ಪಾದಯಾತ್ರೆಗೆ ಹಸಿರು ನಿಶಾನೆ. ವೇದಿಕೆ ಕಾರ್ಯಕ್ರಮದ ಬಳಿಕ ಬೈರಮಂಗಲದಿಂದ ಬಿಡದಿವರೆಗೆ 8-9 ಕಿ.ಮೀ. ಪಾದಯಾತ್ರೆ. ಮಧ್ಯಾಹ್ನ ಜೋಗರದೊಡ್ಡಿಯಲ್ಲಿ ಮಧ್ಯಾಹ್ನದ ಊಟ. ಸಂಜೆ ಬಿಡದಿಯ ಮಂಜುನಾಥ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ.ಆಗಸ್ಟ್ 10: ಬೆಳಗ್ಗೆ ಬಿಡದಿಯಲ್ಲಿ ದೇವೇಗೌಡರಿಂದ ಪಾದಯಾತ್ರೆಗೆ ಚಾಲನೆ. ಬಳಿಕ, ಮೈಸೂರು ರಸ್ತೆ ನೈಸ್ ಜಂಕ್ಷನ್ವರೆಗೆ 14 ಕಿ.ಮೀ. ಕಾಲ್ನಡಿಗೆ. ಶೇಷಗಿರಿ ಟೋಲ್ ಪ್ಲಾಜಾ ಬಳಿಯ ಎಂ.ಸಿರಿ ಕನ್ವೆನ್ಶನ್ ಹಾಲ್ನಲ್ಲಿ ಮಧ್ಯಾಹ್ನದ ಊಟ. ನೈಸ್ ಜಂಕ್ಷನ್ನ ಜೆ.ಕೆ. ಗ್ರ್ಯಾಂಡ್ ನಲ್ಲಿ ವಾಸ್ತವ್ಯ.ಆಗಸ್ಟ್ 11: ಬೆಳಗ್ಗೆ ಮೈಸೂರು ರಸ್ತೆಯ ನೈಸ್ ಜಂಕ್ಷನ್ನಿಂದ ಹೊರಟು ಮಧ್ಯಾಹ್ನ ಫ್ರೀಡಂ ಪಾರ್ಕ್ ತಲುಪುವುದು. ಅಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಗಬೇಕೋ ಅಥವಾ ರಾಜಭವನಕ್ಕೆ ತೆರಳಬೇಕೋ ಎಂಬುದನ್ನು ಉಭಯ ಪಕ್ಷಗಳ ನಾಯಕರು ನಿರ್ಧರಿಸಲಿದ್ದಾರೆ.