ಕನ್ನಡಪ್ರಭ ವಾರ್ತೆ ಮೈಸೂರುಕಾನೂನು ಅಧ್ಯಯನವು ವೃತ್ತಿ ಅಲ್ಲ, ಅದೊಂದು ಸಾಮಾಜಿಕ ಜವಾಬ್ದಾರಿ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್.ಪಿ. ಮಂಜುನಾಥ್ ತಿಳಿಸಿದರು.ಕುವೆಂಪುನಗರದ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾನೂನನ್ನು ಅಭ್ಯಾಸ ಮಾಡುವವರು ಈ ಕ್ಷೇತ್ರವನ್ಜು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಮತ್ತು ರಕ್ಷಿಸುವ ಸಾಧನವಾಗಿ ಬಳಸಿಕೊಳ್ಳಬೇಕಿದೆ. ಹೊಸದಾಗಿ ನ್ಯಾಯಾಧೀಶರಾಗಿ ನೇಮಕಗೊಂಡಿರುವವರು ನಿಮ್ಮ ಪ್ರಾಮಾಣಿಕತೆ, ಪರಿಶ್ರಮ ಮತ್ತು ನಿಷ್ಠೆಯಿಂದ ಸಮಾಜಕ್ಕೆ ಉತ್ತಮ ಸೇವೆ ದೊರಕಲಿ ಎಂದು ಆಶಿಸಿದರು.ಪ್ರಜಾಪ್ರಭುತ್ವದಲ್ಲಿ ಅತ್ಯಂತ ದೊಡ್ಡ ರಾಷ್ಟ್ರವಾಗಿರುವ ಭಾರತದಲ್ಲಿ ನ್ಯಾಯಾಂಗವನ್ನು ಉನ್ನತ ಸ್ಥಾನದಲ್ಲಿ ಇರಿಸಿ, ಅದರ ಮೇಲೆ ಪೂರ್ಣ ನಂಬಿಕೆ ಹೊಂದಿದ್ದೇವೆ. ನ್ಯಾಯಾಧೀಶರು ನೀಡುವ ತೀರ್ಪುಗಳು ಸಮಾಜದಲ್ಲಿ ಶಾಂತಿ ಮತ್ತು ನ್ಯಾಯದ ಸ್ಥಾಪನೆಗೆ ದಾರಿ ಮಾಡಿಕೊಡುತ್ತವೆ. ಹೀಗಾಗಿ, ನೂತನವಾಗಿ ನೇಮಕವಾಗಿರುವವರು ಅದೇ ಹಾದಿಯಲ್ಲಿ ಸಾಗಿ, ಜನರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಜೆಎಸ್ಎಸ್ ಕಾನೂನು ಕಾಲೇಜು ಕೇವಲ ಕಾನೂನು ಪದವೀಧರರನ್ನು ಉತ್ಪಾದಿಸದೇ, ಸಾಮಾಜಿಕ ನ್ಯಾಯ, ಸಮಾನತೆ, ಸಂವಿಧಾನ ಆಶಯ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ಇಲ್ಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ಬು ನಿಷ್ಠಾವಂತ ನ್ಯಾಯಾಧೀಶರನ್ನಾಗಿ, ವಕೀಲರಾಗಿ ಹಾಗೂ ಕಾನೂನು ತಜ್ಞರನ್ನು ಸಮಾಜಕ್ಕೆ ನೀಡುವಲ್ಲಿ ತನ್ನದೇ ಆದ ಪಾತ್ರವನ್ನು ವಹಿಸುತ್ತಿದೆ ಎಂದರು. ನ್ಯಾಯಾಧೀಶರಿಗೆ ಸನ್ಮಾನಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಓದಿ ಪ್ರಸ್ತುತ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಕೆ.ಬಿ. ರೋಶನಿ, ರಾಹುಲ್ ಆದಿನಾಥ ನ್ಯಾಮಗೌಡ, ಮಹದೇವ ಕೆ. ಗೌಡ, ಕೆ.ಸಿ. ಸುಹಾಸ್, ರಶ್ಮಿ ವೀರಭದ್ರ, ಸುಪ್ರಿಯಾ ನವಲಿ ಮತ್ತು ನಿತ್ಯಾ ಎನ್. ಗುಜ್ಜಾರ್ ಅವರನ್ನು ಸನ್ಮಾನಿಸಲಾಯಿತು.ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ ಅಧ್ಯಕ್ಷತೆ ವಹಿಸಿದ್ದರು. ಜೆಎಸ್ಎಸ್ ಕಾನೂನು ಕಾಲೇಜು ಕಾರ್ಯನಿರ್ವಾಹಕ ಪ್ರೊ.ಕೆ.ಎಸ್. ಸುರೇಶ್, ಪ್ರಾಂಶುಪಾಲೆ ಡಾ.ಎನ್. ವಾಣಿಶ್ರೀ, ಹಿರಿಯ ವಕೀಲ ಎಚ್.ಎನ್. ವೆಂಕಟೇಶ್ ಮೊದಲಾದವರು ಇದ್ದರು.