ಸಾರಾಂಶ
ದಾವಣಗೆರೆ : ಪೋಕ್ಸೋ ಕಾಯ್ದೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತ ನ್ಯಾಯದ ಜೊತೆಗೆ ಸೂಕ್ತ ನೆರವು ಹಾಗೂ ಸೌಲಭ್ಯಗಳು ದೊರಕುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪೋಕ್ಸೋ ಸಭೆ ಹಾಗೂ ವಿಶೇಷ ಕಾರ್ಯಪಡೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ರಕ್ಷಣಾ ಕಾಯ್ದೆಗಳು ಸೇರಿದಂತೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಅರಿವು ಮೂಡಿಸಲು ನುರಿತ ವಕೀಲರ ತಂಡಗಳನ್ನು ರಚಿಸಿ ಶಾಲೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಆವರಗೆರೆ ಎಸ್ಪಿಎಸ್ ನಗರದಲ್ಲಿರುವ ಶಾಲೆಯಲ್ಲಿ ಲೈಬ್ರರಿ ಸ್ಥಾಪಿಸಬೇಕು. ಸಾಮಾಜಿಕವಾಗಿ ಹಿಂದುಳಿದ ವರ್ಗದವರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು. ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಸಂತ್ರಸ್ತರಿಗೆ ತುರ್ತು ಮತ್ತು ಮಧ್ಯಂತರ ಪರಿಹಾರ ಸೇರಿದಂತೆ ಎಲ್ಲ ಸೌಲಭ್ಯಗಳು ಗರಿಷ್ಠ ಪ್ರಮಾಣದಲ್ಲಿ ದೊರಕಬೇಕು. ಅವರಿಗಿರುವ ಕಾನೂನಿನ ಅವಕಾಶಗಳ ಮಾಹಿತಿ ದೊರಕಿಸಲು ಇಲಾಖೆ ಮುಂದಾಗಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ, ಶಾಲೆ, ಹಾಸ್ಟೆಲ್ಗಳಲ್ಲಿ ಗ್ರಂಥಾಲಯ ಇಲ್ಲದೇ ಇರುವುದು ತುಂಬಾ ಬೇಸರದ ಸಂಗತಿಯಾಗಿದೆ. ಹಾಸ್ಟೆಲ್ಗಳಲ್ಲಿ ಮಕ್ಕಳಿಗೆ ಹಾಸಿಗೆ ವ್ಯವಸ್ಥೆ, ಊಟ, ವಸತಿಯ ವ್ಯವಸ್ಥೆ, ಓದಲು ಬರೆಯಲು ಟೇಬಲ್ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆಸ್ಪತ್ರೆಯ ಕಟ್ಟಡ ತುಂಬಾ ಹಳೇಯದಾಗಿದೆ. ಕೂಡಲೇ ಕಟ್ಟಡ ನವೀಕರಣಕ್ಕೆ ಕ್ರಮ ಕೈಗೊಳ್ಳಬೇಕು. ಬಾಣಂತಿ, ಗರ್ಭಿಣಿಯವರಿಗೆ ಗುಣಮಟ್ಟದ ಔಷಧಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹೆಚ್ಚು ಜಾಗೃತಿಯಿಂದ ಕೆಲಸ ನಿರ್ವಹಿಸಬೇಕು. ಉಪಯುಕ್ತ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ಸ್ಥಳದಲ್ಲಿ ಇರಬೇಕು. ಸಿಡಿಪಿಒ ತಮ್ಮ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಿದರು.
ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಎಲ್ಲ ಶಾಲಾ, ಕಾಲೇಜುಗಳಲ್ಲಿ ಜಾಗೃತಿ ನೀಡಬೇಕು. ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಮಾನವ ಕಳ್ಳಸಾಗಣೆ ತಡೆ, ಬಾಲನ್ಯಾಯ ಮಂಡಳಿ ಸೇರಿದಂತೆ ಸಹಾಯಕ್ಕಾಗಿ ಇರುವ ಮತ್ತು ತುರ್ತು ಸಂಪರ್ಕಕ್ಕಾಗಿ ಇರುವ ಸಹಾಯವಾಣಿಗಳ ಕುರಿತಂತೆ ಶಾಲಾ, ಕಾಲೇಜುಗಳ ಸೂಚನಾ ಫಲಕಗಳಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪ್ರದರ್ಶಿಸಬೇಕು. ಇಂತಹ ಕಾನೂನುಗಳ ವಿಷಯವಾಗಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕೆಂದು ಸೂಚನೆ ನೀಡಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್, ಜಿ.ಪಂ. ಯೋಜನಾ ನಿರ್ದೇಶಕ ಮಲ್ಲನಾಯ್ಕ, ವಕೀಲರಾದ ಬಸವರಾಜ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋಟ್ ಬಾಷಾ ನಗರ, ಆಜಾದ್ ನಗರ, ಗಾಂಧಿ ನಗರಗಳಲ್ಲಿ ತುಂಬಾ ಕಳ್ಳತನ ಪ್ರಕರಣಗಳು ಕಂಡುಬಂದಿವೆ. ಕೂಡಲೇ ಇದರ ಬಗ್ಗೆ ಪೊಲೀಸ್ ಅಧಿಕಾರಿಗಳು ಕಾಳಜಿ ವಹಿಸಿ, ಕ್ರಮ ಕೈಗೊಳ್ಳಬೇಕು. ಮಾರ್ಚ್ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಅಷ್ಟರೊಳಗೆ ಎಲ್ಲ ರಾಜಿಯಾಗಬಲ್ಲ ಪ್ರಕರಣಗಳನ್ನು ಪಟ್ಟಿ ಮಾಡಿ, ಇತ್ಯರ್ಥಕ್ಕೆ ಕ್ರಮ ವಹಿಸಬೇಕು. ಸಾರ್ವಜನಿಕರು ಸಹ ಈ ಅವಕಾಶ ಸದ್ಬಳಕೆ ಮಾಡಿಕೊಳ್ಳುವಂತೆ ಇಲಾಖೆಗಳು ಅಗತ್ಯ ಕ್ರಮ ಜರುಗಿಸಬೇಕು
- ಮಹಾವೀರ ಮ. ಕರೆಣ್ಣವರ, ನ್ಯಾಯಾಧೀಶ