ಸಂತ್ರಸ್ತ ಬಾಲಕಿ ಕುಟುಂಬಕ್ಕೆ ನ್ಯಾಯ: ಡಿ.ಕೆ.ಶಿವಕುಮಾರ್

| Published : May 15 2025, 01:36 AM IST

ಸಾರಾಂಶ

ರಾಮನಗರ: ಭದ್ರಾಪುರ ಗ್ರಾಮದ ಅಪ್ರಾಪ್ತೆ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಮನಗರ: ಭದ್ರಾಪುರ ಗ್ರಾಮದ ಅಪ್ರಾಪ್ತೆ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೆ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ 4,12,500 ರು. ಹಾಗೂ ಪಂಚಾಯ್ತಿ ವತಿಯಿಂದ 50 ಸಾವಿರ ರು. ಪರಿಹಾರ ಚೆಕ್ ವಿತರಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ, ನಿಷ್ಠುರವಾಗಿ ತನಿಖೆ ನಡೆಯಲಿದೆ. ಯಾರ‌ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ ಎಂದರು.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನಾವು ನ್ಯಾಯ ಒದಗಿಸುತ್ತೇವೆ ಎಂದು ಹೇಳಿದರು.

ಬಾಲಕಿಯು ಹಾಸ್ಟೆಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿತ್ತು. ರಜೆಗೆಂದು ಊರಿಗೆ ಬಂದ ಸಂದರ್ಭದಲ್ಲಿ ಈ ಅನಾಹುತ ಘಟನೆ ನಡೆದಿದೆ. ಮಾತುಬಾರದ, ಕಿವಿ ಕೇಳದಿದ್ದರೂ ಚುರುಕಾಗಿದ್ದ ಬಾಲಕಿ ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಘಟನೆ ನಡೆದಿರುವ ಈ ಊರಿನಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಬೀದಿ ದೀಪಗಳ ವ್ಯವಸ್ಥೆಯಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಈಗ ಈ ಪ್ರಕರಣದ ಜತೆಗೆ ಬೇರೆ ವಿಚಾರಗಳನ್ನು ಬೆರೆಸಲು ಹೋಗುವುದಿಲ್ಲ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು ಎಂದು ಉತ್ತರಿಸಿದರು.

ಈ ವೇಳೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್.ನಟರಾಜು, ನಿರ್ದೇಶಕ ಪುಟ್ಟಯ್ಯ, ಕೆಪಿಸಿಸಿ ಸದಸ್ಯ ಬ್ಯಾಟಪ್ಪ, ಕಾಂಗ್ರೆಸ್ ಮುಖಂಡರಾದ ಎಸ್ಆರ್ ಎಸ್ ರಾಜಣ್ಣ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

14ಕೆಆರ್ ಎಂಎನ್ 9.ಜೆಪಿಜಿ

ಮೃತ ಖುಷಿ ಕುಟುಂಬದವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಂತ್ವನ ಹೇಳುತ್ತಿರುವುದು.