ಸಾರಾಂಶ
ಶಿವಮೊಗ್ಗ: ನಗರದಲ್ಲಿ ನಡೆದ ಸಹಕಾರಿ ಕ್ಷೇತ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಬಹುಪಾಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಜಯಶೀಲರಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿಸಿದೆ ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.ನಗರದ ಜಿಲ್ಲಾ ಜೆಡಿಎಸ್ ಕಾರ್ಯಾಲಯದಲ್ಲಿ ಶಿವಮೊಗ್ಗದ ನಗರ ಜೆಡಿಎಸ್ ಘಟಕದಿಂದ ಮಂಗಳವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಗೆದ್ದವರು ಪಕ್ಷಕ್ಕಾಗಿ ಹೆಚ್ಚಿನ ಸಮಯ ಕೊಡಿ. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಕ್ರಿಯಾಶೀಲರಾಗಿದ್ದಾರೆ. ನಮ್ಮನ್ನೆಲ್ಲ ನಾಚಿಸುವಂತೆ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಬೇರು ಮಟ್ಟದಿಂದ ಪಕ್ಷ ಸಂಘಟಿಸಬೇಕೆಂದು ಕರೆ ನೀಡಿದ್ದಾರೆ. ಅದರಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಕೆಲಸ ಮಾಡಬೇಕು ಎಂದರು.
ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿ, ಮುಂಬರುವ ಜಿಪಂ, ತಾಪಂ ಹಾಗೂ ಪಾಲಿಕೆ ಚುನಾವಣೆಯಲ್ಲಿ ನಾವು ಹೆಚ್ಚಿನ ಸ್ಥಾನ ಗಳಿಸಬೇಕು. ಹಾಗಾಗಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸಿ. ಈಗಿನಿಂದಲೇ ಕೆಲಸ ಪ್ರಾರಂಭ ಮಾಡಿ ಎಂದು ಕರೆ ನೀಡಿದರು.ಇದೇ ವೇಳೆ ಗೆದ್ದ ಪಮುಖರಾದ ಎಸ್.ಟಿ.ಕೃಷ್ಣೇಗೌಡ, ಉಮಾಶಂಕರ ಉಪಾಧ್ಯ, ಕೆ.ಎನ್.ರಾಮಕೃಷ್ಣ, ನರಸಿಂಹ ಗಂಧದಮನೆ, ಮಹೇಶ್, ಕಾಂತರಾಜ್, ಮಾಧವಮೂರ್ತಿ, ರಮೇಶ್ ನಾಯ್ಕ್, ಅಬ್ದುಲ್ ವಾಜಿದ್, ವೀರೇಶ್ ಸೇರಿದಂತೆ 30ಕ್ಕೂ ಹೆಚ್ಚು ಮಂದಿಯನ್ನು ಅಭಿನಂದಿಸಲಾಯಿತು.ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ತ್ಯಾಗರಾಜ್, ಸಿದ್ದಪ್ಪ, ಎಚ್.ಎಂ.ಸಂಗಯ್ಯ, ಬೊಮ್ಮನಕಟ್ಟೆ ಮಂಜುನಾಥ್, ಸಂಜಯ್ ಕಶ್ಯಪ್, ದಯಾನಂದ್, ವಿನಯ್, ಗೋಪಿ ಮೊದಲಿಯಾರ್ ಮೊದಲಾದವರಿದ್ದರು.