ಕೊರಗ ಸಮುದಾಯದ ಸುಶಿಕ್ಷಿತ ಯುವಕ-ಯುವತಿಯರಿಗೆ ಉದ್ಯೋಗಾವಕಾಶಕ್ಕೆ ಪೂರಕ ಮತ್ತು ಅಗತ್ಯ ತರಬೇತಿ ನೀಡಿ, ಅವರಿಗೆ ಜಿಲ್ಲೆಯ ಸಣ್ಣ ಕೈಗಾರಿಕೆಗಳಲ್ಲಿ ಉದ್ಯೋಗಕ್ಕೆ ವ್ಯವಸ್ಥೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಉಡುಪಿ: ಕೊರಗ ಸಮುದಾಯದ ಸುಶಿಕ್ಷಿತ ಯುವಕ-ಯುವತಿಯರಿಗೆ ಉದ್ಯೋಗಾವಕಾಶಕ್ಕೆ ಪೂರಕ ಮತ್ತು ಅಗತ್ಯ ತರಬೇತಿ ನೀಡಿ, ಅವರಿಗೆ ಜಿಲ್ಲೆಯ ಸಣ್ಣ ಕೈಗಾರಿಕೆಗಳಲ್ಲಿ ಉದ್ಯೋಗಕ್ಕೆ ವ್ಯವಸ್ಥೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ತಾಪಂ ಸಭಾಂಗಣದಲ್ಲಿ ನಡೆದ ಕೊರಗ ಸಮುದಾಯದ ಕುಂದು ಕೊರತೆಗಳ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿರುವ ಎಲ್ಲ ಕೊರಗ ಸಮುದಾಯದ ಕುಟುಂಬಗಳ ನಿಖರ ವಿವರಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಶಾಸಕರು, ಮಣಿಪಾಲ ಕೆಎಂಸಿ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಸಿ, ವಿಶಿಷ್ಟ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.ಸಭೆಯಲ್ಲಿ ಮಾತನಾಡಿದ ಕೊರಗ ಸಮುದಾಯದ ಮುಖಂಡ ಗಣೇಶ್ ಕುಂಭಾಶಿ, ಈ ಹಿಂದೆ ಕೊರಗ ಸಮುದಾಯಕ್ಕೆ ಐಟಿಡಿಪಿ ಮೂಲಕ ಮನೆಗಳನ್ನು ನಿರ್ಮಿಸಲಾಗುತ್ತಿತ್ತು. ಈಗ ಅದನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೀಡಲಾಗಿದೆ. ನಿಗಮದ ನಿಯಮಗಳಿಂದಾಗಿ ಕೊರಗ ಸಮುದಾಯದ ಅನೇಕರು ವಸತಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಪುನಃ ಐಟಿಡಿಪಿ ಮೂಲಕವೇ ಮನೆ ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿದರು.
ಬೊಗ್ರ ಕೊರಗ ಕೊಕ್ಕರ್ಣೆ ಅವರು, ಭೂಮಿ ಇಲ್ಲದವರಿಗೆ ನಿವೇಶನ ನೀಡುವಂತೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕರು, ಕೊರಗ ಕುಟುಂಬಗಳಿಗೆ ತಲಾ 10 ಸೆಂಟ್ಸ್ ಭೂಮಿ ವಿತರಣೆಗೆ ಹಾವಂಜೆ ಗ್ರಾಮದಲ್ಲಿ 1.60 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಅದನ್ನು ಕೂಡಲೇ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಾ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.