ಹನುಮಸಾಗರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಅಂಗವಾಗಿ ಸಮೀಪದ ಜಹಗೀರ ಗುಡದೂರ ಗ್ರಾಮದಲ್ಲಿ ಸೋಮವಾರ ಬೃಹತ್ ಮತದಾರರ ಜಾಗೃತಿ ಜಾಥಾ ನಡೆಸಲಾಯಿತು.

ಶ್ರೀಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಗ್ರಾಪಂ ಪಿಡಿಒ ನಿಂಗಪ್ಪ ಮೂಲಿಮನಿ ಚಾಲನೆ ನೀಡಿ ಮಾತನಾಡಿ, ಸುಭದ್ರ ದೇಶ ನಿರ್ಮಾಣದಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸಬೇಕು. 18 ವರ್ಷ ಪೂರ್ಣಗೊಂಡ ಯುವಕ-ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು. ನಿಧನ ಹೊಂದಿದ ಮತದಾರರ ಹೆಸರು ತೆಗೆದುಹಾಕುವುದು, ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಹೆಸರು ಹೊಂದಿರುವವರ ವಿವರಗಳನ್ನು ಸರಿಪಡಿಸುವುದು ಹಾಗೂ ಹೊರ ರಾಜ್ಯದ ಮತದಾರರ ಮಾಹಿತಿ ಪರಿಷ್ಕರಿಸುವುದು ಎಸ್‌ಐಆರ್-2026ರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಬಳಿಕ ಗ್ರಾಪಂ ಕಚೇರಿಯಿಂದ ಆರಂಭವಾದ ಜಾಗೃತಿ ಜಾಥಾವು ಮಹಾತ್ಮ ಗಾಂಧೀಜಿ ವೃತ್ತದ ಮೂಲಕ ಗ್ರಾಮದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿತು. ನಂತರ ಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜಾಥಾ ಸಮಾಪ್ತಿಯಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಸತ್ಯಪ್ಪ, ಕಂದಾಯ ಇಲಾಖೆಯ ಆಡಳಿತಾಧಿಕಾರಿ ರವಿ ಮದನ, ವಿವಿಧ ಇಲಾಖೆಗಳ ಅಧಿಕಾರಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಶಿಕ್ಷಕರು, ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.