ಸಾರಾಂಶ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಧಾರವಾಡದ ಲೇಖಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರ ಬೆಳದಿಂಗಳ ಸೋನೆಮಳೆ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್ನಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಧಾರವಾಡದ ಲೇಖಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರ ಬೆಳದಿಂಗಳ ಸೋನೆಮಳೆ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್ನಲ್ಲಿ ನಡೆಯಲಿದೆ.ಡಾ. ಪ್ರಜ್ಞಾ ಮತ್ತಿಹಳ್ಳಿ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. ಇವರ ಅನೇಕ ಕವನ, ಕತೆ, ಕವಿತೆ, ಪ್ರಬಂಧ, ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡು ಬಹುಮಾನ ಗಳಿಸಿವೆ.೨೦೧೫-೧೬ನೇ ಸಾಲಿನ ಫೆಲೊಶಿಪ್ಗೆ ಆಯ್ಕೆಯಾಗಿ ಮಹಿಳಾ ವಿಚಾರಣಾಧೀನ ಕೈದಿಗಳ ಕುರಿತು ಅಧ್ಯಯನ ಮಾಡಿ ಪುಸ್ತಕ ರಚನೆ ಮಾಡಿದ್ದಾರೆ. ಇವರ ಪ್ರಕಟಿತ ಕೃತಿಗಳು, ಹುಡುಗಿ ನಕ್ಕಾಗ, ದೊನ್ನೆ ದೀಪ ಸಾಲು, ಕಾಲನ ಕಾಲಂದುಗೆ (ಕವನ ಸಂಕಲನಗಳು), ಗಂಧಗಾಳಿ (ಅಂಕಣ ಬರಹ), ಮಿನುಗೆಲೆ ನಕ್ಷತ್ರ (ಹಾಸ್ಯ ಪ್ರಬಂಧ), ದೇವರ ಸ್ವಂತ ನಾಡಿನಲ್ಲಿ (ಪ್ರವಾಸಕಥನ), ಅಲ್ಲದೆ ಹಲವಾರು ಪ್ರಬಂಧಗಳು, ವ್ಯಕ್ತಿಚಿತ್ರ, ಅಭಿನಂದನಾ ಗ್ರಂಥಗಳನ್ನು ಸಂಪಾದಿಸಿದ್ದಾರೆ. ಅಲ್ಲದೆ ಯಕ್ಷಗಾನ ತಾಳಮದ್ದಲೆ, ನಾಟಕ, ಏಕಪಾತ್ರಾಭಿನಯಗಳಲ್ಲಿ ಅನೇಕ ಪ್ರದರ್ಶನಗಳನ್ನು ನೀಡಿ ಜನಮನ್ನಣೆ ಪಡೆದಿದ್ದಾರೆ. ಇವರು ವಿಭಾ ಸಾಹಿತ್ಯ ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಇವರು ಕಿತ್ತೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.