ಸಾರಾಂಶ
ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣರಾಜ್ಯದಲ್ಲಿ ಭೂ ಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರು ಎಂದು ಪಶುಪಾಲನಾ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ಬಣ್ಣಿಸಿದರು.ಪಟ್ಟಣದ ಡಿ. ದೇವರಾಜ ಅರಸು ಕಲಾ ಭವನದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 109 ನೇ ಜನ್ಮದಿನಾಚಣೆ ಸಮಾರಂಭದಲ್ಲಿ ಅವರು ಮಾತನಾಡಿದರು.ಅರಸು ಪ್ರಶ್ನಾತೀತ ನಾಯಕರಲ್ಲದೆ ಮಾತೃ ಹೃದಯದ ವ್ಯಕ್ತಿತ್ವವನ್ನು ಹೊಂದಿದ್ದರು, ರಾಜಕೀಯ ಕೆಲವರಿಗೆ ಮಾತ್ರ ಸೀಮಿತ ಎನ್ನುವ ಸ್ಥಿತಿಯಲ್ಲಿದ್ದಾಗ ದೇಶದಲ್ಲಿಯೇ ಪ್ರಥಮ ರಾಜ್ಯವಾಗಿ ಕರ್ನಾಟಕದಲ್ಲಿ ಉಳುವವನೆ ಭೂಮಿಯ ಒಡೆಯ ಕಾಯ್ದೆ ಮೂಲಕ ರಾಜ್ಯದ ಹಲವು ಜನರಿಗೆ ಭೂಒಡೆತನದ ಹಕ್ಕು ನೀಡಿದರು. ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಹಾವನೂರು ವರದಿ ಜಾರಿಗೊಳಿಸುವ ಮೂಲಕ ಇತರರಿಗೂ ಶಿಕ್ಷಣ, ಉದ್ಯೋಗ, ರಾಜಕೀಯ ಅಧಿಕಾರ ಹಂಚಿಕೆ ಮಾಡಿದ ಸ್ಮರಣೀಯರು. ಇವರು ನಿರುದ್ಯೋಗಿಗಳಿಗೆ ಸಹಾಯಧನದಂತಹ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಜೀತ ಪದ್ಧತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು ಎಂದರು.ಎನ್.ಆರ್. ಕಾಂತರಾಜು ಮಾತನಾಡಿ, ದೇವರಾಜ ಅರಸು ಅವರು ಹಲವು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೊಳಿಸಿ ಪ. ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಅನುಕೂಲ ಮಾಡಿಕೊಟ್ಟರು ಎ ದರು.ತಹಸೀಲ್ದಾರ್ ನಿಸರ್ಗ ಪ್ರಿಯಾ, ತಾಪಂ ಇಓ ಸುನಿಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಎಇಇ ಮಲ್ಲಿಕಾರ್ಜುನ್, ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಭಾರ ವಿಸ್ತರಣಾಧಿಕಾರಿ ಕೃಷ್ಣೇಗೌಡ ನಿಲಯ ಪಾಲಕರಾದ ಆರತಿ, ಜಯರಾಂ, ದರ್ಶನ್, ಕೃಷ್ಣಪ್ಪ ಇದ್ದರು.