ಕನ್ನಡಪ್ರಭ ವಾರ್ತೆ ಬೆಳಗಾವಿ
ಕ್ಷಯರೋಗವು ಅತೀ ಪುರಾತನ ರೋಗವಾಗಿದ್ದು, ಅನಾದಿ ಕಾಲದಿಂದಲು ನಿಯಂತ್ರಣಕ್ಕಾಗಿ ಸಂಶೋಧನೆಗಳು ನಡೆಯುತ್ತಲೇ ಬಂದಿವೆ. ಕ್ಷಯರೋಗವನ್ನು ನಾವು ನಿರ್ಮೂಲನೆ ಮಾಡಬೇಕಾದರೆ ಜನರು ಹಾಗೂ ಸಂಘ ಸಂಸ್ಥೆಗಳು ಸಾಮೂಹಿಕ ಹೊಣೆಗಾರಿಕೆಯನ್ನು ನಿಭಾಯಿಸಬೇಕಾಗಿದೆ. ಎಲ್ಲರೂ ಕ್ಷಯಮುಕ್ತ ಭಾರತ ಚಟುವಟಿಕೆಗೆ ಕೈಜೊಡಿಸಬೇಕು ಎಂದು ಕಹೇರ್ ಜೆ.ಎನ್.ವೈದ್ಯಕೀಯ ಮಹಾವಿದ್ಯಾಲಯದ ಉಪ ಕುಲಪತಿ ಡಾ.ಸಂದೀಪ ಶ್ರೀವಾಸ್ತವ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯರೋಗ ನಿಯಂತ್ರಣ ವಿಭಾಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಹೇರ್ ಜೆ.ಎನ್.ವೈದ್ಯಕೀಯ ಮಹಾವಿದ್ಯಾಲಯದಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಹೇರ್ ಜೆ.ಎನ್.ವೈದ್ಯಕೀಯ ಮಹಾವಿದ್ಯಾಲಯದ ರಿಜಿಸ್ಟ್ರಾರ್ ಡಾ.ವಿ.ಎಂ.ಪಟ್ಟಣಶೆಟ್ಟಿ ಮಾತನಾಡಿ, ಸರ್ಕಾರಿ ಸಂಸ್ಥೆಗಳು ಕ್ಷಯರೋಗ ನಿಯಂತ್ರಣಕ್ಕಾಗಿ 1962 ರಿಂದಲೂ ನಿರಂತರವಾಗಿ ಪ್ರಯತ್ನಿಸುತ್ತಿವೆ. ಖಾಸಗಿ ಆರೋಗ್ಯ ಸಂಸ್ಥೆಗಳು ಸರ್ಕಾರಗಳೊಂದಿಗೆ ಕೈಜೋಡಿಸಿ ಕ್ಷಯರೋಗ ನಿರ್ಮೂಲನೆ ಚಟುವಟಿಕೆಗಳನ್ನು ಜಂಟಿಯಾಗಿ ನಿರ್ವಹಿಸಿದಲ್ಲಿ ನಾವು ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ ಮಾತನಾಡಿ, ಕ್ಷಯರೋಗ ನಿರ್ಮೂಲನೆ ಆಗಬೇಕಾದರೆ ವೈದ್ಯಕೀಯ ಮಹಾವಿದ್ಯಾಲಯಗಳು, ಖಾಸಗಿ ಆರೋಗ್ಯ ಸಂಸ್ಥೆಗಳು ಹಾಗೂ ಆರೋಗ್ಯ ಮತ್ತು ಕು.ಕ. ಇಲಾಖೆ ಜಂಟಿಯಾಗಿ ಕಾರ್ಯಚಟುವಟಿಕೆಗಳನ್ನು ಆಯೋಜಿಸಿ ಅನುಷ್ಠಾನಗೊಳಿಸಿದಲ್ಲಿ ಸಾಧ್ಯವಾಗಬಹುದು ಎಂದು ಹೇಳಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಾಂದಿನಿ ಜಿ. ದೇವಡಿ ಮಾತನಾಡಿ, ಪ್ರಧಾನ ಮಂತ್ರಿಗಳು ಇಂದು ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೇಶಾದ್ಯಂತ 732 ಜಿಲ್ಲೆಗಳ 6704 ತಾಲೂಕುಗಳ 134044 ಗ್ರಾಮ ಪಂಚಾಯತಿ ವ್ಯಾಪ್ತಿಯ 158377 ಗ್ರಾಮಗಳನ್ನು ಸೂಕ್ಷ್ಮ ಗ್ರಾಮಗಳೆಂದು ಗುರುತಿಸಿ ಕ್ಷಯ ತಪಾಸಣೆಗೆ ಮುಂಬರುವ ನೂರು ದಿನಗಳಲ್ಲಿ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಭಾರತದ ನೇತೃತ್ವದಲ್ಲಿ, ಜನರ ಶಕ್ತಿಯೊಂದಿಗೆ ನಾವು ಕ್ಷಯರೋಗವನ್ನು ನಿರ್ಮೂಲನೆ ಮಾಡಬಹುದು ಎಂಬ ಘೊಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಈ ವೇಳೆ ಬೆಳಗಾವಿಯ ಕಹೇರ್ ಜೆ.ಎನ್.ವೈದ್ಯಕೀಯ ಮಹಾವಿದ್ಯಾಲಯ ಉಪ ಪ್ರಾಂಶುಪಾಲ ಡಾ.ನಯನಾ ಹಾಸಿಲಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಾಂದಿನಿ ಜಿ.ದೇವಡಿ ಹಾಗೂ ಭಾರತಿಯ ವೈದ್ಯಕೀಯ ಸಂಘದ ಪ್ರತಿನಿಧಿಯಾಗಿ ಡಾ.ಸಂತೋಷ ಗಾಡದವರ, ಶ್ವಾಸಕೋಶ ವಿಭಾಗದ ಮುಖ್ಯಸ್ಥೆ ಪ್ರೊ.ಭಾಗ್ಯಶ್ರೀ ಪಾಟೀಲ, ಮೈಕ್ರೋಬಯೋಲಾಜಿ ವಿಭಾಗದ ಮುಖ್ಯಸ್ಥ ಪ್ರೋ. ಶಿತಲ ಹರಕುಣಿ ಮೊದಲಾದವರು ಉಪಸ್ಥಿತರಿದ್ದರು.