ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಆಯಾಮದ ವ್ಯಕ್ತಿತ್ವವನ್ನು ರೂಪಿಸುವ ಕ್ಷೇತ್ರಗಳ ಕಡೆ ಹೆಚ್ಚಿನ ಗಮನ ನೀಡಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಶಿಕ್ಷಣದ ಯಾನದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಆಯಾಮಗಳು ಬಹಳ ಪ್ರಧಾನ ಸ್ಥಾನವನ್ನು ವಹಿಸುತ್ತವೆ ಎಂದು ವಿಶ್ರಾಂತ ಪ್ರಾಧ್ಯಾಪಕ, ವಾಗ್ಮಿ ಮೈಸೂರು ಕೃಷ್ಣಮೂರ್ತಿ ತಿಳಿಸಿದರು.

ನಗರದ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ನಡೆದ ಸ್ನಾತಕ ವಿಭಾಗಗಳ 2025- 26ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.

ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಆಯಾಮದ ವ್ಯಕ್ತಿತ್ವವನ್ನು ರೂಪಿಸುವ ಕ್ಷೇತ್ರಗಳ ಕಡೆ ಹೆಚ್ಚಿನ ಗಮನ ನೀಡಬೇಕು. ಅವು ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ಮೂಡಿಸಿ ಔದ್ಯೋಗಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಟ್ಟಿಯಾಗಲು ಸಹಾಯ ಮಾಡುತ್ತವೆ. ಜಾಗತಿಕ ಮಟ್ಟದಲ್ಲಿ ಸೃಷ್ಟಿಯಗುತ್ತಿರುವ ಭಯವನ್ನು ಹೋಗಲಾಡಿಸಲು ಸಾಂಸ್ಕೃತಿಕ ವೇದಿಕೆಗಳು ಕಾರಣವಾಗುತ್ತವೆ ಎಂದರು.

ಇಂದಿನ ಯುವಜನತೆ ಅಭಿಮನ್ಯುವಿನ ಪರಾಕ್ರಮವನ್ನು ಅನುಕರಿಸಿದರೂ ಜೀವನದ ಚಕ್ರವ್ಯೂಹವನ್ನು ಭೇದಿಸುವುದಷ್ಟೇ ಅಲ್ಲದೆ ಅದನ್ನು ಜಯಿಸಿ, ಹೊರಬರುವ ಸಾಮರ್ಥ್ಯವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ರಾಷ್ಟ್ರ ಮಟ್ಟದ ಖೋಖೋ ಆಟಗಾರ್ತಿ ಎಂ. ವೀಣಾ ಮಾತನಾಡಿ, ಗ್ರಾಮೀಣ ಪ್ರತಿಭೆಗಳ ಅನಾವರಣ ಯಾವುದೇ ಲಿಂಗ ತಾರತಮ್ಯವಿಲ್ಲದೆ ಆಗಬೇಕಾಗಿದೆ. ಹೆಣ್ಣು ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಬಹುಮುಖ್ಯ. ಹಾಗೆಯೇ ವಿದ್ಯಾರ್ಥಿಗಳ ಶಿಸ್ತು ಪಾಲನೆಗೆ ಕ್ರೀಡೆ ಮಾರ್ಗದರ್ಶನ ನೀಡುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿ, ಕಾಲೇಜುಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರಗಳಾಗಬೇಕು, ಆಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ. ಕ್ರೀಡಾ ಚಟುವಟಿಕೆಗಳಿಂದ ಸದೃಢ ದೇಹ ಮತ್ತು ಮನಸ್ಸಿನ ಜೊತೆಗೆ ಸ್ನೇಹ ಹಾಗೂ ಪರಸ್ಪರ ಗೌರವ ಸಾಧ್ಯವಾಗುತ್ತದೆ. ಸಾಂಸ್ಕೃತಿಕ ಪ್ರತಿಭೆ ಮತ್ತು ಕ್ರೀಡೆಯ ಜೊತೆಗೆ ಎಐ ತಾಂತ್ರಿಕ ಜ್ಞಾನ ವಿದ್ಯಾರ್ಥಿಗಳಿಗೆ ಬಹುಮುಖ್ಯ. ಉದ್ಯೋಗದ ಭರವಸೆಯನ್ನು ಈ ತಂತ್ರಜ್ಞಾನ ಮೂಡಿಸುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಎಂ. ಪ್ರಭು ಮಾತನಾಡಿ, ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ವಚನ ಸಾಹಿತ್ಯ, ಸಾಂಸ್ಕೃತಿಕ ವಿಚಾರಧಾರೆಗಳನ್ನು ಹುರಿದುಂಬಿಸುತ್ತವೆ. ವಿದ್ಯಾರ್ಥಿಗಳಲ್ಲಿ ಪಠ್ಯೇತರ ಕೌಶಲ್ಯಗಳನ್ನು ಹೆಚ್ಚಿಸುವುದು ಎಲ್ಲಾ ಶಿಕ್ಷಣ ಕ್ಷೇತ್ರಗಳ ಕರ್ತವ್ಯ ಎಂದರು.

ಇದೇ ವೇಳೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಸಾಂಸ್ಕೃತಿಕ ವಿಭಾಗದ ಸಂಚಾಲಕ ವಿ. ಶಿವ, ಕ್ರೀಡಾ ವಿಭಾಗದ ಸಂಚಾಲಕ ಪಿ. ಕಾರ್ತಿಕ್ ಮೊದಲಾದವರು ಇದ್ದರು. ಅದಿತಿ ಹೆಗ್ಡೆ ಪ್ರಾರ್ಥಿಸಿದರು. ಗಣೇಶ್ ಸ್ವಾಗತಿಸಿದರು. ಸೂರ್ಯಪ್ರಕಾಶ್ ವಂದಿಸಿದರು. ಎಸ್. ಸ್ಫೂರ್ತಿ ನಿರೂಪಿಸಿದರು.