ವಿಕಾಸ ಸೇವಾ ಸಂಸ್ಥೆಯ ವತಿಯಿಂದ ಜು. 9ರಂದು ಕಾರ್ಕಳದಲ್ಲಿ ಬೃಹತ್ ಉದ್ಯೋಗ ಸಂದರ್ಶನ ಹಾಗೂ ‘ವಿಕಾಸ ಉದ್ಯೋಗ ಸೇತು’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಕಳ: ವಿಕಾಸ ಸೇವಾ ಸಂಸ್ಥೆಯ ವತಿಯಿಂದ ಜು. 9ರಂದು ಕಾರ್ಕಳದಲ್ಲಿ ಬೃಹತ್ ಉದ್ಯೋಗ ಸಂದರ್ಶನ ಹಾಗೂ ‘ವಿಕಾಸ ಉದ್ಯೋಗ ಸೇತು’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಕಳ ಕೇಂದ್ರವಾಗಿಟ್ಟುಕೊಂಡು ಜಿಲ್ಲೆಯಾದ್ಯಂತ ಹಲವು ರಚನಾತ್ಮಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ಉದ್ಯೋಗ ಮೇಳದ ಮೂಲಕ ಉಡುಪಿ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದರು.ಮಂಗಳೂರು, ಬೆಂಗಳೂರು ಹಾಗೂ ಉಡುಪಿ ಭಾಗದ 20ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್‌ಲೈನ್ ನೋಂದಣಿ ಕಡ್ಡಾಯವಾಗಿದೆ. ಮೊದಲ 1,000 ಅರ್ಜಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಸಂದರ್ಶನ ನಡೆಯಲಿದೆ. ಈ ಕಾರ್ಯಕ್ರಮದ ಮೂಲಕ 400ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು.

ಕೆಜಿಟಿಟಿ ಮೂಲಕ ಈಗಾಗಲೇ 700ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ದೊರೆತಿದೆ. ಪಾಸ್‌ಔಟ್ ವಿದ್ಯಾರ್ಥಿಗಳಿಗೆ ಬೆಂಗಳೂರು ಸೇರಿದಂತೆ ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದರು.ಸರ್ಕಾರಿ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿಯನ್ನೂ ವಿಕಾಸ ಪರೀಕ್ಷಾ ಸೇತು ಯೋಜನೆಯಡಿ ನೀಡಲಾಗುತ್ತಿದೆ. ಅಚೀವರ್ಸ್ ಟ್ರಸ್ಟ್ ಸೆಂಟರ್ ಸಹಯೋಗದಲ್ಲಿ ಜು. 5ರಿಂದ 30ರವರೆಗೆ 20 ದಿನಗಳ ಆನ್‌ಲೈನ್ ಕೋಚಿಂಗ್ ತರಗತಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ರಾಜೇಶ್, ನಿತಿನ್, ಸುಶಾಂತ್ ಬಜಗೋಳಿ ಹಾಗೂ ಧೀರಜ್ ಉಪಸ್ಥಿತರಿದ್ದರು.