ಕ್ಷಯರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆಯೊಂದಿಗೆ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಕ್ಷಯ ಮುಕ್ತ ವಿಜಯನಗರ ಜಿಲ್ಲೆ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಭಾಸ್ಕರ್ ಕರೆ ನೀಡಿದರು.

ಹೊಸಪೇಟೆ: ಕ್ಷಯರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆಯೊಂದಿಗೆ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಕ್ಷಯ ಮುಕ್ತ ವಿಜಯನಗರ ಜಿಲ್ಲೆ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಭಾಸ್ಕರ್ ಕರೆ ನೀಡಿದರು.

ನಗರದ ವಿಜಯನಗರ ಕಾಲೇಜಿನಲ್ಲಿ ಗುರುವಾರ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ಎನ್‌ಸಿಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷಯರೋಗವು ಮೈಕೋಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಮುಖ್ಯವಾಗಿ ಶ್ವಾಸಕೋಶಕ್ಕೆ ತಗುಲುತ್ತದೆ. ಸೋಂಕಿತ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ಹೊರಬರುವ ಸೂಕ್ಷ್ಮ ತುಂತುರುಗಳ ಮೂಲಕ ರೋಗಾಣುಗಳು ಗಾಳಿಯಲ್ಲಿ ಹರಡಿ ಇತರರಿಗೆ ಸೋಂಕು ತಗುಲಬಹುದು. ಶ್ವಾಸಕೋಶದ ಹೊರತಾಗಿ ದೇಹದ ಇತರ ಅಂಗಗಳಿಗೂ ಕ್ಷಯರೋಗ ಬರುವ ಸಾಧ್ಯತೆ ಇದ್ದು, ಇದನ್ನು ಶ್ವಾಸಕೋಶೇತರ ಕ್ಷಯ ಎಂದು ಕರೆಯಲಾಗುತ್ತದೆ ಎಂದು ಹೇಳಿದರು.

ಚಿಕಿತ್ಸೆ ಪಡೆಯದ ಸಾಂಕ್ರಾಮಿಕ ಕ್ಷಯರೋಗಿಯೊಬ್ಬರು ವರ್ಷಕ್ಕೆ ಸುಮಾರು10ರಿಂದ15 ಮಂದಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸಂಪೂರ್ಣ ಚಿಕಿತ್ಸೆ ಪಡೆಯಬೇಕು. ಎಚ್‌ಐವಿ ಸೋಂಕು ಸೇರಿದಂತೆ ರೋಗನಿರೋಧಕ ಶಕ್ತಿ ಕುಂಠಿತವಾಗಿರುವವರಲ್ಲಿ ಕ್ಷಯರೋಗದ ಅಪಾಯ ಹೆಚ್ಚಿರುತ್ತದೆ ಎಂದರು.

ರೋಗ ಲಕ್ಷಣ ಕಂಡರೆ ನಿರ್ಲಕ್ಷಿಸಬೇಡಿ:

ಎರಡು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ನಿರಂತರ ಕೆಮ್ಮು, ಸಂಜೆ ವೇಳೆಯಲ್ಲಿ ಹೆಚ್ಚಾಗುವ ಜ್ವರ, ಎದೆನೋವು, ತೂಕ ಇಳಿಕೆಯಾಗುವುದು, ಹಸಿವು ಕಡಿಮೆಯಾಗುವುದು ಹಾಗೂ ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರ ಅಥವಾ ಕ್ಷಯರೋಗ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡಮನಿ ತಿಳಿಸಿದರು.

ವಿಜಯನಗರ ಕಾಲೇಜಿನ ಪ್ರಾಚಾರ್ಯ ಪ್ರಭುಸ್ವಾಮಿ, ಪ್ರಾಧ್ಯಾಪಕರಾದ ಶಿವಕುಮಾರ್, ರವಿಕಿರಣ್ ಉಪಸ್ಥಿತರಿದ್ದರು.