ಕನ್ನಡಪ್ರಭ ವಾರ್ತೆ ಹಲಗೂರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಹಲಗೂರು ಪೊಲೀಸ್ ಠಾಣೆ ಪಿಎಸ್ಐ ಲೋಕೇಶ್ ಅಭಿಪ್ರಾಯಪಟ್ಟರು.

ಸಮೀಪದ ಕೊನ್ನಾಪುರ ಗ್ರಾಮದಲ್ಲಿ ವಿಶ್ವ ಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಹೋರಾಟದ ಫಲವಾಗಿ ಸಮಾಜಕ್ಕೆ ಸದೃಢ ಬದುಕು ಹಾಗೂ ಸಮೃದ್ಧ ಜೀವನ ಸಿಕ್ಕಿದೆ ಎಂದರು.

ಸಹೋದರತೆ ಮತ್ತು ಸಹಬಾಳ್ವೆಯ ಸಂದೇಶ ನೀಡಿದ ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಪ್ರಸ್ತುತ. ಸಮಾನತೆ, ಪರಸ್ಪರ ಗೌರವ ಮತ್ತು ಶಾಂತಿಯುತ ಸಹಜೀವನವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದೆ. ಸಮಾಜದಲ್ಲಿ ಎಲ್ಲ ವರ್ಗಗಳ ನಡುವೆ ಸೌಹಾರ್ದತೆ ಬೆಳೆಸಿಕೊಂಡು ಒಗ್ಗಟ್ಟಿನಿಂದ ಬದುಕುವುದೇ ಅವರ ಆಶಯಗಳನ್ನು ಸಾಕಾರಗೊಳಿಸುವ ಮಾರ್ಗವೆಂದು ತಿಳಿಸಿದರು.

ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕೊನ್ನಾಪುರ ಗ್ರಾಮದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಶಿವಲಿಂಗೇಗೌಡ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಗಳಮ್ಮ, ಎನ್.ಆರ್.ಸಿದ್ದರಾಜು, ಕೆ.ಬಿ.ಆನಂದಕುಮಾರ್, ಕೆ.ಟಿ.ಗಿರೀಶ್, ಕೆ.ಎಸ್.ಮನೋಜ್ ಕುಮಾರ್, ವಸಂತಕುಮಾರ, ಕೆ.ಜಿ.ಲಿಂಗಮೂರ್ತಿ, ಮಧುಸೂಧನ್, ದೇವರಾಜು, ಕೆ.ಎನ್.ಗಿರೀಶ್ ಕುಮಾರ್, ಶಿವಣ್ಣ, ಶಿವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಪಿಯುಸಿ ಪರೀಕ್ಷೆ: ಟಿ.ಎಚ್.ಪ್ರೀತಿ ಜಿಲ್ಲೆಗೆ ೪ನೇ ರ್‍ಯಾಂಕ್

ಕನ್ನಡಪ್ರಭ ವಾರ್ತೆ ಮಂಡ್ಯದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶ್ವಮಾನವ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಟಿ.ಎಚ್.ಪೀತಿ ಅವರು ವಿಜ್ಞಾನ ವಿಭಾಗದಲ್ಲಿ ೫೮೯ ಅಂಕಗಳನ್ನು ಪಡೆದು ರಾಜ್ಯಕ್ಕೆ ೧೧ನೇ ರ್‍ಯಾಂಕ್ ಹಾಗೂ ಜಿಲ್ಲೆಗೆ ೪ನೇ ರ್‍ಯಾಂಕ್ ಪಡೆದಿದ್ದಾರೆ. ಅವರಿಗೆ ಸಂಸ್ಥೆಯ ವತಿಯಿಂದ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಹಾಗೂ ಪ್ರಾಂಶುಪಾಲ ಡಾ.ಕೆ.ಸಿ.ಯೋಗಾನಂದ, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.