ಪತ್ರಕರ್ತರು ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು

| Published : Jul 08 2024, 12:40 AM IST

ಸಾರಾಂಶ

ಸಮಾಜದ ಅಭ್ಯುದಯಕ್ಕೆ ಪತ್ರಿಕಾ ರಂಗದ ಕೊಡುಗೆ ಅಪಾವಾಗಿದ್ದು, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ, ಸರಕಾರಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡುವ ಹರಿತವಾದ ಶಕ್ತಿ ಪತ್ರಕರ್ತರ ಲೇಖನಿಗಿದೆ, ಅದನ್ನು ಸರಿಯಾದ ಮಾರ್ಗದಲ್ಲಿ ಸಮಾಜ ಏಳಿಗೆಗೆ ಬಳಕೆಯಾಗುವಂತೆ ಮಾಡಬೇಕು

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಪತ್ರಕರ್ತರು ವಸ್ತುನಿಷ್ಠ ವರದಿಗಳಿಗೆ ಆದ್ಯತೆಯನ್ನು ನೀಡುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಬೇಕಿದೆ ಎಂದು ತಹಸೀಲ್ದಾರ್ ಮಹೇಶ್‍ಎಸ್.ಪತ್ರಿ ಹೇಳಿದರು.

ನಗರದ ಎಸ್.ಎಸ್.ಇ.ಎ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರವನ್ನು ಎಚ್ಚರಿಸುವ ಕೆಲಸ

ಸಮಾಜದ ಅಭ್ಯುದಯಕ್ಕೆ ಪತ್ರಿಕಾ ರಂಗದ ಕೊಡುಗೆ ಅಪಾವಾಗಿದ್ದು, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ, ಸರಕಾರಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡುವ ಹರಿತವಾದ ಶಕ್ತಿ ಪತ್ರಕರ್ತರ ಲೇಖನಿಗಿದೆ, ಅದನ್ನು ಸರಿಯಾದ ಮಾರ್ಗದಲ್ಲಿ ಸಮಾಜ ಏಳಿಗೆಗೆ ಬಳಕೆಯಾಗುವಂತೆ ಮಾಡಬೇಕಿದೆ ಎಂದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತಮ್ಮ ಪತ್ರಿಕಾ ದಿನಾಚರಣೆಗಳನ್ನು ಕಚೇರಿಯಲ್ಲಿ ಹಮ್ಮಿಕೊಳ್ಳದೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಂಡಿರುವುದು ನಿಜಕ್ಕೂ ಅರ್ಥಪೂರ್ಣ ಕಾರ್ಯಕ್ರಮವಾಗಿದೆ , ಇಂದಿನ ವಿದ್ಯಾರ್ಥಿಗಳಿಗೆ ವಿಚಾರದಾರೆಗಳನ್ನು ತಿಳಿಸಿಕೊಡಲು ಇಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗುತ್ತದೆ ಎಂದರು.

ವೃತ್ತನಿರೀಕ್ಷಕ ಕೆ.ಪಿ.ಸತ್ಯನಾರಾಯಣ್

ವೃತ್ತ ನಿರೀಕ್ಷಕ ಕೆ.ಪಿ.ಸತ್ಯನಾರಾಯಣ್ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗ ಜನತೆ ಮತ್ತು ಆಡಳಿತದ ನಡುವೆ ಸಂಪರ್ಕ ಸಂಪರ್ಕ ಸೇತುವೆಯಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಮಾಧ್ಯಮ ಹೆಚ್ಚು ಮಹತ್ವವನ್ನು ಪಡೆದುಕೊಂಡು ಸಮಾಜದ ಸಾಮರಸ್ಯವನ್ನು ಕಾಪಾಡಿಕೊಂಡು ಬರುವಲ್ಲಿ ಶ್ರಮಿಸುತ್ತಿದೆ ಎಂದ ಅವರು ವಿದ್ಯಾರ್ಥಿಗಳು ಪತ್ರಿಕಾ ಧರ್ಮ ಹಾಗೂ ಅದರ ಕರ್ತವ್ಯಗಳನ್ನು ತಿಳಿದುಕೊಳ್ಳಲು ಇಂತಹ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗುತ್ತದೆ ಎಂದರು.ವೇದಿಕೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ದೇವಿಮಂಜುನಾಥ್, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಆದಿಯಪ್ಪ, ಪಠಾಣ್ ಸೈಫುಲ್ಲಾ, ತಾಲೂಕು ಸಂಘದ ಉಪಾಧ್ಯಕ್ಷ ಜಗನ್ನಾಥರೆಡ್ಡಿ, ಪ್ರಧಾನ ಕಾರ್ಯದರ್ಶಿ ಸಿ.ಎ.ಮುರಳಿಧರ್, ಸಹಕಾರ್ಯದರ್ಶಿ ಜಿ.ಎ.ಪ್ರದೀಪ್, ಖಜಾಂಚಿ ಅಶ್ವತ್ಥನಾರಾಯಣ್, ಲೋಕೇಶ್, ಆರ್.ಮಂಜುನಾಥ್, ಮೂರ್ತಿ, ಅರುಣ್ , ಪ್ರತಾಪ್ ಮುಂತಾದವರು ಉಪಸ್ಥಿತರಿದ್ದರು