ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಪಿಲಿಕುಳ ನಿಸರ್ಗಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ- ತುಳುನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲು ಸ್ಪೀಕರ್ ಯು.ಟಿ. ಖಾದರ್ ಸಲಹೆ ನೀಡಿದ್ದಾರೆ.ಬೆಂಗಳೂರಿನ ವಿಧಾನಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ಪಿಲಿಕುಳ ಕಂಬಳ, ತುಳುನಾಡ ಉತ್ಸವದ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಗಳ ಸಭೆಯಲ್ಲಿ ಅವರು ಮಾತನಾಡಿದರು.
ಪಿಲಿಕುಳದಲ್ಲಿ ಕೆಲವೊಂದು ಶಾಶ್ವತ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿಪಡಿಸಲು ಸಂಘಟಿತ ಪ್ರಯತ್ನನಡೆಸಲು ತುಳುನಾಡು ಉತ್ಸವದ ಮೂಲಕ ತುಳುನಾಡಿನ ಕಂಬಳ ಸೇರಿದಂತೆ ಕಲೆ, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನಗಳು, ಕೃಷಿ ಮೇಳಗಳು, ಆಹಾರ ಮೇಳಗಳ ಮೂಲಕ ಚಾಲನೆ ನೀಡುವ ಚಿಂತನೆ ಇದೆ. ಈ ಬಗ್ಗೆ ಸಂಸದರು,ಶಾಸಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಮಾಲೋಚನೆ, ಸಲಹೆ, ಸೂಚನೆಗಳನ್ನು ಪಡೆದು ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ ಕಾರ್ಯಯೋಜನೆ ರೂಪಿಸಲು ಯು.ಟಿ.ಖಾದರ್ ಸಲಹೆ ನೀಡಿದರು.
ತುಳುನಾಡು ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ, ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್ನಲ್ಲಿ ಈ ಉತ್ಸವಕ್ಕೆ ಅನುದಾನ ನಿಗದಿಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು ಎಂದು ಅವರು ಹೇಳಿದರು.ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಿಲಿಕುಳದ ಅಭಿವೃದ್ಧಿ ಹಾಗೂ ಜಿಲ್ಲೆಯ ಅಭಿವೃದ್ಧಿಯ
ನಿಟ್ಟಿನಲ್ಲಿ ಒಳ್ಳೆಯ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಶಾಸಕರು, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆ ಕರೆಯುವುದಾಗಿ ತಿಳಿಸಿದರು.ದ.ಕ. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು.
ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ಡಾ.ಮಂಜುನಾಥ ಭಂಡಾರಿ, ಐವನ್ ಡಿಸೋಜ, ಭೋಜೇಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.