ಕನ್ನಡಪ್ರಭ ವಾರ್ತೆ ಮದ್ದೂರುಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ವಿರುದ್ಧ ಜೆಡಿಎಸ್ ಮಹಿಳಾ ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ಮದ್ದೂರು ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯ ರಾಮಚಂದ್ರ ಶೆಟ್ಟಿ ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಪ್ರವಾಸಿ ಮಂದಿರ ವೃತ್ತದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಸ್ತ್ರೀಯರಿಗೆ ಅಗೌರವ ತೋರಿದ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಶಯದಂತೆ ಮಹಿಳೆಯರಿಗೆ ಶಾಸನಸಭೆಗಳಲ್ಲಿ ಶೇ.30ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದರು. ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ನಾರಿ ಶಕ್ತಿ ವಂದನಾ ಅಧಿನಿಯಮದ ಬಿಲ್ಲನ್ನು ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ವಿರೋಧಿಸುವ ಮೂಲಕ ಬಿಲ್ಲನ್ನು ಜೀವಂತ ಕೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್ ಸರ್ಕಾರದ ಈ ಮಹಿಳಾ ವಿರೋಧಿ ಧೋರಣೆ ವಿರುದ್ಧ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. ಬಿಜೆಪಿಯ ಶ್ವೇತಾ ಅಶೋಕ್ ಮಾತನಾಡಿ, ಮಹಿಳೆಯರು ರಾಜಕೀಯ ಅಧಿಕಾರ ಪಡೆಯುವುದು ನಾಯಕರಿಗೆ ಬೇಕಿಲ್ಲ. ಅವರನ್ನು ಗ್ಯಾರಂಟಿ ಯೋಜನೆಗಳ ಮೂಲಕ ಆಮಿಷವೊಡ್ಡಿ ಕೇವಲ ಮತ ನೀಡುವುದಕ್ಕೆ ಮಾತ್ರ ಸೀಮಿತಗೊಳಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅವಸಾನ ನಿಶ್ಚಿತ ಎಂದು ತಿಳಿಸಿದರು.ನಂತರ ಹಳೇ ಎಂ.ಸಿ .ರಸ್ತೆ ಮೂಲಕ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ನಂತರ ಗ್ರೇಟ್ ತಹಸೀಲ್ದಾರ್ ಸೋಮಶೇಖರ್ ಮೂಲಕ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ತಾಪಂ ಮಾಜಿ ಅಧ್ಯಕ್ಷೆ ಚೌಡಮ್ಮ, ಗ್ರಾಪಂ ಮಾಜಿ ಸದಸ್ಯ ನಳಿನ, ನಂದಿನಿ ಪ್ರೇಮ ,ಪದ್ಮ, ಪುರಸಭೆ ಮಾಜಿ ಅಧ್ಯಕ್ಷ ರಾದಪರ್ವೇಜ್, ಎಂ. ಐ.ಪ್ರವೀಣ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಹೇಶ್, ಮುಖಂಡರಾದ ಕೆಂಗಲ್ ಗೌಡ, ಮಲ್ಲರಾಜು, ಜುನೈದಿ, ಕುಂದನಕುಪ್ಪೆ ಕುಮಾರ್ ಮತ್ತಿತರರು ಭಾಗವಹಿಸಿದ್ದರು.