ನ್ಯಾ. ಶ್ಯಾಮಸುಂದರ್‌ ಸಮಿತಿ ಸೂಚನೆಯಂತೆ ಪರಿಷತ್‌ ಅಕ್ರಮ ವಿರುದ್ಧ ಕ್ರಮಕ್ಕೆ ಚಿಂತನೆ: ಡಾ. ಜೋಶಿ

| Published : May 02 2025, 11:46 PM IST

ನ್ಯಾ. ಶ್ಯಾಮಸುಂದರ್‌ ಸಮಿತಿ ಸೂಚನೆಯಂತೆ ಪರಿಷತ್‌ ಅಕ್ರಮ ವಿರುದ್ಧ ಕ್ರಮಕ್ಕೆ ಚಿಂತನೆ: ಡಾ. ಜೋಶಿ
Share this Article
  • FB
  • TW
  • Linkdin
  • Email

ಸಾರಾಂಶ

ಆಡಳಿತಾಧಿಕಾರಿ ನೇಮಕಕ್ಕೆ ಕಾರಣರಾದ ಹಂಪನಾ ಅವರೇ ಈಗ ಮುಖ್ಯಮಂತ್ರಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹಿಸುತ್ತಿರುವುದು ವಿಪರ್ಯಾಸ. ಹಂಪನಾ ವಿರುದ್ಧ ಕ್ರಮಕ್ಕೆ ಕಾನೂನು ಸಲಹೆ ಪಡೆದು, ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕ.ಸಾ.ಪ. ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿದ್ದಾಗ ಪರಿಷತ್‌ನಲ್ಲಿ ಅಕ್ರಮ ಎಸಗಿ ಆಡಳಿತಾಧಿಕಾರಿ ನೇಮಕಕ್ಕೆ ಕಾರಣವಾಗಿದ್ದರು. ಅವರಿಂದಲೇ ಪರಿಷತ್‌ಗೆ ಉಂಟಾದ ನಷ್ಟವನ್ನು ಭರಿಸುವಂತೆ ಹಗರಣಗಳ ತನಿಖೆ ನಡೆಸಿದ ನ್ಯಾಯಮೂರ್ತಿ ಶ್ಯಾಮಸುಂದರ್‌ ನೇತೃತ್ವದ ಸಮಿತಿ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಂಪನಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪರಿಷತ್‌ ಚಿಂತನೆ ನಡೆಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಹಾಲಿ ಅಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ ಹೇಳಿದ್ದಾರೆ.

ಮಂಗಳೂರಿನ ಸರ್ಕ್ಯೂಟ್‌ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1987ರಲ್ಲಿ ಕಸಾಪ ಅಧ್ಯಕ್ಷರಾಗಿದ್ದ ಹಂಪನಾ ವಿರುದ್ಧ ಅಕ್ರಮಗಳ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದ ಸಮಿತಿಯ ಶಿಫಾರಸಿನಂತೆ ಆಡಳಿತಾಧಿಕಾರಿಗಳ ನೇಮಕ ಮಾಡಲಾಗಿತ್ತು. ಅಲ್ಲದೆ ಅವರ ವಿರುದ್ಧದ ಆರೋಪ ತನಿಖೆಯಲ್ಲಿ ಸಾಬೀತಾದ ಕಾರಣ ಪರಿಷತ್ತಿಗೆ ಆದ ನಷ್ಟವನ್ನು ಅವರಿಂದಲೇ ಭರ್ತಿ ಮಾಡಿ ಕ್ರಿಮಿನಲ್‌ ಕೇಸು ದಾಖಲಿಸುವಂತೆ ಕೋರ್ಟ್‌ ಆದೇಶಿಸಿತ್ತು. ಆದರೆ ನಂತರ ಬಂದ ಪರಿಷತ್‌ನ ಅಧ್ಯಕ್ಷರುಗಳಿಗೆ ಇಂತಹ ಆದೇಶ ಇರುವ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಎಂದರು.

ಆಡಳಿತಾಧಿಕಾರಿ ನೇಮಕಕ್ಕೆ ಕಾರಣರಾದ ಹಂಪನಾ ಅವರೇ ಈಗ ಮುಖ್ಯಮಂತ್ರಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹಿಸುತ್ತಿರುವುದು ವಿಪರ್ಯಾಸ. ಹಂಪನಾ ವಿರುದ್ಧ ಕ್ರಮಕ್ಕೆ ಕಾನೂನು ಸಲಹೆ ಪಡೆದು, ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದು ಡಾ.ಮಹೇಶ್‌ ಜೋಶಿ ಸ್ಪಷ್ಟಪಡಿಸಿದರು.

ಕಸಾಪ ವಿರುದ್ಧ ಸಲ್ಲದ, ದಾಖಲೆ ರಹಿತ ಆರೋಪ ಮಾಡುತ್ತಿರುವ ಬೆಂಗಳೂರಿನ ಸಮಾನ ಮನಸ್ಕರ ವೇದಿಕೆ ಹಾಗೂ ಅದರಲ್ಲಿ ಇರುವವರ ವಿರುದ್ಧ ಕೋರ್ಟ್‌ನಿಂದ 2023ರಲ್ಲೇ ಇನ್‌ಜೆಂಕ್ಷನ್‌ ಆದೇಶ ತರಲಾಗಿದೆ. ಹೀಗಿದ್ದೂ ಕೋರ್ಟ್‌ ಆದೇಶ ಉಲ್ಲಂಘಿಸಿ ಕಸಾಪ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಇದರ ವಿರುದ್ಧ ಕೋರ್ಟ್‌ ಆದೇಶ ಉಲ್ಲಂಘನೆ ಅಪೀಲು ಸಲ್ಲಿಸಲಾಗುವುದು ಎಂದು ಡಾ.ಮಹೇಶ್‌ ಜೋಶಿ ತಿಳಿಸಿದರು.

ಕಸಾಪ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಮಾಧವ ಎಂ.ಕೆ, ಕಸಾಪ ದ.ಕ. ಜಿಲ್ಲಾಧ್ಯಕ್ಷ ಡಾ.ಶ್ರೀನಾಥ್‌ ಎಂ.ಪಿ. ಇದ್ದರು.