ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಧಕ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ರಾಜ್ಯ ಚೇಂಬರ್ ಆಫ್ ಕಾಮಸ್೯ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಕನ್ನಡ ಭವನ ಸಂಸ್ಥೆಯಿಂದ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ತಮಿಳು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಬಿ.ಸಿ. ದಿನೇಶ್, ಎನ್ ಎಸ್ ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್. ವನಿತ್ ಕುಮಾರ್, ಬುದ್ದ ನಾಡ ಭೂಷಣ ಪ್ರಶಸ್ತಿ ಪಡೆದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಮಾತನಾಡಿ, 15 ತಿಂಗಳಿನಿಂದ ಸಂಘವು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಮಾಜ ಮುಖಿಯಾಗಿದೆ. ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ ಅಭಿಪ್ರಾಯ ಸಮಾಜ ಬಾಂಧವರಿಂದ ವ್ಯಕ್ತವಾಗಿದೆ ಎಂದರು.
ಸಂಘದ ಪ್ರಧಾನ ಕಾರ್ಯದಶಿ೯ ಸುರೇಶ್ ಬಿಳಿಗೇರಿ ಸಂಘದ ವಾರ್ಷಿಕ ವರದಿ ವಾಚಿಸಿದರು.
ಖಜಾಂಚಿ ಟಿ.ಕೆ.ಸಂತೋಷ್ ಲೆಕ್ಕ ಪತ್ರ ಮಂಡಿಸಿದರು.ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್ ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯಿತ್ತರು. ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್ ಲೆಕ್ಕಪತ್ರ ಮಂಡನೆ ಮಾಡಿದರು.
ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ.ಮುರಳೀಧರ್ ಉಪಸ್ಥಿತರಿದ್ದರು. ಸಂಘದ ಗುರುತಿನ ಚೀಟಿಯನ್ನು ಇದೇ ಸಂದರ್ಭ ವಿತರಣೆ ಮಾಡಲಾಯಿತು.ಸಂಘದ ಕುಶಾಲನಗರ ತಾಲೂಕು ಘಟಕದ ಉಪಾಧ್ಯಕ್ಷ ನವೀನ್ ಚಿಣ್ಣಪ್ಪ ಪ್ರಾರ್ಥಿಸಿ, ಜಿಲ್ಲಾ ಉಪಾಧ್ಯಕ್ಷ ಕವನ್ ಕಾರ್ಯಪ್ಪ ಸ್ವಾಗತಿಸಿದರು. ಅನಿಲ್ ಹೆಚ್.ಟಿ.ವಂದಿಸಿದರು.