ಕನ್ನಡಪ್ರಭವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಮೂರನೇ ದಿನವಾದ ಶುಕ್ರವಾರ ವಿವಿಧ ಹೋಮ ಹವನ ಪೂಜಾ ವಿಧಿ ವಿಧಾನಗಳು ಸಾಂಪ್ರದಾಯಿಕ ಹಾಗೂ ಶ್ರದ್ಧಾ ಭಕ್ತಿಯಿಂದ ಜರುಗಿದವು.ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪುರೋಹಿತ ವರ್ಗ ಶುಕ್ರವಾರ ಬೆಳಿಗ್ಗೆ ಗಣಪತಿ ಹೋಮ ಅಂಕುರ ಪೂಜೆ, ಶಾಂತಿ ಹೋಮಗಳು, ಹೋಮ ಕಲಶಾಭಿಷೇಕ ಮಧ್ಯಾಹ್ನ ಪೂಜೆ ಹಾಗೂ ಭಕ್ತಾದಿಗಳಿಗೆ ತೀರ್ಥ ಪ್ರಸಾದ, ಅನ್ನ ಸಂತರ್ಪಣೆ ಜರುಗಿತು. ಆನಂತರ ರಾತ್ರಿ ಅಂಕುರ ಪೂಜೆ , ದುರ್ಗಾ ನಮಸ್ಕಾರ ಪೂಜೆಗಳು ನೆರವೇರಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ ಹಾಲಿ ಹಾಗೂ ಮಾಜಿ ಪದಾಧಿಕಾರಿಗಳ ಹಾಗೂ ಸದಸ್ಯರು, ಭಕ್ತ ಜನ ಸಂಘದ ಅಧ್ಯಕ್ಷ ಸುಮನ್ ಸುಬ್ರಮಣಿ ಹಾಲಿ ಹಾಗೂ ಮಾಜಿ ಪದಾಧಿಕಾರಿಗಳ ಹಾಗೂ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.ಶನಿವಾರ ಬೆಳಿಗ್ಗೆ 7ಗಂಟೆಯಿಂದ ಗಣಪತಿ ಹೋಮ, ಅಂಕುರ ಪೂಜೆ, ತತ್ವ ಹೋಮ, ತತ್ವ ಕಲಶ ಪೂಜೆ, ತತ್ವ ಕಲಶಾಭಿಷೇಕ. ಮಧ್ಯಾಹ್ನ ಪೂಜಾ ಮಂಟಪ ನಮಸ್ಕಾರ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಜರುಗಲಿದೆ. ರಾತ್ರಿ ಅಂಕುರ ಪೂಜೆ ದುರ್ಗಾನಮಸ್ಕಾರ ಪೂಜೆ ನಡೆಯಲಿದೆ.