ಸಾಹಿತ್ಯಕ್ಕೆ ಕಮಲಾ ಹಂಪನಾ ಅನನ್ಯ ಕೊಡುಗೆ:ಮಡ್ಡೀಕೆರೆ ಗೋಪಾಲ್

| Published : Jun 26 2024, 12:37 AM IST

ಸಾಹಿತ್ಯಕ್ಕೆ ಕಮಲಾ ಹಂಪನಾ ಅನನ್ಯ ಕೊಡುಗೆ:ಮಡ್ಡೀಕೆರೆ ಗೋಪಾಲ್
Share this Article
  • FB
  • TW
  • Linkdin
  • Email

ಸಾರಾಂಶ

ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು

ಕನ್ನಡಪ್ರಭ ವಾರ್ತೆ ಮೈಸೂರು

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ಕಮಲಾ ಹಂಪನಾ ಅವರ ಕೊಡುಗೆ ಅನನ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ತಿಳಿಸಿದರು.

ಗಾಂಧಿನಗರದಲ್ಲಿರುವ ಉರಿಲಿಂಗಿ ಪೆದ್ದೀಶ್ವರ ಮಠದಲ್ಲಿ ಜೈ ಭೀಮ್ ಜನಸ್ಪಂದನ ವೇದಿಕೆಯು ಮಂಗಳವಾರ ಆಯೋಜಿಸಿದ್ದ ನಾಡೋಜ ಕಮಲಾ ಹಂಪನಾ ನುಡಿನಮನ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಕಮಲಾ ಹಂಪನಾ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದರು.

ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು. ಸ್ತ್ರೀವಾದಿ ನೆಲೆಯಲ್ಲಿ ವಿಮರ್ಶೆ, ಮಹಿಳೆಯರನ್ನು ಕುರಿತ ವೈಚಾರಿಕ ಬರಹಗಳೊಂದಿಗೆ ಕನ್ನಡ ಮಹಿಳಾ ಸಾಹಿತ್ಯ ವಿಸ್ತರಿಸಿದರು. ಕಮಲಾ ಹಂಪನಾ ಅವರ ಕನ್ನಡ ಸಾಹಿತ್ಯ ಸಂಶೋಧನೆ ಮತ್ತು ಚಿಂತನೆಗಳಿಗೆ ಅವರಿಗೆ ಕಲಿಸಿದ ದೊಡ್ಡ ಗುರುಪರಂಪರೆ ಪ್ರೇರಣೆ ಮತ್ತು ಸ್ಫೂರ್ತಿಯಾಗಿತ್ತು ಎಂದು ಅವರು ಹೇಳಿದರು.

ಹಲವು ಕೃತಿ ರಚನ:ೆಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಡಾ.ವೈ.ಡಿ. ರಾಜಣ್ಣ ಮಾತನಾಡಿ, ಕಮಲಾಪ್ರಿಯ ಕಾವ್ಯನಾಮದ ಮೂಲಕ ಹಲವು ಸೃಜನಶೀಲ ಕೃತಿಗಳನ್ನು ಬರೆದ ಕಮಲಾ ಹಂಪನಾ ಅವರು, ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಕಥಾ ಸಂಕಲನಗಳು, ವಿಮರ್ಶಾ ಕೃತಿಗಳು, ಸಂಶೋಧನಾ ಗ್ರಂಥಗಳು, ಅನುವಾದಗಳು, ನಾಟಕ ರೂಪಕಗಳು, ಕಾದಂಬರಿಗಳನ್ನು ಬರೆದಿದ್ದಾರೆ. ಅವರ ಸಾಧನೆ ಗುರುತಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ. ಮೂಡುಬಿದಿರೆಯಲ್ಲಿ ನಡೆದ 71ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಎಂದು ಸ್ಮರಿಸಿದರು.

ಸಾಹಿತಿ ಡಾ. ಲೀಲಾ ಪ್ರಕಾಶ್ ಮಾತನಾಡಿ, ಜೈನ ಧರ್ಮವು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಪ್ರಧಾನ್ಯತೆ ಇದೆ. ಕಮಲಾ ಹಂಪನಾ ಅವರು ಜೈನ ಧರ್ಮ ಮತ್ತು ಸಾಹಿತ್ಯವನ್ನು ಗಂಭೀರವಾಗಿ ಅಧ್ಯಯನ ಮಾಡಿದವರು ಎಂದರು.

ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಚೇತನ್ ಕಾಂತರಾಜ್, ಕರ್ನಾಟಕ ಭೀಮ ಸೇನೆ ಸಂಘಟನಾ ರಾಜ್ಯ ಕಾರ್ಯದರ್ಶಿ ಎಂ. ಮಂಜುನಾಥ್, ಮುಖಂಡರಾದ ಪ್ರಮೋದ್, ಪ್ರಕಾಶ್, ನಾಗಣ್ಣ ,ರಾಮ್ ಸಿಂಗ್, ದೇವೇಂದ್ರ, ರಾಜೇಶ್, ವರುಣ ಮಹದೇವ ಮೊದಲಾದವರು ಇದ್ದರು.