ಧಾರವಾಡ:

ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯಾದ್ಯಂತ ಉದ್ಯೋಗ ಮೇಳ ಆಯೋಜಿಸುತ್ತಿದ್ದು, ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಕರ್ನಾಟಕ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತವು ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಉದ್ಯೋಗ ಮೇಳ ಉದ್ಘಾಟಿಸಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಅಭಿಪ್ರಾಯ ಪಡೆಯಲಾಗುತ್ತಿದ್ದು ಈ ಕುರಿತು ಕ್ರಮವಹಿಸಲು ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಸರ್ಕಾರ ಯುವಜನತೆಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40 ಸಾವಿರಕ್ಕೂ ಹೆಚ್ಚು ಉದ್ಯೋಗ ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸುವುದು ಉದ್ಯೋಗ ಮೇಳಗಳ ಮುಖ್ಯ ಉದ್ದೇಶ. ಸರ್ಕಾರವು ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, 56 ಸಾವಿರ ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ ಎಂದು ಹೇಳಿದರು. ಉದ್ಯೋಗ ಮೇಳದಲ್ಲಿ ಒಟ್ಟು 3,058 ಅಭ್ಯರ್ಥಿಗಳು ಭಾಗವಹಿಸಿದ್ದು, ವಿವಿಧ ಕ್ಷೇತ್ರಗಳ 122 ಕಂಪನಿಗಳು ಹಾಜರಾಗಿ ನೇರ ಸಂದರ್ಶನ ನಡೆಸಿದರು. 1,253 ಅಭ್ಯರ್ಥಿಗಳು ಅಂತಿಮ ಪಟ್ಟಿಗೆ ಆಯ್ಕೆಯಾಗಿದ್ದು, ಕೊನೆಗೆ 719 ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ಆಯ್ಕೆ ಮಾಡಿ, ಸ್ಥಳದಲ್ಲಿಯೇ ಆಫರ್ ಲೇಟರ್ ನೀಡಲಾಗಿದೆ ಎಂದು ಜಿಪಂ ಸಿಇಒ ಭುವನೇಶ ಪಾಟೀಲ ಹೇಳಿದರು.

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಅಧಿಕಾರಿಗಳಾದ ದೀಪಕ ಮಡಿವಾಳರ, ಶಾಲಂ ಹುಸೇನ್, ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.