ಶಾಲೆಗಳಲ್ಲಿ ಕೇವಲ ಪಠ್ಯಪುಸ್ತಕದ ಶಿಕ್ಷಣ ನೀಡುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಗತ್ಯವಾಗಿದೆ.
ಹೊಸಪೇಟೆ: ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಜಿಲ್ಲಾ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸಿದೆ ಎಂದು ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ ಅವರು ಹೇಳಿದರು.ನಗರದ ಮಾರ್ಕಂಡೇಶ್ವರ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ 2025-26 ನೇ ಸಾಲಿನ ವಿಜಯನಗರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಕೇವಲ ಪಠ್ಯಪುಸ್ತಕದ ಶಿಕ್ಷಣ ನೀಡುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಗತ್ಯವಾಗಿದೆ. ಇದರಿಂದ ಮಕ್ಕಳಲ್ಲಿ ಅನೇಕ ಪ್ರತಿಭಾವಂತರು ಒಂದೊಂದು ಕ್ಷೇತ್ರದಲ್ಲಿ ತಮ್ಮದೇ ಆದ ಕೌಶಲ್ಯವನ್ನು ಹೊಂದಿರುತ್ತಾರೆ. ಕೆಲವರು ಓದಿನಲ್ಲಿ ಮುಂದಿದ್ದರೇ, ಕೆಲವು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಾಧನೆ ಸಾಧಿಸುತ್ತಾರೆ. ಇನ್ನೂ ಕೆಲವರು ಗಾಯನ, ನಟನೆ, ಸಂಗೀತ ಸೇರಿದಂತೆ ವಿವಿಧ ಮನೋರಂಜನಾತ್ಮಕವಾದ ನೈಪುಣ್ಯಗಳನ್ನು ಹೊಂದಿರುತ್ತಾರೆ. ಅವರಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಲು ಶಾಲಾ ಹಂತದಲ್ಲಿ ಭವಿಷ್ಯ ರೂಪಿಸಿದಂತಾಗಲಿದೆ ಎಂದರು.ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಮಾತನಾಡಿ, ಬಾಲ್ಯದಲ್ಲಿ ಮಕ್ಕಳು ಅನೇಕ ಕಲಾತ್ಮಕ ವಿಷಯಗಳಲ್ಲಿ ಆಸಕ್ತಿ ಉಳ್ಳವರಾಗಿರುತ್ತಾರೆ. ಮಕ್ಕಳು ತಮ್ಮ ಸ್ವಂತ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆಗಳನ್ನು ನೀಡುವುದು ಅಗತ್ಯವಿದೆ. ಶಾಲಾ ಪರಿಸರದಿಂದಲೇ ಮಕ್ಕಳಿಗೆ ಕಲಾತ್ಮಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದರೇ ಉತ್ತಮ ಕಲಾವಿದರಾಗಿ ಕಲಾ ಕ್ಷೇತ್ರಕ್ಕೆ ಕೊಡುಗೆ ನೀಡಲಿದ್ದಾರೆ ಎಂದರು.
ಜಿಲ್ಲೆಯ ವಿವಿಧ ತಾಲೂಕಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ 178 ಸ್ಪರ್ಧಾಳುಗಳು ಜಿಲ್ಲಾ ಮಟ್ಟದ ವೇದಿಕೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.ಹೊಸಪೇಟೆ ಬಿಇಒ ಶೇಖರಪ್ಪ ಹೊರಪೇಟೆ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಶಿವಾನಂದ, ಗ್ರಾಮೀಣ ಠಾಣೆ ಪಿಐ ಗುರುರಾಜ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಅಯ್ಯಪ್ಪ, ಮಾರ್ಕಂಡೇಶ್ವರ ಶಾಲೆಯ ಅಧ್ಯಕ್ಷ ಬಿ.ಜಯರಾಮ್, ಎನ್ಸಿಸಿ ನಿವೃತ್ತ ವಿಭಾಗಾಧಿಕಾರಿ ಗಿರೀಶ್, ಜಿಲ್ಲಾ ಪ್ರೌಢಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷೆ ಅಕ್ಕಮಹಾದೇವಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಪ್ಪ, ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಶಿಕ್ಷಣಾಧಿಕಾರಿ ಭಜಂತ್ರಿ ಸ್ವಾಗತಿಸಿದರು. ಜಿಲ್ಲಾ ಪ್ರತಿಭಾ ಕಾರಂಜಿ ಹಾಗು ಕಲೋತ್ಸವ ಕಾರ್ಯಕ್ರಮದ ನೋಡಲ್ ಅಧಿಕಾರಿ ಕೆಎಚ್ಎಂ ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಷಯ ಪರಿವೀಕ್ಷಕ ಬಸಂತಯ್ಯ ಹಿರೇಮಠ, ಶಿಕ್ಷಕರಾದ ಜಿ.ಎಂ.ಪ್ರದೀಪ್ ಕುಮಾರ್ ಹಾಗೂ ನಾಗರಾಜ್ ನಿರ್ವಹಿಸಿದರು. ಹಾಗೂ ಸ್ಪರ್ಧೆಯ ನಿರ್ಣಾಯಕರಾಗಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.