ಕನ್ನಡಪ್ರಭ ವಾರ್ತೆ ಹೊನ್ನಾವರ

ರೋಟರಿ ಸಂಸ್ಥೆಯು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ರೋಟರಿಯ ಸೇವಾ ಚಟುವಟಿಕೆಗಳನ್ನು ಜನತೆಗೆ ತಲುಪಿಸುವ ಕೆಲಸಕ್ಕೆ ನಾವೆಲ್ಲರೂ ಸಹಕಾರಿಯಾಗಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ವಿನಾಯಕ ಮೇಸ್ತ ಹೇಳಿದರು.

ಪಟ್ಟಣದ ರೋಟರಿ ಭವನದಲ್ಲಿ ರೋಟರಿ ಕ್ಲಬ್ ವತಿಯಿಂದ ಆಯೋಜಿಸಿದ ಪತ್ರಿಕಾ ದಿನಾಚರಣೆ ಮತ್ತು ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೊನ್ನಾವರ ರೋಟರಿ ಪರಿವಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮತ್ತು ಆರೋಗ್ಯ ಸೇವೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಪ್ರಮುಖವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪಿಂಕ್ ಆಟೋ ರಿಕ್ಷಾ, ಹೊಲಿಗೆಯಂತ್ರ ಮತ್ತು ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಪ್ರತಿವರ್ಷ ಪತ್ರಕರ್ತರನ್ನು ಕರೆದು ಗೌರವಿಸುತ್ತಿರುವುದು ಖಷಿಯ ಸಂಗತಿ ಎಂದರು.

ಹಿರಿಯ ಪತ್ರಕರ್ತ ಜಿ.ಯು. ಭಟ್ ಮಾತನಾಡಿ, ಕಾಲ ಬದಲಾಗುತ್ತಿದ್ದು, ಮಾಧ್ಯಮ ಕ್ಷೇತ್ರವು ಇಂದು ಸಂದಿಗ್ದ ಪರಿಸ್ಥಿತಿಯಲ್ಲಿದ್ದರೂ ಈ ಕ್ಷೇತ್ರಕ್ಕೆ ಯುವಕರು ಬಂದು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರೋಟರಿಯು ಪತ್ರಕರ್ತರನ್ನು ಗೌರವಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ರೋಟರಿಯ ಸಮಾಜ ಸೇವಾ ಕಾರ್ಯ ಯಶಸ್ವಿಯಾಗಿ ಮುಂದುವರಿಯಲಿ ಎಂದರು.

ಸನ್ಮಾನ:


ಹಿರಿಯ ಪತ್ರಕರ್ತರಾದ ಜಿ.ಯು. ಭಟ್, ಕೃಷ್ಣಮೂರ್ತಿ ಹೆಬ್ಬಾರ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ವಿನಾಯಕ ಮೇಸ್ತ, ಜಿಲ್ಲಾ ಉಪಾಧ್ಯಕ್ಷ ಎಚ್.ಎಂ. ಮಾರುತಿ, ಸದಸ್ಯ ಸತೀಶ ತಾಂಡೇಲ, ತಾಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ ನಾಯ್ಕ, ಕಾರ್ಯದರ್ಶಿ ಪ್ರಸಾದ ಹೆಗಡೆ, ಖಜಾಂಚಿ ವಿವೇಕ ಶೇಟ್, ಸದಸ್ಯರಾದ ಮುರಳೀಧರ ಗಾಯ್ತೊಂಡೆ, ಎಚ್.ಎಲ್. ನಗರೆ, ಶ್ರೀಧರ ನಾಯ್ಕ, ವಿಶ್ವನಾಥ ಸಾಲ್ಕೋಡ ಅವರನ್ನು ಸನ್ಮಾನಿಸಲಾಯಿತು.

ನಾರಾಯಣ ಯಾಜಿ ಸಾಲೇಬೈಲು ಅಭಿನಂದನಾ ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ಹೆನ್ರಿ ಲೀಮಾ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಧನ್ಯವಾದ ಸಮರ್ಪಿಸಿದರು. ಖಜಾಂಚಿ ಸೋಹನ್ ಹೊರ್ಟಾ, ಇವೆಂಟ್ ಚೇರಮನ್ ಸತೀಶ ನಾಯ್ಕ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು. ದಿನೇಶ ಕಾಮತ ಕಾರ್ಯಕ್ರಮ ನಿರ್ವಹಿಸಿದರು.